Dailyhunt Logo
  • Light mode
    Follow system
    Dark mode
    • Play Story
    • App Story
ಕೃಷಿ ಕಾಯ್ದೆಗಳ ವಿರುದ್ಧ ಮಾನವ ಸರಪಳಿ ನಿರ್ಮಿಸಿ ಪ್ರತಿಭಟಿಸಲು ಆರ್‌ಜೆಡಿ ನಿರ್ಧಾರ

ಕೃಷಿ ಕಾಯ್ದೆಗಳ ವಿರುದ್ಧ ಮಾನವ ಸರಪಳಿ ನಿರ್ಮಿಸಿ ಪ್ರತಿಭಟಿಸಲು ಆರ್‌ಜೆಡಿ ನಿರ್ಧಾರ

ಪಟ್ನಾ: ರಾಷ್ಟ್ರೀಯ ಜನತಾದಳ (ಆರ್‌ಜೆಡಿ) ನೇತೃತ್ವದ ಮಹಾ ಮೈತ್ರಿಕೂಟವು ಜನವರಿ 30 ರಂದು ಬಿಹಾರದಾದ್ಯಂತ ಬೃಹತ್ ಮಾನವ ಸರಪಳಿ ನಿರ್ಮಿಸಿ ಕೇಂದ್ರದ ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟಿಸಲು ನಿರ್ಧರಿಸಿದೆ.

ಕಾಂಗ್ರೆಸ್, ಸಿಪಿಐ, ಸಿಪಿಎಂ ಸೇರಿದಂತೆ ಮಹಾ ಮೈತ್ರಿಕೂಟದ ಎಲ್ಲಾ ಮಿತ್ರರಾಷ್ಟ್ರಗಳು ಈ ಪ್ರತಿಭಟನೆಯಲ್ಲಿ ಭಾಗವಹಿಸಲು ತೀರ್ಮಾನಿಸಿವೆ.

ಮಾನವ ಸರಪಳಿ ಆಂದೋಲನಕ್ಕಾಗಿ ಪಕ್ಷದ ಕಾರ್ಯಕರ್ತರನ್ನು ಸಜ್ಜುಗೊಳಿಸಲು ಆರ್‌ಜೆಡಿ ರಾಜ್ಯಾಧ್ಯಕ್ಷ ಜಗದಾನಂದ್ ಸಿಂಗ್ ಈಗಾಗಲೇ ಪಕ್ಷದ ಜಿಲ್ಲಾಧ್ಯಕ್ಷರಿಗೆ ನಿರ್ದೇಶನ ನೀಡಿದ್ದಾರೆ. ಮಾನವ ಸರಪಳಿ ರಚನೆಗೆ ಆಯಾ ಜಿಲ್ಲೆಗಳಲ್ಲಿನ ಸ್ಥಳಗಳನ್ನು ಅಂತಿಮಗೊಳಿಸಲು ತಿಳಿಸಲಾಗಿದೆ.

ಕೇಂದ್ರವು ಜಾರಿಗೆ ತರಲು ಹೊರಟಿರುವ ಕೃಷಿ ಕಾನೂನುಗಳ ವಿರುದ್ಧ ಈ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ.

ದೆಹಲಿಯ ಗಡಿಗಳಲ್ಲಿ ಕಳೆದ ತಿಂಗಳಿಂದ ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ಈ ಮೂಲಕ ಬೆಂಬಲ ವ್ಯಕ್ತಪಡಿಸಲಾಗುತ್ತದೆ ಎಂದು ಆರ್‌ಜೆಡಿ ತಿಳಿಸಿದೆ.

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮೂರು ಕಾಯ್ದೆಗಳ ರದ್ದತಿಗೆ ಆಗ್ರಹಿಸಿ, ಪಂಜಾಬ್, ಹರಿಯಾಣ ಮತ್ತು ಉತ್ತರ ಪ್ರದೇಶಗಳ ಸಾವಿರಾರು ರೈತರು ದೆಹಲಿಯ ಗಡಿ ಭಾಗಗಳಲ್ಲಿ ಕಳೆದ ತಿಂಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ.

Dailyhunt
Disclaimer: This content has not been generated, created or edited by Dailyhunt. Publisher: Prajavani