Dailyhunt
ಲಿಂಗಾಯತ ಸ್ವತಂತ್ರ ಧರ್ಮ ಹೋರಾಟಕ್ಕೆ ಹಿನ್ನಡೆ ಆಗಿಲ್ಲ: ಬಸವಲಿಂಗ ಪಟ್ಟದೇವರು

ಲಿಂಗಾಯತ ಸ್ವತಂತ್ರ ಧರ್ಮ ಹೋರಾಟಕ್ಕೆ ಹಿನ್ನಡೆ ಆಗಿಲ್ಲ: ಬಸವಲಿಂಗ ಪಟ್ಟದೇವರು

ಗದಗ: 'ಲಿಂಗಾಯತ ಧರ್ಮ ಎಂದೆಂದಿಗೂ ಸ್ವತಂತ್ರ ಧರ್ಮ. ಹಿಂದೆಯೂ ಇತ್ತು. ಇಂದೂ ಇದೆ. ಹಾಗೆಯೇ, ಮುಂದೆಯೂ ಇರುತ್ತದೆ. ಆದರೆ, ಅದಕ್ಕೆ ಸರ್ಕಾರದ ಮಾನ್ಯತೆ ಬೇಕಿತ್ತು. ಅದಕ್ಕೆ ಪೂರಕವಾಗಿ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್‌ದಾಸ್‌ ಅವರು ಐತಿಹಾಸಿಕ ದಾಖಲೆಗಳನ್ನು ಸರ್ಕಾರಕ್ಕೆ ಒದಗಿಸಿಕೊಟ್ಟಿದ್ದಾರೆ' ಎಂದು ಭಾಲ್ಕಿ ಹಿರೇಮಠ ಸಂಸ್ಥಾನದ ಬಸವಲಿಂಗ ಪಟ್ಟದೇವರು ಹೇಳಿದರು.

ಶನಿವಾರ ಗದುಗಿನ ತೋಂಟದಾರ್ಯ ಮಠದಲ್ಲಿ ನಡೆದ ಲಿಂಗೈಕ್ಯ ಸಿದ್ಧಲಿಂಗ ಶ್ರೀಗಳ ತೃತೀಯ ಪುಣ್ಯಸ್ಮರಣೆ 'ಮರಣವೇ ಮಹಾನವಮಿ' ಕಾರ್ಯಕ್ರಮದಲ್ಲಿ ಅವರು ಸನ್ಮಾನ ಸ್ವೀಕರಿಸಿ ಮಾತನಾಡಿದರು.

'ಲಿಂಗಾಯತ ಧರ್ಮ ಎಲ್ಲೂ ವಿಂಗಡಣೆ ಆಗಿಲ್ಲ. ಅದೇರೀತಿ, ಲಿಂಗಾಯತ ಸ್ವತಂತ್ರ ಧರ್ಮ ಹೋರಾಟಕ್ಕೆ ಹಿನ್ನಡೆಯೂ ಆಗಿಲ್ಲ. ಲಿಂಗಾಯತ ಧರ್ಮ ಮತ್ತೊಮ್ಮೆ ಬೆಳಗಲಿದೆ. ತೋಂಟದ ಸಿದ್ಧರಾಮ ಶ್ರೀಗಳ ನೇತೃತ್ವದಲ್ಲಿ ಸಂಘಟಿತ ಹೋರಾಟ ನಡೆಸಿ ಲಿಂಗಾಯತ ಸ್ವತಂತ್ರ ಧರ್ಮ ಮಾನ್ಯತೆಗೆ ಪ್ರಯತ್ನಿಸಬೇಕು' ಎಂದು ಹೇಳಿದರು.

'ಲಿಂಗಾಯತ ಸ್ವತಂತ್ರ ಧರ್ಮ ಹೋರಾಟದ ಸಂದರ್ಭದಲ್ಲಿ ಆಗಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಚ್‌.ಎನ್‌. ನಾಗಮೋಹನ್‌ದಾಸ್‌ ನೇತೃತ್ವದಲ್ಲಿ ಸಮಿತಿಯನ್ನು ನೇಮಕ ಮಾಡಿದರು. ಅದರಂತೆ ಈ ವಿಷಯದಲ್ಲಿ ಸರ್ಕಾರಕ್ಕೆ ಸ್ಪಷ್ಟ ನಿರ್ದೇಶನ ನೀಡುವಂತಹ ವರದಿಯನ್ನು ನಾಗಮೋಹನ್‌ದಾಸ್‌ ಅವರು ನೀಡಿದ್ದಾರೆ' ಎಂದು ಗದುಗಿನ ತೋಂಟದಾರ್ಯ ಮಠದ ಸಿದ್ಧರಾಮ ಸ್ವಾಮೀಜಿ ತಿಳಿಸಿದರು.

ಈ ವೇಳೆ ಮುಂಡರಗಿ- ಬೈಲೂರು ಮಠದ ನಿಜಗುಣಪ್ರಭು ತೋಂಟದಾರ್ಯ ಸ್ವಾಮೀಜಿ, ಗದಗ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಂ. ಮೌಲ್ವಿ, ಹಿರಿಯ ರಾಜಕಾರಣಿ ಎಸ್‌.ಎಸ್‌.ಪಾಟೀಲ, ವಿಧಾನ ಪರಿಷತ್‌ ಸದಸ್ಯ ಎಸ್‌.ವಿ.ಸಂಕನೂರ, ಶಿರೋಳ ಮಠದ ಗುರುಬಸವ ಸ್ವಾಮೀಜಿ, ಜಾತ್ರಾ ಮಹೋತ್ಸವ ಸಮಿತಿ ಅಧ್ಯಕ್ಷ ಅಮರೇಶ ಅಂಗಡಿ, ತೋಂಟದಾರ್ಯ ಮಠದ ಆಡಳಿತಾಧಿಕಾರಿ ಎಸ್‌.ಎಸ್‌.ಪಟ್ಟಣಶೆಟ್ಟಿ ಉಪಸ್ಥಿತರಿದ್ದರು.

Dailyhunt
Disclaimer: This content has not been generated, created or edited by Dailyhunt. Publisher: Prajavani