Dailyhunt
ಮಕ್ಕಳಲ್ಲಿ ಸೃಜನಶೀಲತೆ ಬೆಳೆಸಿ: ಸಾಹಿತಿ ವಿಜಯ್ ರಾಂಪುರ

ಮಕ್ಕಳಲ್ಲಿ ಸೃಜನಶೀಲತೆ ಬೆಳೆಸಿ: ಸಾಹಿತಿ ವಿಜಯ್ ರಾಂಪುರ

ಚನ್ನಪಟ್ಟಣ: ಕುತೂಹಲ ಮತ್ತು ಆಸಕ್ತಿ ಕೆರಳಿಸುವ ಕಥೆಗಳನ್ನು ಹೇಳುವ ಮೂಲಕ ಮಕ್ಕಳಲ್ಲಿ ಸೃಜನಶೀಲ ಮನೋಭಾವವನ್ನು ಹುಟ್ಟು ಹಾಕಬೇಕು ಎಂದು ಸಾಹಿತಿ ವಿಜಯ್ ರಾಂಪುರ ತಿಳಿಸಿದರು.

ತಾಲ್ಲೂಕಿನ ರಾಂಪುರ ಗ್ರಾಮ ಪಂಚಾಯಿತಿಯ ಗ್ರಂಥಾಲಯದ ಆವರಣದಲ್ಲಿ ಸಾರ್ವಜನಿಕ ಗ್ರಂಥಾಲಯ ಇಲಾಖೆಯಿಂದ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ 'ಓದುವ ಬೆಳಕು' ಕಾರ್ಯಕ್ರಮದಲ್ಲಿ ಮಾತನಾಡಿ, ಜನಪದ ಕಥೆಗಳು ಮಕ್ಕಳಲ್ಲಿ ಓದುವ ಹವ್ಯಾಸವನ್ನು ಹುಟ್ಟು ಹಾಕುತ್ತವೆ ಎಂದರು.

ಮಕ್ಕಳನ್ನು ಮೊಬೈಲ್ ಗೇಮ್ ಹಾಗೂ ದೂರದರ್ಶನದಿಂದ ದೂರವಿಡಲು ಇಂತಹ ಕಾರ್ಯಕ್ರಮ ಸಹಕಾರಿ. ಕೋವಿಡ್‌ನಿಂದಾಗಿ ಮಕ್ಕಳ ಶೈಕ್ಷಣಿಕ ಬದುಕಿಗೆ ಹಿನ್ನೆಡೆಯಾಗಿದೆ. ಸರ್ಕಾರ ಜಾರಿಗೆ ತಂದಿರುವ ಓದುವ ಬೆಳಕು ಯೋಜನೆ ಪೋಷಕರು ಹಾಗೂ ಮಕ್ಕಳಲ್ಲಿ ಹೊಸ ಸಂಚಲನ ಮೂಡಿಸುತ್ತಿದೆ ಎಂದರು.

ಯುವಕವಿ ಅಬ್ಬೂರು ಶ್ರೀನಿವಾಸ್ ಮಾತನಾಡಿ, ಉತ್ತಮ ಗುಣಮಟ್ಟದ ಭವಿಷ್ಯ ಕಟ್ಟಿಕೊಳ್ಳಲು ಸಾಹಿತ್ಯ ಸಹಕಾರಿ. ಪೋಷಕರು ಮಕ್ಕಳಿಗೆ ಪುಸ್ತಕಗಳನ್ನು ತಂದುಕೊಡುವ ಹಾಗೂ ಅವರಲ್ಲಿ ಸಾಹಿತ್ಯಾಭಿರುಚಿ ಮೂಡಿಸುವ ಪರಿಪಾಠ ಬೆಳೆಸಿಕೊಳ್ಳಬೇಕು ಎಂದರು.

ಗ್ರಂಥಾಲಯ ಮೇಲ್ವಿಚಾರಕ ವೆಂಕಟೇಶ್, ಮಾಜಿ ಸೈನಿಕ ಹನುಮಯ್ಯ, ಮುಖಂಡರಾದ ಪದ್ಮರಾಜು, ಸಂಜೀವಿ ರತ್ನ ಹಾಜರಿದ್ದರು. ಮಕ್ಕಳಿಗೆ ಜನಪದ ಕಥೆಗಳನ್ನು ಹೇಳಲಾಯಿತು.

Dailyhunt
Disclaimer: This content has not been generated, created or edited by Dailyhunt. Publisher: Prajavani