ಮಹದೇಶ್ವರ ಬೆಟ್ಟ: ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯ ಪ್ರಗತಿ ವೀಕ್ಷಿಸಲು ಹಾಗೂ ಎಸ್ಐಆರ್ ಪ್ರಕ್ರಿಯೆ ಕುರಿತು ಜಾಗೃತಿ ಮೂಡಿಸಲು ಜಿಲ್ಲಾಧಿಕಾರಿ ಶ್ರೀರೂಪಾ ಶುಕ್ರವಾರ ಮಹದೇಶ್ವರ ಬೆಟ್ಟ ವ್ಯಾಪ್ತಿಯ ಹಲವು ಗ್ರಾಮಗಳಿಗೆ ಭೇಟಿ ನೀಡಿದರು.
ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೋಣನಕೆರೆ, ಮೆಂದಾರೆ, ಇಂಡಿಗನತ್ತ ಗ್ರಾಮಗಳಿಗೆ ತೆರಳಿದ ಜಿಲ್ಲಾಧಿಕಾರಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ವೀಕ್ಷಿಸಿದರು.
ಈ ವೇಳೆ ಬೂತ್ ಮಟ್ಟದ ಅಧಿಕಾರಿಗಳಿಂದ ಮಾಹಿತಿ ಪಡೆದು ಮನೆ ಮನೆಗಳಿಗೆ ತೆರಳಿ ಗಣತಿ ನಮೂನೆ ಅರ್ಜಿಗಳನ್ನು ವಿತರಿಸಿದರು.
ಈ ಸಂದರ್ಭ ಮಾತನಾಡಿ, ಅರ್ಹ ಮತದಾರರು ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂಬ ಉದ್ದೇಶದಿಂದ ಕೇಂದ್ರ ಚುನಾವಣಾ ಆಯೋಗ ಎಸ್ಐಆರ್ ಪ್ರಕ್ರಿಯೆ ಆರಂಭಿಸಿದೆ. ನಾಗರಿಕರು ಸಹಕಾರ ನೀಡಬೇಕು. ಮತದಾರರ ಪಟ್ಟಿಯಲ್ಲಿ ಹೆಸರು ಖಾತ್ರಿಪಡಿಸಿಕೊಳ್ಳಬೇಕು ಎಂದು ಮನವಿ ಮಾಡಿದರು.
ಇದೇ ವೇಳೆ ಇಂಡಿಗನತ್ತ ಗ್ರಾಮಸ್ಥರ ಜೊತೆ ಚರ್ಚೆ, ಸಂವಾದ ನಡೆಸಿದ ಜಿಲ್ಲಾಧಿಕಾರಿ ಮೂಲಸೌಕರ್ಯ ಸಹಿತ ಸ್ಥಳೀಯ ಸಮಸ್ಯೆಗಳನ್ನು ಆಲಿಸಿದರು.
ಈ ಸಂದರ್ಭ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎ.ಈ ರಘು, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಎಚ್.ಎಸ್.ಬಿಂದ್ಯಾ, ತಹಶೀಲ್ದಾರ್ ಚೈತ್ರಾ, ರಾಜಸ್ವ ನಿರೀಕ್ಷಕ ಶಿವಕುಮಾರ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಕಿರಣ್ ಕುಮಾರ್ ಇದ್ದರು.
ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260704-37-1727080675

