ಕಲಬುರಗಿ: ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಭಯೋತ್ಪಾದಕ ಎಂಬ ಹೇಳಿಕೆ ನೀಡಿದ್ದು, ಕೂಡಲೇ ತಮ್ಮ ಮಾತನ್ನು ಹಿಂಪಡೆದು ಕ್ಷಮೆ ಕೋರಬೇಕು ಎಂದು ಒತ್ತಾಯಿಸಿ ಬಿಜೆಪಿ ಜಿಲ್ಲಾ ಘಟಕದ ಕಾರ್ಯಕರ್ತರು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.
ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪಕ್ಷದ ರಾಜ್ಯ ಕಾರ್ಯದರ್ಶಿ ಬಸವರಾಜ ಮತ್ತಿಮಡು, ಮಾಜಿ ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ, ಪಕ್ಷದ ನಗರ ಘಟಕದ ಅಧ್ಯಕ್ಷ ಚಂದು ಪಾಟೀಲ, ಗ್ರಾಮಾಂತರ ಘಟಕದ ಅಧ್ಯಕ್ಷ ಅಶೋಕ ಬಗಲಿ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಪಕ್ಷದ ಕಾರ್ಯಕರ್ತರು ಮೆರವಣಿಗೆ ನಡೆಸಿದರು.
'ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿ ಅವರನ್ನು ತಮಿಳುನಾಡಿನ ಚೆನ್ನೈನಲ್ಲಿ ಭಯೋತ್ಪಾದಕ ಎಂದು ಹೀಯಾಳಿಸುವ ಮೂಲಕ ಅವಮಾನ ಮಾಡಿದ್ದಾರೆ. ಆ ನಂತರವೂ ಹಾರಿಕೆಯ ಹೇಳಿಕೆ ಕೊಟ್ಟಿದ್ದಾರೆ. ತಮ್ಮ ತಪ್ಪಿಗಾಗಿ ಖರ್ಗೆ ಅವರು ದೇಶದ ಜನತೆಯೆ ಕ್ಷಮೆ ಕೇಳಬೇಕು' ಎಂದು ಒತ್ತಾಯಿಸಿದರು.
ಅಲ್ಲದೇ, ದೇಶದ ಮಹಿಳೆಯರಿಗೆ ಸಂಸತ್ನಲ್ಲಿ ಶೇ 33ರಷ್ಟು ಮೀಸಲಾತಿಯನ್ನು ನೀಡುವ ಉದ್ದೇಶದಿಂದ ಪ್ರಧಾನಿಯವರು 'ನಾರಿಶಕ್ತಿ ವಂದನ್' ಮಸೂದೆಯನ್ನು ಮಂಡಿಸಿದ್ದರು. ಆದರೆ, ಮಹಿಳೆಯರಿಗೆ ಅಧಿಕಾರ ಕೊಡಲು ಸದಾ ಹಿಂಜರಿಯುವ ಕಾಂಗ್ರೆಸ್ ಪಕ್ಷವು ಈ ಮಸೂದೆಯನ್ನು ಸೋಲಿಸುವ ಮೂಲಕ ಮಹಿಳಾ ವಿರೋಧಿ ನೀತಿಯನ್ನು ಅನುಸರಿಸಿದೆ. ಹೀಗಾಗಿ, ದೇಶದ ಮಹಿಳೆಯರು ಮುಂಬರುವ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸಬೇಕು' ಎಂದರು.
ಪ್ರತಿಭಟನೆಯಲ್ಲಿ ಮಾಜಿ ಸಚಿವ ಬಾಬುರಾವ್ ಚವ್ಹಾಣ್, ವಿಧಾನಪರಿಷತ್ ಮಾಜಿ ಸದಸ್ಯ ಅಮರನಾಥ ಪಾಟೀಲ, ಮುಖಂಡರಾದ ಶಿವರಾಜ ಪಾಟೀಲ ರದ್ದೇವಾಡಗಿ, ನಿತಿನ್ ಗುತ್ತೇದಾರ, ಶರಣಪ್ಪ ತಳವಾರ್, ಅವ್ವಣ್ಣ ಮ್ಯಾಕೇರಿ, ಲಿಂಗರಾಜ ಬಿರಾದಾರ, ಬಸವರಾಜ ಬೆನ್ನೂರಕರ್, ಶೋಭಾ ಬಾಣಿ, ಉಮೇಶ ಪಾಟೀಲ, ಮಹಾದೇವ ಬೆಳಮಗಿ, ಶಿವಯೋಗಿ ನಾಗನಹಳ್ಳಿ, ಮಹಿಳಾ ಮೋರ್ಚಾ ಅಧ್ಯಕ್ಷೆ ಗೌರಿ ಚಿಚಕೋಟಿ, ಶೋಭಾ ಬಾಗೇವಾಡಿ, ಶಶಿಕಲಾ ತೆಂಗಳಿ, ಡಾ. ಸುಧಾ ಹಾಲಕೈ, ಯುವ ಮೋರ್ಚಾ ಅಧ್ಯಕ್ಷ ವೀರೇಂದ್ರ ಪಾಟೀಲ ರಾಯಕೋಡ, ಮಹೇಂದ್ರ ಪೂಜಾರಿ, ನಗರ ಯುವ ಮೋರ್ಚಾ ಅಧ್ಯಕ್ಷ ಮಹೇಶ ಚವ್ಹಾಣ್ ಸೇರಿದಂತೆ ಇತರರು ಭಾಗವಹಿಸಿದ್ದರು.

