ಚಿತ್ರದುರ್ಗ: ಕುಡಿಯುವ ನೀರು, ವಿದ್ಯುತ್, ರಸ್ತೆ ಹಾಗೂ ಚರಂಡಿ ವ್ಯವಸ್ಥೆ ಕಲ್ಪಿಸುವ ಜವಾಬ್ದಾರಿ ಶಾಸಕನಾಗಿ ನನ್ನ ಮೇಲಿದೆ. ಆದ್ದರಿಂದ ಗ್ರಾಮಗಳಲ್ಲಿ ಮೊದಲ ಆದ್ಯತೆಯಾಗಿ ಮೂಲ ಸೌಲಭ್ಯ ಒದಗಿಸಲು ಬದ್ಧನಾಗಿದ್ದೇನೆ' ಎಂದು ಕೆ.ಸಿ.ವೀರೇಂದ್ರ ತಿಳಿಸಿದರು.
ತಾಲ್ಲೂಕಿನ ಗೋಡಬನಹಾಳ್, ಚೆನ್ನಯ್ಯನಟ್ಟಿ ಹಾಗೂ ಚಿಕ್ಕಪುರ ಗೊಲ್ಲರಹಟ್ಟಿ ಗ್ರಾಮಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.
'ಕ್ಷೇತ್ರದ ಯಾವುದೇ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಲಾಗಿದೆ. ಅಲ್ಲದೆ, ಬಹುತೇಕ ಗ್ರಾಮಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳ ಕೊರತೆ ಇರುವುದನ್ನು ಗಮನಿಸಿ ಅವುಗಳ ನಿರ್ಮಾಣಕ್ಕೆ ಚಾಲನೆ ನೀಡಲಾಗಿದೆ. ಕ್ಷೇತ್ರದ ಜನರಿಗೆ ಅತ್ಯವಶ್ಯಕವಾದ ಅಭಿವೃದ್ಧಿ ಕಾಮಗಾರಿಗಳಿಗೆ ಮೊದಲ ಆದ್ಯತೆ ನೀಡಲಾಗುವುದು' ಎಂದರು.
'ಕ್ಷೇತ್ರದ ಬಹುತೇಕ ಗ್ರಾಮಗಳಲ್ಲಿ ಈಗಾಗಲೇ ಸಿಸಿ ರಸ್ತೆ, ಕುಡಿಯುವ ನೀರಿನ ಬೋರ್ವೆಲ್ಗಳು, ವಿದ್ಯುತ್ ಸಂಪರ್ಕ ಹಾಗೂ ಚರಂಡಿ ನಿರ್ಮಾಣ ಕಾಮಗಾರಿಗಳು ಪ್ರಗತಿಯಲ್ಲಿವೆ. ಕ್ಷೇತ್ರದ ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡಲಾಗುತ್ತಿದೆ. ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ ಬಾಕಿ ಉಳಿದಿರುವ ಅಭಿವೃದ್ಧಿ ಕಾಮಗಾರಿಗಳ ಪಟ್ಟಿಯನ್ನು ಸಿದ್ಧಪಡಿಸಲಾಗುವುದು' ಎಂದು ಹೇಳಿದರು.
ಚಿತ್ರದುರ್ಗ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಶಿವಣ್ಣ, ಕೆಡಿಪಿ ಸದಸ್ಯ ಸಂತೋಷ್, ಎಂಜಿನಿಯರ್ ಶಿವಮೂರ್ತಿ, ಲಕ್ಷ್ಮೀಸಾಗರ ಗ್ರಾಮ ಪಂಚಾಯಿತಿ ಪಿಡಿಒ ಜೈಶೀಲಾ, ಕಾಂಗ್ರೆಸ್ ಮುಖಂಡರಾದ ಮಂಜಣ್ಣ, ಚಿತ್ತಪ್ಪ, ರಂಗಸ್ವಾಮಿ, ಹನುಮಂತಪ್ಪ, ಕೃಷ್ಣಪ್ಪ, ನಾಗರಾಜ್ ಇದ್ದರು.
ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260704-44-1120074220

