Dailyhunt

ನಿಯಮ ಮೀರಿದ ಕಟ್ಟಡಗಳ ತೆರವಿಗೆ ಸಚಿವ ನಾರಾಯಣಗೌಡ ಸೂಚನೆ

ಬೆಂಗಳೂರು: ಜಕ್ಕೂರು ಏರೋಡ್ರಮ್‌ನ ಐದು ಕಿ.ಮೀ ವ್ಯಾಪ್ತಿಯಲ್ಲಿ ನಿಯಮ ಮೀರಿ 45 ಮೀಟರ್‌ಗಿಂತಲೂ ಎತ್ತರ ನಿರ್ಮಿಸಿರುವ ಕಟ್ಟಡಗಳನ್ನು ತೆರವುಗೊಳಿಸಲು ಬಿಬಿಎಂಪಿ ಅಧಿಕಾರಿಗಳಿಗೆ ಯುವಜನ ಸಬಲೀಕರಣ ಮತ್ತು ಕ್ರೀಡಾ ಸಚಿವ ನಾರಾಯಣಗೌಡ ಸೂಚನೆ ನೀಡಿದರು.

ವಿಕಾಸಸೌಧದಲ್ಲಿ ಗುರುವಾರ ನಡೆದ ಸಭೆಯಲ್ಲಿ ಈ ನಿರ್ದೇಶನ ನೀಡಿರುವ ಅವರು, ಡಿಜಿಸಿಎ ನಿಯಮ ಮೀರಿ, ಪರವಾನಗಿ ಇಲ್ಲದೇ ಕಟ್ಟಡಗಳನ್ನು ನಿರ್ಮಿಸಿದ್ದಾರೆ ಎಂದರು.

ಈ ಕುರಿತು ಸಮೀಕ್ಷೆ ನಡೆಸಿದ್ದು, 45 ಮೀಟರ್‌ಗಿಂತ ಹೆಚ್ಚು ಎತ್ತರದ 15 ಕಟ್ಟಡಗಳು ಇರುವುದು ಬೆಳಕಿಗೆ ಬಂದಿದೆ. ಅವುಗಳನ್ನು ತೆರವುಗೊಳಿಸಲು ತಕ್ಷಣವೇ ಕ್ರಮ ತೆಗೆದುಕೊಳ್ಳಬೇಕು
ಎಂದರು.

ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ ನಡೆಸಿರುವ ಸಮೀಕ್ಷೆಯಲ್ಲಿ 11 ಕಟ್ಟಡಗಳು ಮತ್ತು ವೈಮಾನಿಕ ತರಬೇತಿ ಶಾಲೆಯಿಂದ ನಡೆಸಿದ ಸಮೀಕ್ಷೆಯಲ್ಲಿ 4 ಕಟ್ಟಡಗಳು ನಿಯಮ ಉಲ್ಲಂಘಿಸಿದ್ದು ಪತ್ತೆಯಾಗಿವೆ.

ಕೆಲವರು ಸಮೀಕ್ಷೆ ನಡೆಸಲು ಅಸಹಕಾರ ತೋರಿಸಿದ್ದಾರೆ. ಹೀಗಾಗಿ ಮತ್ತೊಮ್ಮೆ ಸಮೀಕ್ಷೆ ನಡೆಸಲು ಸೂಚನೆ ನೀಡಲಾಗಿದೆ ಎಂದರು.

ಏರೋಡ್ರಮ್‌ನಲ್ಲಿ ಲ್ಯಾಂಡಿಂಗ್‌ ಮತ್ತು ಪಾರ್ಕಿಂಗ್‌ ಬಾಡಿಗೆ ಬಾಕಿ ನೀಡದ ಕಂಪನಿಗಳ ಆಸ್ತಿಯನ್ನು ಜಪ್ತಿ ಮಾಡಲಾಗಿದೆ ಎಂದು ಅಧಿಕಾರಿಗಳು ಸಚಿವರಿಗೆ ಮಾಹಿತಿ ನೀಡಿದರು.

ಈ ಎಲ್ಲ ಕಂಪನಿಗಳಿಂದ ಸುಮಾರು ₹5 ಕೋಟಿ ಬಾಡಿಗೆ ಹಣ ಬಾಕಿ ಇದೆ. ಬಾಕಿ ಹಣ ಪಾವತಿಸಲು ನೀಡಿರುವ ಕೊನೆಯ ನೋಟಿಸ್ ಅವಧಿಯೂ ಮುಗಿದಿದೆ. ಕೆಲವು ಕಂಪನಿಗಳು ಸ್ವಲ್ಪ ಪ್ರಮಾಣದಲ್ಲಿ ಬಾಕಿ ಪಾವತಿಸಿದ್ದಾರೆ. ಎಲ್ಲ ಕಂಪನಿಗಳು ಹಣ ಪಾವತಿಸಬೇಕು. ಅದಕ್ಕಾಗಿ ಸಂಸ್ಥೆಗಳ ಮುಖ್ಯಸ್ಥರ ಜತೆ ಮಾತುಕತೆ ನಡೆಸುವಂತೆಯೂ ಅಧಿಕಾರಿಗಳಿಗೆ ಸೂಚಿಸಿದರು.

Dailyhunt
Disclaimer: This content has not been generated, created or edited by Dailyhunt. Publisher: Prajavani