ರಾಯಚೂರು: ತಾಲ್ಲೂಕಿನ ಬಿಜನಗೇರಾ ಗ್ರಾಮದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಧ್ಯಾಹ್ನದ ಉಪಾಹಾರ (ಪಿ.ಎಂ. ಪೋಷಣ್) ಯೋಜನೆಯ ಅನುಷ್ಠಾನದಲ್ಲಿ ಹಲವು ಗಂಭೀರ ಲೋಪಗಳು ಕಂಡುಬಂದ ಹಿನ್ನೆಲೆಯಲ್ಲಿ ಶಾಲೆಯ ಅಂದಿನ ಮುಖ್ಯ ಶಿಕ್ಷಕರಿಗೆ ಕಾರಣ ಕೇಳಿ ನೋಟಿಸ್ ಜಾರಿಗೊಳಿಸಲಾಗಿದೆ.
ಶಿಕ್ಷಣ ಇಲಾಖೆಯ ಅಧಿಕಾರಿಗಳು 2026ರ ಜೂನ್ 1 ಹಾಗೂ ಜೂನ್ 6ರಂದು ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ವೇಳೆ ವಿವಿಧ ಆಡಳಿತಾತ್ಮಕ ಹಾಗೂ ಹಣಕಾಸು ಸಂಬಂಧಿತ ನ್ಯೂನತೆಗಳು ಬೆಳಕಿಗೆ ಬಂದಿವೆ.
ಪರಿಶೀಲನೆ ವೇಳೆ ಜೂನ್ 1ರಂದು ಶಾಲೆಯಲ್ಲಿ ಮಕ್ಕಳ ಹಾಜರಾತಿ ಕೇವಲ ಶೇ 60ರಷ್ಟಿದ್ದರೂ ಶೇ 100ರಷ್ಟು ಮಕ್ಕಳಿಗೆ ಬಾಳೆಹಣ್ಣು ಖರೀದಿಸಿರುವುದು ದಾಖಲೆಗಳಲ್ಲಿ ಕಂಡುಬಂದಿದೆ. ಅದೇ ದಿನ ಯಾವುದೇ ವಿದ್ಯಾರ್ಥಿಗೆ ಮೊಟ್ಟೆ ವಿತರಿಸದಿರುವುದು, ಕ್ಯಾಶ್ ಬುಕ್ ಸರಿಯಾಗಿ ನಿರ್ವಹಿಸದಿರುವುದು, ವೋಚರ್ ಸಮರ್ಪಕವಾಗಿ ಸಂಗ್ರಹಿಸದೇ ಇರುವುದು, ಹಾಜರಾತಿಯಲ್ಲಿ ಲೋಪ ಮತ್ತಿತರ ಲೋಪಗಳು ಕಂಡುಬಂದಿದ್ದು, ನಿಗದಿತ ಅವಧಿಯಲ್ಲಿ ಸಮರ್ಪಕ ಉತ್ತರ ಸಲ್ಲಿಸದಿದ್ದಲ್ಲಿ ಶಿಸ್ತು ಕ್ರಮ ಕೈಗೊಳ್ಳಲು ಜಿ.ಪಂ. ಸಿಇಒಗೆ ಶಿಫಾರಸು ಮಾಡಲಾಗುವುದು ಎಂದು ಪಿ.ಎಂ. ಪೋಷಣ್ ಶಕ್ತಿ ನಿರ್ಮಾಣ್ ಯೋಜನೆಯ ಜಿಲ್ಲಾ ಶಿಕ್ಷಣಾಧಿಕಾರಿಗಳು ತಿಳಿಸಿದ್ದಾರೆ.
ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260706-32-1662997386

