ರಾಯಚೂರು: ರಾಜ್ಯ ಸರ್ಕಾರದಲ್ಲಿ 50 ಸಾವಿರಕ್ಕೂ ಅಧಿಕ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಆರಂಭವಾಗಿರುವ ಹಿನ್ನೆಲೆಯಲ್ಲಿ, ಗ್ರಾಮೀಣ ಭಾಗದ ಉದ್ಯೋಗಾಕಾಂಕ್ಷಿಗಳಿಗಾಗಿ ಜುಲೈ 12ರಂದು ದೇವದುರ್ಗ ಪಟ್ಟಣದ ಖೇಣದ್ ಕಾಲೇಜಿನಲ್ಲಿ ಒಂದು ದಿನದ ಸ್ಪರ್ಧಾತ್ಮಕ ಪರೀಕ್ಷಾ ಉಚಿತ ಮಾರ್ಗದರ್ಶನ ಕಾರ್ಯಾಗಾರ ಆಯೋಜಿಸಲಾಗಿದೆ ಎಂದು ಮಲದಕಲ್ ಗೆಳೆಯರ ಬಳಗದ ಅಧ್ಯಕ್ಷ ನಾಗರಾಜ ಪೂಜಾರಿ ತಿಳಿಸಿದರು.
ಮಲದಕಲ್ ಗೆಳೆಯರ ಬಳಗ, ಜ್ಞಾನವೃಕ್ಷ ಟ್ರಸ್ಟ್ ಹಾಗೂ ಬೆಂಗಳೂರಿನ ದ್ರೋಣಾಚಾರ್ಯ ಅಕಾಡೆಮಿ ಆಶ್ರಯದಲ್ಲಿ ಕಾರ್ಯಕ್ರಮ ನಡೆಯಲಿದೆ. ಪ್ರಸಿದ್ಧ ಸಂಪನ್ಮೂಲ ವ್ಯಕ್ತಿ ಹಾಗೂ ಪಿ.ಎಸ್.ಐ ಹುಸೇನಪ್ಪ ನಾಯಕ ಅವರು ಸ್ಪರ್ಧಾರ್ಥಿಗಳಿಗೆ ಪರೀಕ್ಷಾ ತಂತ್ರಗಳ ಬಗ್ಗೆ ಮಾರ್ಗದರ್ಶನ ನೀಡಲಿದ್ದಾರೆ. ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳ ಸಿದ್ಧತೆಯ ಮೌಲ್ಯಮಾಪನಕ್ಕಾಗಿ 100 ಅಂಕಗಳ ಮಾದರಿ ಪರೀಕ್ಷೆಯನ್ನು ಆಯೋಜಿಸಲಾಗಿದೆ ಎಂದು ಶನಿವಾರ ಮಾಧ್ಯಮ ಗೋಷ್ಠಿಯಲ್ಲಿ ಹೇಳಿದರು.
ಆರ್ಥಿಕ ಹಿನ್ನಡೆ ಅಥವಾ ಸರಿಯಾದ ಕೋಚಿಂಗ್ ಇಲ್ಲದೆ ಗ್ರಾಮೀಣ ಯುವಕರು ಅವಕಾಶಗಳಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ಉಚಿತ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದ್ದು, ಜಿಲ್ಲೆಯ ಅಭ್ಯರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದರು. ಹೆಚ್ಚಿನ ಮಾಹಿತಿ ಹಾಗೂ ಉಚಿತ ನೋಂದಣಿಗಾಗಿ 9632865877, 8105049051, 8722328636 ಸಂಖ್ಯೆಗೆ ಸಂಪರ್ಕಿಸಬೇಕು ಎಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಉಪಾಧ್ಯಕ್ಷ ಟೀಕಪ್ಪ ಚೌವ್ಹಾಣ್, ಈರಪ್ಪ ಜಿ, ಜಮ್ಮಷೀರ್, ಮಾರುತಿ ಉಪಸ್ಥಿತರಿದ್ದರು.
ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260705-32-9721850

