Dailyhunt
ರೈತರ ಜಮೀನಿಗೆ ಅರಣ್ಯ ಇಲಾಖೆ ತಗಾದೆ

ರೈತರ ಜಮೀನಿಗೆ ಅರಣ್ಯ ಇಲಾಖೆ ತಗಾದೆ

​ಬೇತಮಂಗಲ: ಸಮೀಪದ ಹುಲ್ಕೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಿದ್ದಾರೆಡ್ಡಿ ದಿನ್ನೆ ಗ್ರಾಮದ ರೈತರು ದಶಕಗಳಿಂದ ಕೃಷಿ ಚಟುವಟಿಕೆ ನಡೆಸುತ್ತಿದ್ದ ಭೂಮಿಯನ್ನು ಇತ್ತೀಚೆಗೆ ಅರಣ್ಯ ಇಲಾಖೆ ಅಧಿಕಾರಿಗಳು ಏಕಾಏಕಿ ಸರ್ವೆ ನಡೆಸಿ ಅರಣ್ಯ ಇಲಾಖೆಗೆ ಸೇರಿದ ಜಾಗ ಎಂದು ಹೇಳುತ್ತಿರುವುದು ರೈತರ ಆಕ್ರೋಶಕ್ಕೆ ಕಾರಣವಾಗಿದೆ.

ತಲೆಮಾರುಗಳಿಂದ ಉಳುಮೆ ಮಾಡಿಕೊಂಡು ಜೀವನ ನಡೆಸುತ್ತಿರುವ ಜಮೀನನ್ನು ಅರಣ್ಯ ಇಲಾಖೆ ತನ್ನದೆಂದು ಹಕ್ಕು ಚಲಾಯಿಸುತ್ತಿರುವುದು ಸಿದ್ದಾರೆಡ್ಡಿ ದಿನ್ನೆ ಗ್ರಾಮದ ರೈತರಲ್ಲಿ ತೀವ್ರ ಆತಂಕ ಮೂಡಿಸಿದೆ. ಹಾಗಾಗಿ ರೈತರು ಗ್ರಾಮದ ರೈತರು ಶಾಸಕಿ ರೂಪಕಲಾ ಶಶಿಧರ್ ಅವರನ್ನು ಭೇಟಿ ಮಾಡಿ ತಮ್ಮ ನೋವನ್ನು ತೋಡಿಕೊಂಡರು.

ಜಮೀನುಗಳಲ್ಲಿ ಮನೆ ನಿರ್ಮಿಸಿಕೊಂಡಿದ್ದೇವೆ. ದಾಖಲೆಗಳ ಮೇಲೆ ಬ್ಯಾಂಕ್‌ನಲ್ಲಿ ಸಾಲ ಪಡೆದಿದ್ದೇವೆ. ಅನಿವಾರ್ಯ ಸಂದರ್ಭಗಳಲ್ಲಿ ಕೆಲವರು ಜಮೀನು ಮಾರಾಟ ಮಾಡಿದ್ದಾರೆ. ಹೀಗಿರುವಾಗ ಅರಣ್ಯ ಇಲಾಖೆ ಅಧಿಕಾರಿಗಳು ಏಕಾಏಕಿ ನಮ್ಮ ಜಮೀನಿನ ತಂಟೆಗೆ ಬಂದರೆ ನಾವು ವಿಷ ಕುಡಿದು ಸಾಯಬೇಕಾದ ಪರಿಸ್ಥಿತಿ ನಿರ್ಮಾಣವಾಗುತ್ತದೆ ಎಂದು ಅಳಲು ತೋಡಿಕೊಂಡರು.

ರೈತರ ಅಳಲನ್ನು ಆಲಿಸಿದ ಶಾಸಕಿ ರೂಪಕಲಾ ಶಶಿಧರ್ ಮಾತನಾಡಿ, ರೈತರು ಯಾವುದೇ ಕಾರಣಕ್ಕೂ ಆತಂಕ ಪಡುವ ಅಗತ್ಯವಿಲ್ಲ. ಈಗಾಗಲೇ ಕೆಡಿಪಿ ಸಭೆಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳಿಗೆ ರೈತರ ಜಮೀನುಗಳಿಗೆ ಹೋಗದಂತೆ ಮತ್ತು ತೊಂದರೆ ಕೊಡದಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಮುಂಬರುವ ಕೆಡಿಪಿ ಸಭೆಯಲ್ಲಿ ಸಿದ್ದಾರೆಡ್ಡಿ ದಿನ್ನೆ ಗ್ರಾಮದ ರೈತರ ಪರವಾಗಿ ಧ್ವನಿ ಎತ್ತುವುದಾಗಿ ಭರವಸೆ ನೀಡಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260429-18-2113814342

Dailyhunt
Disclaimer: This content has not been generated, created or edited by Dailyhunt. Publisher: Prajavani