ಹುಬ್ಬಳ್ಳಿ: ಕಟ್ಟಡದ ತ್ಯಾಜ್ಯವನ್ನು ಸಾರ್ವಜನಿಕ ಸ್ಥಳ, ರಸ್ತೆ ಬದಿ, ಕಾಲುವೆ, ಖಾಲಿ ನಿವೇಶನಗಳಲ್ಲಿ ಎಸೆಯುವುದನ್ನು ನಿಷೇಧಿಸಿದ್ದು, ನಿಯಮ ಉಲ್ಲಂಘಿಸಿದವರಿಗೆ ದಂಡ ವಿಧಿಸಲಾಗುವುದು ಎಂದು ಹು-ಧಾ ಮಹಾನಗರ ಪಾಲಿಕೆ ಆಯುಕ್ತ ರುದ್ರೇಶ ಘಾಳಿ ತಿಳಿಸಿದ್ದಾರೆ.
ಕಟ್ಟಡದ ತ್ಯಾಜ್ಯ ವಿಲೇವಾರಿ ಸಂಬಂಧ ಪಾಲಿಕೆಯ ಅನುಮತಿ ಪಡೆದು ಧಾರವಾಡದ ಹೊಸಯಲ್ಲಾಪುರದ ತ್ಯಾಜ್ಯ ಸಂಸ್ಕರಣಾ ಘಟಕ ಮತ್ತು ಹುಬ್ಬಳ್ಳಿಯ ಕಾರವಾರ ರಸ್ತೆಯಲ್ಲಿನ ಸಂಸ್ಕರಣಾ ಘಟಕಕ್ಕೆ ಸಾಗಿಸಬೇಕು ಎಂದು ತಿಳಿಸಿದ್ದಾರೆ.
ನಿಗದಿಪಡಿಸಿರುವ ಸಂಸ್ಕರಣಾ ಘಟಕಗಳನ್ನು ಹೊರತುಪಡಿಸಿ ನಗರ ವ್ಯಾಪ್ತಿಯ ಯಾವುದೇ ಸ್ಥಳಗಳಲ್ಲಿ ತ್ಯಾಜ್ಯವನ್ನು ಎಸೆಯುವಂತಿಲ್ಲ. ನಿಯಮ ಉಲ್ಲಂಘಿಸಿದವರಿಗೆ ಮೊದಲ ಬಾರಿಗೆ ಪ್ರತಿ ಟನ್ಗೆ ₹8 ಸಾವಿರ, ಎರಡನೇ ಬಾರಿಗೆ ಟನ್ಗೆ ₹16 ಸಾವಿರ ದಂಡ ವಿಧಿಸಲಾಗುವುದು.
ಮನೆ, ಶಿಕ್ಷಣ ಸಂಸ್ಥೆ, ವಿವಿಧ ಕಚೇರಿ ಮತ್ತು ವಾಣಿಜ್ಯ ಮಳಿಗೆಗಳಲ್ಲಿ ಉತ್ಪತ್ತಿಯಾಗುವ ವಿವಿಧ ಬಗೆಯ ವಿದ್ಯುತ್ ಉಪಕರಣಗಳ ತ್ಯಾಜ್ಯವನ್ನು ಪಾಲಿಕೆಯ ಎಲ್ಲ 12 ವಲಯ ಕಚೇರಿಗಳಲ್ಲಿ ಸ್ಥಾಪಿಸಿರುವ ತ್ಯಾಜ್ಯ ಸಂಗ್ರಹಣಾ ಕೇಂದ್ರಗಳಲ್ಲಿ ಮಾತ್ರ ವಿಲೇವಾರಿ ಮಾಡಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260704-24-922120744

