ಚಿಕ್ಕಬಳ್ಳಾಪುರ: 'ಸಾರ್ವಜನಿಕರಲ್ಲಿ ಸಕಾಲ ಯೋಜನೆ ಕುರಿತು ಹೆಚ್ಚಿನ ಅರಿವು ಮೂಡಿಸುವ ನಿಟ್ಟಿನಲ್ಲಿ ಜಿಲ್ಲೆಯಾದ್ಯಂತ ಡಿ. 5ರವರೆಗೆ ಸಕಾಲ ಸಪ್ತಾಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳುವ ಸಂಬಂಧ ಅರಿವು ಮೂಡಿಸಬೇಕು' ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಅಮರೇಶ್ ಹೇಳಿದರು.
ನಗರದ ಜಿಲ್ಲಾಧಿಕಾರಿ ಕಚೇರಿಯ ಕೆಸ್ವಾನ್ ಸಭಾಂಗಣದಲ್ಲಿ ಇತ್ತೀಚೆಗೆ ನಡೆದ ಸಕಾಲ ಸಪ್ತಾಹದಲ್ಲಿ ಅವರು ಮಾತನಾಡಿದರು.
ಮೊದಲನೇ ಹಂತದಲ್ಲಿ ನಗರಾಭಿವೃದ್ಧಿ, ಕಂದಾಯ, ಸಾರಿಗೆ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಸಕಾಲ ಸಪ್ತಾಹ ನಡೆಯಲಿದೆ. ಈ ಇಲಾಖೆ ವ್ಯಾಪ್ತಿಯಲ್ಲಿ ಬರುವ ಅರ್ಜಿಗಳ ಸಂಬಂಧ ನಿಗದಿತ ಕಾಲಮಿತಿಯಲ್ಲಿ ಸೇವೆ ಒದಗಿಸುವ ಕೆಲಸವಾಗಬೇಕು. ಅರ್ಜಿ ಸ್ವೀಕೃತಿಯಾದ ನಂತರ ವಿಲೇವಾರಿಯಲ್ಲಿ ಅಧಿಕಾರಿಗಳು ಮಹತ್ವದ ಪಾತ್ರವಹಿಸಬೇಕು.
ಈಗಾಗಲೇ ಸಾರ್ವಜನಿಕರಿಂದ ಸ್ವೀಕೃತವಾಗಿ ಬಾಕಿ ಉಳಿದಿರುವ ಅರ್ಜಿ, ಮೇಲ್ಮನವಿಗಳನ್ನು ವಿಲೇ ಮಾಡುವುದು ಸೇರಿದಂತೆ ಹೊಸದಾಗಿ ಸ್ವೀಕೃತವಾಗುವ ಅರ್ಜಿಗಳನ್ನು ಸಕಾಲದಡಿ ನಿಗದಿಪಡಿಸಲಾದ ಕಾಲಮಿತಿಯೊಳಗೆ ವಿಲೇವಾರಿ ಮಾಡಬೇಕು. ಸೇವೆಗಳ ಹಕ್ಕು ಪಡೆಯಲು ಬಂದ ಸಾರ್ವಜನಿಕರಿಗೆ ಮಾಹಿತಿ ನೀಡಬೇಕು ಎಂದು ಹೇಳಿದರು.
ಅರ್ಜಿ ಸ್ವೀಕರಿಸಿದ ನಂತರ ಅರ್ಜಿ ಯಾವ ಹಂತದಲ್ಲಿದೆ, ಎಷ್ಟು ದಿನಗಳಲ್ಲಿ ಸೇವೆ ಲಭ್ಯವಾಗುತ್ತಿದೆ ಎಂಬ ಮಾಹಿತಿಯ ಅರಿವು ಮೂಡಿಸಿ ನಿಗದಿತ ಅವಧಿಯೊಳಗೆ ವಿಲೇವಾರಿ ಮಾಡುವ ಮೂಲಕ ಸಪ್ತಾಹ ಕಾರ್ಯಕ್ರಮವನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು ಎಂದು ಸೂಚಿಸಿದರು.
ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ರೇಣುಕಾ ಹಾಜರಿದ್ದರು.
