Dailyhunt Logo
  • Light mode
    Follow system
    Dark mode
    • Play Story
    • App Story
ಶಾಲಾ ಪೌಷ್ಟಿಕ ತೋಟ ಉದ್ಘಾಟನೆ

ಶಾಲಾ ಪೌಷ್ಟಿಕ ತೋಟ ಉದ್ಘಾಟನೆ

ಮಾಲೂರು: 'ಮಕ್ಕಳ ಉತ್ತಮ ಆರೋಗ್ಯ, ಪರಿಸರ ನಿರ್ಮಾಣಕ್ಕಾಗಿ ಕೈತೋಟಗಳು ಪ್ರಯೋಜನಕಾರಿಯಾಗಿವೆ' ಎಂದು ಶಾಸಕ ಕೆ.ವೈ. ನಂಜೇಗೌಡ ತಿಳಿಸಿದರು.

ತಾಲ್ಲೂಕಿನ ಕುಡಿಯನೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಹಮ್ಮಿಕೊಂಡಿದ್ದ ನರೇಗಾ ಯೋಜನೆಯಡಿ ಶಾಲಾ ಪೌಷ್ಟಿಕ ತೋಟ ಉದ್ಘಾಟಿಸಿ ಮಾತನಾಡಿದರು.

ತಾಲ್ಲೂಕಿನ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಕೈತೋಟ ನಿರ್ಮಾಣ ಸಂಬಂಧ ಸಿದ್ಧತೆ ರೂಪಿಸಿಕೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಸರ್ಕಾರಿ ಶಾಲೆಗಳಲ್ಲಿ ಉತ್ತಮ ಪರಿಸರ, ಮೂಲಸೌಲಭ್ಯಕ್ಕೆ ಆದ್ಯತೆ ನೀಡಿದಾಗ ಮಾತ್ರ ಖಾಸಗಿ ಶಾಲೆಗಳಿಗೆ ಪೈಪೋಟಿ ನೀಡಲು ಸಾಧ್ಯವಾಗುತ್ತದೆ ಎಂದರು.

15ನೇ ಹಣಕಾಸು ಯೋಜನೆಯಡಿ ಶೇಕಡ 10ರಷ್ಟು ಅನುದಾನವನ್ನು ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ನಿಗದಿಪಡಿಸಲಾಗಿದೆ. ಬಿಸಿಯೂಟಕ್ಕೆ ಅಗತ್ಯವಿರುವ ತರಕಾರಿ ಬೆಳೆಯಲು ಅನುಕೂಲ ಕಲ್ಪಿಸಿಕೊಳ್ಳಬೇಕು.

ನೀರಿನ ಸಮಸ್ಯೆ ಇರುವ ಕಡೆ ಶಾಲಾ ಆವರಣದಲ್ಲಿ ಕೊಳವೆಬಾವಿ ಕೊರೆಯಿಸಿ ನೀರಿನ ವ್ಯವಸ್ಥೆ ಕಲ್ಪಿಸಲಾಗುವುದು ಎಂದರು.

ಕೋಚಿಮುಲ್ ವತಿಯಿಂದ ಶಾಲಾ ಮಕ್ಕಳಿಗೆ ಹಾಲಿನ ಪುಡಿ ವಿತರಿಸಲಾಗುತ್ತಿದೆ. ತಾಲ್ಲೂಕಿನಾದ್ಯಂತ ಸರ್ಕಾರಿ ಶಾಲೆಗಳಲ್ಲಿ ಕೈತೋಟ ನಿರ್ಮಾಣ ಮಾದರಿಯಾಗಿರಬೇಕು. ಇಲಾಖಾಧಿಕಾರಿಗಳು ಹಾಗೂ ಶಿಕ್ಷಕರು ಈ ನಿಟ್ಟಿನಲ್ಲಿ ಹೆಚ್ಚಿನ ಜವಾಬ್ದಾರಿ ವಹಿಸಬೇಕು. ಅನುದಾನ ಅಗತ್ಯವಿರುವ ಅಡುಗೆ ಕೋಣೆಗಳಿಗೆ ಶಾಸಕರ ನಿಧಿಯಿಂದ ಅನುದಾನ ಮಂಜೂರು ಮಾಡಲಾಗುವುದು ಎಂದು ಭರವಸೆ ನೀಡಿದರು.

ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ತ್ರಿವರ್ಣ ರವಿ, ಇಒ ಕೃಷ್ಣಪ್ಪ, ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕಿ ಶಿಲ್ಪಶ್ರೀ, ಬಿಇಒ ಕೃಷ್ಣಮೂರ್ತಿ, ಮುಖಂಡರಾದ ಎಸ್.ಟಿ. ನಾರಾಯಣಪ್ಪ, ಶಶಿಧರ್, ಎಸ್.ಎನ್. ರಮೇಶ್ ಹಾಜರಾಗಿದ್ದರು.

Dailyhunt
Disclaimer: This content has not been generated, created or edited by Dailyhunt. Publisher: Prajavani