Breaking Shimoga
ಶಿವಮೊಗ್ಗ: ಮನೆ ಮನೆಗೆ ಬಿಜೆಪಿ ಸರ್ಕಾರದ ಯೋಜನೆ ತಲುಪಿಸಲು ಸಲಹೆ
ಶಿವಮೊಗ್ಗ: ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳನ್ನು ಇನ್ನಷ್ಟು ಪ್ರಚಾರ ಮಾಡುವ ಮೂಲಕ ಜನರಿಗೆ ತಿಳಿವಳಿಕೆ ಮೂಡಿಸುವ ಕೆಲಸ ಕಾರ್ಯಕರ್ತರಿಂದ ಆಗಬೇಕಿದೆ ಎಂದು ಜಿಲ್ಲಾ ಬಿಜೆಪಿ ಪ್ರಭಾರಿ ಮೋನಪ್ಪ ಭಂಡಾರಿ ಹೇಳಿದರು.
ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಶನಿವಾರ ಹಮ್ಮಿಕೊಂಡಿದ್ದ ಜಿಲ್ಲಾ ಕಾರ್ಯಕಾರಿ ಸಭೆ ಉದ್ಘಾಟಿಸಿ ಮಾತನಾಡಿದರು.
ಪ್ರಧಾನಿ ಮೋದಿ ಹಾಗೂ ರಾಜ್ಯದಲ್ಲಿ ಯಡಿಯೂರಪ್ಪ ಅವರು ಜಾರಿಗೆ ತಂದಿರುವ ಅನೇಕ ಕಾರ್ಯಕ್ರಮಗಳು ಮಹಿಳೆಯರು, ಮಕ್ಕಳು, ಆರ್ಥಿಕವಾಗಿ ಹಿಂದುಳಿದವರು, ದೀನದಲಿತರಿಗೆ ಅನುಕೂಲವಾಗಿವೆ. ಅವುಗಳನ್ನು ಮನೆ, ಮನೆಗೆ ಮುಟ್ಟಿಸುವ ಕೆಲಸ ಆಗಬೇಕು ಎಂದರು.
ಪ್ರಸ್ತುತ ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲದ ಬೆಲೆ ಹೆಚ್ಚಳವಾಗಿದೆ ಎಂದು ಜನರನ್ನು ಎತ್ತಿಕಟ್ಟುವ ಕೆಲಸ ಕಾಂಗ್ರೆಸ್ ನಾಯಕರಿಂದ ನಡೆಯುತ್ತಿದೆ. ಕಾಂಗ್ರೆಸ್ ಅವಧಿಯಲ್ಲಿ ಗ್ಯಾಸ್ ಸಿಲಿಂಡರ್ ಅನ್ನು ಬ್ಲಾಕ್ನಲ್ಲಿ ತೆಗೆದುಕೊಳ್ಳುವ ಪರಿಸ್ಥಿತಿ ಇತ್ತು ಎಂದು ದೂರಿದರು.
ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಟಿ.ಡಿ. ಮೇಘರಾಜ್, 'ಸಂಘಟನೆಯ ತಳಹದಿಯನ್ನು ಗಟ್ಟಿ ಮಾಡುವ ಕೆಲಸ ಕಾರ್ಯಕಾರಣಿಗಳಿಂದ ನಡೆಯುತ್ತಿದೆ. ಮಂಡಲ ಮಟ್ಟದಿಂದ ಹಿಡಿದು ಜಿಲ್ಲಾ ಮಟ್ಟದವರೆಗೆ ಕಾರ್ಯಕಾರಣಿಗಳನ್ನು ನಡೆಸಿ ತಿಳಿವಳಿಕೆ ಮೂಡಿಸಲಾಗುತ್ತಿದೆ' ಎಂದು ತಿಳಿಸಿದರು.
ಬಿಎಲ್ಎ ಜತೆಗೆ ಈಗ ಬಿಎಲ್ಒಗಳ ನೇಮಕ ಮಾಡಲಾಗಿದೆ. ಇವೆರಡನ್ನೂ ಜೋಡಿಸಿಕೊಂಡು ಬೂತ್ ಮಟ್ಟದಲ್ಲಿ ಕೆಲಸ ಮಾಡಲಾಗುತ್ತದೆ. ಮತದಾರರ ಪಟ್ಟಿಗೆ ಹೊಸದಾಗಿ ಸೇರ್ಪಡೆ ಮಾಡುವುದು ಹಾಗೂ ಇಲ್ಲದವರನ್ನು ಪಟ್ಟಿಯಿಂದ ತೆಗೆದು ಹಾಕುವ ಕಾರ್ಯವೂ ನಡೆಯಲಿದೆ ಎಂದರು.
ಸಭೆಯಲ್ಲಿ ರಾಜ್ಯ ಪ್ರಕೋಷ್ಠಗಳ ಸಂಯೋಜಕ ಎಂ.ಬಿ. ಭಾನುಪ್ರಕಾಶ್, ವಿಧಾನಪರಿಷತ್ ಸದಸ್ಯರಾದ ಆಯನೂರು ಮಂಜುನಾಥ, ಎಸ್. ರುದ್ರೇಗೌಡ, ಮಾಜಿ ಸದಸ್ಯ ಆರ್.ಕೆ. ಸಿದ್ದರಾಮಣ್ಣ, ವಿಭಾಗ ಸಹ ಪ್ರಭಾರಿ ಎಂ.ಎಸ್. ಹೆಗಡೆ, ಸಹಪ್ರಮುಖ್ ಆರ್.ಡಿ. ಹೆಗಡೆ, ಕಾಡಾ ಅಧ್ಯಕ್ಷೆ ಪವಿತ್ರಾ ರಾಮಯ್ಯ, ಮೇಯರ್ ಸುನಿತಾ ಅಣ್ಣಪ್ಪ ಇದ್ದರು.