ಬೆಂಗಳೂರು: 'ವಿಬಿ ಜಿ ರಾಮ್ ಜಿ ಯೋಜನೆಯಡಿ ಅರ್ಹ ಫಲಾನುಭವಿಗಳಿಗ ಉದ್ಯೋಗ ನೀಡಲು 5,927 ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಒಂದು ವಾರದ ಒಳಗೆ 'ಜಾಬ್ ಕಾರ್ಡ್ ಮೇಳ' ನಡೆಸಬೇಕು' ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಖಂಡ್ರೆ ಸೂಚಿಸಿದ್ದಾರೆ.
ಇಲಾಖೆಯ ಕಾರ್ಯದರ್ಶಿಗೆ ಲಿಖಿತ ಸೂಚನೆ ನೀಡಿರುವ ಅವರು, 'ನಿಷ್ಕ್ರಿಯ ಉದ್ಯೋಗದ ಚೀಟಿ (ಜಾಬ್ ಕಾರ್ಡ್)ಗಳನ್ನು ರದ್ದು ಮಾಡಲಾಗಿದೆ. ಆದರೆ, ಬಡ ಗ್ರಾಮೀಣ ಕುಟುಂಬಗಳಿಗೆ ಅನ್ಯಾಯ ಆಗದಂತೆ ಎಚ್ಚರ ವಹಿಸಬೇಕು' ಎಂದು ತಿಳಿಸಿದ್ದಾರೆ.
'ಹೊಸದಾಗಿ ಉದ್ಯೋಗ ಬಯಸುವ ಅರ್ಹ ಗ್ರಾಮೀಣ ಕುಟುಂಬಗಳ ಫಲಾನುಭವಿಗಳಿಗೆ, ಅಂದರೆ ಪರಿಶಿಷ್ಟ ಜಾತಿ, ಪಂಗಡದವರು, ಅಲ್ಪಸಂಖ್ಯಾತರು, ವಿಶೇಷ ಚೇತನರು, ಮಹಿಳಾ ನೇತೃತ್ವದ ಕುಟುಂಬದವರು, ಭೂ ರಹಿತ ಕೂಲಿ ಕಾರ್ಮಿಕರು ಸೇರಿದಂತೆ ಉದ್ಯೋಗ ಕೇಳುವ ಎಲ್ಲ ಅರ್ಹರಿಗೆ ತತ್ ಕ್ಷಣವೇ ಜಾಬ್ ಕಾರ್ಡ್ ಕೊಟ್ಟು ಉದ್ಯೋಗ ನೀಡಬೇಕು' ಎಂದು ನಿರ್ದೇಶನ ನೀಡಿದ್ದಾರೆ.
'ವಿ ಬಿಜಿ ರಾಮ್ ಜಿ ಯೋಜನೆಗೆ ಕೇಂದ್ರದ ಶೇ.60ರಷ್ಟು ಅನುದಾನ ₹1,700 ಕೋಟಿ ಹಾಗೂ ರಾಜ್ಯದ ಶೇ.40ರಷ್ಟು ಅನುದಾನ ₹1,200 ಕೋಟಿ ಸೇರಿ ಒಟ್ಟು ₹2,900 ಕೋಟಿ ಒದಗಿಸಲಾಗಿದೆ, ಈ ಪೈಕಿ, ಕೂಲಿ ನೀಡಲು ರಾಜ್ಯದ ಎಲ್ಲ ಗ್ರಾಮ ಪಂಚಾಯತಿಗಳಿಗೆ ₹1,000 ಕೋಟಿ ಬಿಡುಗಡೆ ಮಾಡಲಾಗಿದೆ' ಎಂದೂ ತಿಳಿಸಿದ್ದಾರೆ.
'ಹಣದ ಕೊರತೆ ಇಲ್ಲದಿದ್ದರೂ ಕೆಲವು ಗ್ರಾಮ ಪಂಚಾಯತಿಗಳಲ್ಲಿ ವಿಬಿ ಜಿ ರಾಮ್ ಜಿ ಅನುಷ್ಠಾನ ತೃಪ್ತಿದಾಯಕ ಆಗಿಲ್ಲ ಎಂಬುದು ಗಮನಕ್ಕೆ ಬಂದಿದೆ, ಇದನ್ನು ಗಂಭೀರವಾಗಿ ಪರಿಗಣಿಸಲಾಗಿದೆ ' ಎಂದೂ ಖಂಡ್ರೆ ಹೇಳಿದ್ದಾರೆ.

