ವಿರಾಜಪೇಟೆ: ಹುಲಿ ಸಂರಕ್ಷಣೆ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಅರಣ್ಯ ಇಲಾಖೆಯ ವಿರಾಜಪೇಟೆ ವಲಯದ ವತಿಯಿಂದ ಈಚೆಗೆ ಅಧ್ಯಯನ ಪ್ರವಾಸ ಆಯೋಜಿಸಲಾಗಿತ್ತು.
ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ ಮತ್ತು ಪರಿಹಾರ ಅರಣ್ಯೀಕರಣ ನಿಧಿ ನಿರ್ವಹಣೆ ಮತ್ತು ಯೋಜನಾ ಪ್ರಾಧಿಕಾರ 2025-26ನೇ ಯೋಜನೆಯಡಿ ಆಯೋಜಿಸಿದ್ದ ಅಧ್ಯಯನ ಪ್ರವಾಸ ಕಾರ್ಯಕ್ರಮದಲ್ಲಿ ತಾಲ್ಲೂಕಿನ ವಿವಿಧ ಮಹಿಳಾ ಸಂಘಗಳ ಸದಸ್ಯರು ಮತ್ತು ಮಕ್ಕಳು ಭಾಗವಹಿಸಿ ವನ್ಯಜೀವಿಗಳ ಬಗ್ಗೆ ಮಾಹಿತಿ ಪಡೆದುಕೊಂಡರು.
ಅಧ್ಯಯನ ಪ್ರವಾಸದ ಅಂಗವಾಗಿ ಕಾಕನಕೋಟೆ ಸಫಾರಿ ಕೇಂದ್ರ, ಬಂಡೀಪುರ, ನಾಗರಹೊಳೆ ವನ್ಯ ಜೀವಿಧಾಮಗಳಿಗೆ ಭೇಟಿ ನೀಡಲಾಯಿತು. ಕಾರ್ಯಕ್ರಮದಲ್ಲಿ ಹುಲಿ ಹಾಗೂ ಇತರೆ ವನ್ಯಜೀವಿಗಳ ಸಂರಕ್ಷಣೆ, ಮಾನವ-ವನ್ಯಜೀವಿ ಸಂಘರ್ಷ ತಡೆ, ಅರಣ್ಯದ ಮಹತ್ವದ ಬಗ್ಗೆ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದರು.
ಉಪ ಅರಣ್ಯ ಸಂರಕ್ಷಾಣಾಧಿಕಾರಿ ಜಗನ್ನಾಥ್ ಅವರ ನಿರ್ದೇಶನದಂತೆ ನಡೆದ ಅಧ್ಯಯನ ಪ್ರವಾಸದ ಸಂದರ್ಭ ಇಲಾಖೆಯ ಸಿಬ್ಬಂದಿಗಳಾದ ಅನಿಲ್, ಮಹೇಶ್ ಮಾರ್ಗದರ್ಶನ ನೀಡಿದರು.
ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260706-51-1628415142

