ಯಳಂದೂರು: ತಾಲ್ಲೂಕಿನ ಮಸಣಾಪುರ ಗ್ರಾಮದಲ್ಲಿ ಭಾನುವಾರ ನಸುಕಿನಲ್ಲಿ ಡಾ.ಅಂಬೇಡ್ಕರ್ ಭಾವಚಿತ್ರಕ್ಕೆ ಸಗಣಿ ಎರಚಿ, ವಿದ್ಯುತ್ ದೀಪಗಳನ್ನು ವಿರೂಪಗೊಳಿಸಲಾಗಿದೆ.
ಬಾಬ ಸಾಹೇಬರ ಪಟವನ್ನು ವಿರೂಪಗೊಳಿದ ವ್ಯಕ್ತಿಯನ್ನು ಇದೇ ಗ್ರಾಮದ ಚಂದ್ರು ಎಂದು ಗುರುತಿಸಲಾಗಿದೆ. ಈತ ಸ್ಥಳದಲ್ಲಿ ಗ್ರಾಮಸ್ಥರ ಕೈಗೆ ಸಿಕ್ಕಿಬಿದ್ದಿದ್ದಾನೆ.
ಸಮುದಾಯದವರ ಬಗ್ಗೆ ಅವಹೇಳನಕಾರಿ ಮಾತನಾಡಿದ್ದೇ, ಜನರ ಆಕ್ರೋಶಕ್ಕೆ ಕಾರಣ ಎನ್ನಲಾಗಿದೆ. ಕುಪಿತರಾದ ಅವರು ಆತನನ್ನು ಕಂಬಕ್ಕೆ ಕಟ್ಟಿ, ಗ್ರಾಮದ ರಸ್ತೆ ಬಂದ್ ಮಾಡಿ ಪ್ರತಿಭಟನೆ ನಡೆಸಿದರು.
'ಚಂದ್ರು ರಾಷ್ಟ್ರ ನಾಯಕರಿಗೆ ಅಪಮಾನ ಮಾಡಿದ್ದು, ಜಾತಿ ನಿಂದನೆ ಮಾಡಿದ್ದರಿಂದ ಸಮುದಾಯ ಜನರಿಗೆ ನೋವುಂಟಾಗಿದೆ. ಪರಿಶಿಷ್ಟ ಜಾತಿ ದೌರ್ಜನ್ಯ ಕಾಯ್ದೆದೆ ಅಡಿ ಆತನಿಗೆ ಶಿಕ್ಷೆ ವಿಧಿಸಬೇಕು ಹಾಗೂ ರೌಡಿ ಶೀಟರ್ ಎಂದು ದಾಖಲಿಸಿ ಗಡಿಪಾರು ಮಾಡಬೇಕು. ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಬೇಕು' ಎಂದು ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.
ಗಡಿಪಾರು ಭರವಸೆ: ಪೊಲೀಸ್ ವರಿಷ್ಠಾಧಿಕಾರಿ ಎಂ.ಮುತ್ತುರಾಜು ಮಾತನಾಡಿ, 'ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ ಮಾಡಿರುವ ವ್ಯಕ್ತಿಯನ್ನು ಪೊಲೀಸರು ಈಗಾಗಲೇ ವಶಕ್ಕೆ ಪಡೆದಿದ್ದಾರೆ. ದೀನ ದಲಿತರು ಹಾಗೂ ಮಹಿಳೆಯರ ಆಸ್ಮಿತೆಯಾದ ಅಂಬೇಡ್ಕರ್ ಭಾವಚಿತ್ರ ವಿರೂಪಗೊಳಿಸುವ ಕಿಡಿಗೇಡಿಗಳಿಗೆ ಗಡಿಪಾರು ಇಲ್ಲವೆ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗುವುದು' ಎಂದರು.
ಶಾಸಕ ಕೃಷ್ಣಮೂರ್ತಿ ಸ್ಥಳಕ್ಕೆ ಭೇಟಿ ನೀಡಿ, 'ಗ್ರಾಮದಲ್ಲಿ ಶಾಂತಿ ಕಾಪಾಡುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದರು. ಗ್ರಾಮಸ್ಥರಿಂದ ಮಾಹಿತಿ ಪಡೆದರು. ಕೃತ್ಯ ನಡೆಸಿದವರ ವಿರುದ್ಧ ಕಾನೂನಿನಡಿ ಶಿಸ್ತು ಕ್ರಮ ಜರುಗಿಸಬೇಕು' ಎಂದು ಪೊಲೀಸರಿಗೆ ಸೂಚಿಸಿದರು.
ಗ್ರಾಮಕ್ಕೆ ದಲಿತ ಮುಖಂಡರು ಹಾಗೂ ಮಾಜಿ ಶಾಸಕರು ಭೇಟಿ ನೀಡಿದ್ದರು. ಪೊಲೀಸರು ಗ್ರಾಮದಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಿದ್ದರು. ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260615-37-1787870563

