
ಬೆಂಗಳೂರು: ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಜ್ಯೋತಿ ಯೋಜನೆಗಳನ್ನು ಪರಿಷ್ಕರಣೆ ಮಾಡಲು ಸರ್ಕಾರ ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮನೆ-ಮನೆ ಪರಿಶೀಲನೆ ಕಾರ್ಯ ಜುಲೈ 1ರಿಂದ ಆರಂಭವಾಗಿದ್ದು, ರಾಜ್ಯದ ಎಲ್ಲಾ ಎಸ್ಕಾಂಗಳ ಸಿಬ್ಬಂದಿ ಮತ್ತು ಮೀಟರ್ ರೀಡರ್ಗಳು ಮನೆಗಳಿಗೆ ಭೇಟಿ ನೀಡಿ ಫಲಾನುಭವಿಗಳ ದಾಖಲೆಗಳನ್ನು ಪರಿಶೀಲಿಸಿ ಮಾಹಿತಿ ಸಂಗ್ರಹಿಸುತ್ತಿದ್ದಾರೆ.

ಈ ಮೊದಲು ಗೃಹ ಜ್ಯೋತಿ ಪರಿಶೀಲನೆಗೆ ಆಧಾರ್ ಕಾರ್ಡ್, ಪಾಸ್ಪೋರ್ಟ್ ಅಳತೆಯ ಭಾವಚಿತ್ರ, ಮತದಾರರ ಗುರುತಿನ ಚೀಟಿ, ಪ್ಯಾನ್ ಕಾರ್ಡ್, ರೇಷನ್ ಕಾರ್ಡ್, ಜಾತಿ ಪ್ರಮಾಣ ಪತ್ರ ಹಾಗೂ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರೆ ಬಾಡಿಗೆ ಒಪ್ಪಂದ ಪತ್ರವನ್ನು ತೋರಿಸುವುದು ಕಡ್ಡಾಯ ಎಂದು ಸೂಚಿಸಲಾಗಿತ್ತು. ಆದರೆ ಗೃಹ ಜ್ಯೋತಿ ಪರಿಶೀಲನೆಗೂ ಜಾತಿ ಪ್ರಮಾಣ ಪತ್ರಕ್ಕೂ ಏನು ಸಂಬಂಧ ಎನ್ನುವ ಪ್ರಶ್ನೆಗಳು ವ್ಯಕ್ತವಾಗಿದ್ದವು.

ಈ ಹಿನ್ನೆಲೆಯಲ್ಲಿ ಬೆಸ್ಕಾಂ ಮಹತ್ವದ ಸ್ಪಷ್ಟನೆ ನೀಡಿದೆ. ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ ಯೋಜನೆಯ ಮಾಹಿತಿ ಸಂಗ್ರಹಕ್ಕೆ ಸಂಬಂಧಿಸಿದಂತೆ ಫಲಾನುಭವಿಯ ಪ್ರವರ್ಗ ಕುರಿತು ಕೇಳಿರುವ ಮಾಹಿತಿ ಕಡ್ಡಾಯವಲ್ಲ ಎಂದು ತಿಳಿಸಿದೆ.

ಬೆಸ್ಕಾಂನ ಸಿಬ್ಬಂದಿ ಹಾಗೂ ಮೀಟರ್ ರೀಡರ್ಗಳು ಸೇವಾ ಸಿಂಧು ಮೊಬೈಲ್ ಅಪ್ಲಿಕೇಷನ್ ಹಾಗೂ ಮುದ್ರಿತ ಘೋಷನಾ ಪತ್ರದ ಮೂಲಕ ಮಾಹಿತಿಯನ್ನು ಗೃಹ ಫಲಾನುಭವಿಗಳ ಮನೆಗೆ ತೆರಳಿ ಕಲೆ ಹಾಕುತ್ತಿದ್ದು, ಫಲಾನುಭವಿಯ ಪ್ರವರ್ಗದ (ಜಾತಿ ಪ್ರಮಾಣಪತ್ರ) ಸಂಬಂಧಿಸಿದ ಮಾಹಿತಿ ಕೇವಲ ಐಚ್ಛಿಕವಾಗಿದೆ. ಫಲಾನುಭವಿಗಳಿಗೆ ಜಾತಿ ಮಾಹಿತಿ ನೀಡಲು ಇಷ್ಟವಿಲ್ಲದಿದ್ದರೆ ಮೊಬೈಲ್ ಅಪ್ಲಿಕೇಷನ್ ನಲ್ಲಿರುವ ʼಮಾಹಿತಿ ನೀಡಲು ನಿರಾಕರಣೆʼ ಎಂಬ ಆಯ್ಕೆಯನ್ನು ನಮೂದಿಸಲು ಸಿಬ್ಬಂದಿಗೆ ಈಗಾಗಲೇ ಸೂಚನೆ ನೀಡಲಾಗಿದೆ ಎಂದು ಬೆಸ್ಕಾಂ ತಿಳಿಸಿದೆ.
