Dailyhunt Logo
  • Light mode
    Follow system
    Dark mode
    • Play Story
    • App Story

ಕಾಂಗ್ರೆಸ್‌ನಲ್ಲಿ ರೇಟ್ ಫಿಕ್ಸ್ ಆಗಿದೆ..ಸಂಪುಟ ವಿಸ್ತರಣೆಗೆ ಡೇಟ್ ಫಿಕ್ಸ್ ಆಗ್ತಿಲ್ಲ: ವಿಜಯೇಂದ್ರ ವ್ಯಂಗ್ಯ

Pratidhvani 3 weeks ago

ಬೆಂಗಳೂರು: ಬೆಳೆ ಬೆಳೆಯದಿರಿ ಎಂದು ಮುಖ್ಯಮಂತ್ರಿಗಳು ನೀಡಿದ ಹೇಳಿಕೆಯು ರೈತರ ಆತ್ಮಸ್ಥೈರ್ಯ ಕುಗ್ಗಿಸುವ ಕೆಲಸ ಮಾಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ರಾಜ್ಯ ಸರ್ಕಾರದ ವಿರುದ್ಧ ಅಸಮಧಾನ ಹೊರಹಾಕಿದ್ದಾರೆ.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಿನ್ನೆ ಈ ನಾಡಿನ ದೊರೆ, ಮುಖ್ಯಮಂತ್ರಿಗಳು ಒಂದು ಹೇಳಿಕೆ ಕೊಟ್ಟಿದ್ದಾರೆ.

ನೀರಿಲ್ಲ, ಬೆಳೆ ಬೆಳೆಯುವುದು ಬೇಡ. ಭೀಕರ ಬರಗಾಲದ ಮುನ್ಸೂಚನೆ ವಿಚಾರವನ್ನು ಸಂಪುಟದಲ್ಲಿ ಚರ್ಚಿಸಿ ರಾಜ್ಯದ ಜಲಾಶಯಗಳಲ್ಲಿ ನೀರಿಲ್ಲದ ಕಾರಣ ರೈತರು ಬೆಳೆ ಬೆಳೆಯದಿರಿ ಎಂದು ಸ್ವತಃ ಮುಖ್ಯಮಂತ್ರಿಗಳು ಹೇಳಿದ್ದು ಬಹಳ ಆಶ್ಚರ್ಯ ಮಾತ್ರವಲ್ಲದೇ ಅತ್ಯಂತ ನೋವನ್ನು ತಂದಿದೆ ಎಂದರು.

ನಾವೇನೇ ಹೇಳಿಕೆ ನೀಡಿದರೂ ಪ್ರಬುದ್ಧತೆಯಿಂದ ಮಾತನಾಡಬೇಕು ಎಂದು ವಿನಂತಿಸಿದರು. ಇಡೀ ದೇಶದಲ್ಲಿ ಬರಗಾಲದ ಛಾಯೆ ಮೂಡಿದೆ. ಪ್ರಕೃತಿ ಮುನಿಸಿಕೊಂಡ ಸಂದರ್ಭದಲ್ಲಿ ರಾಜ್ಯದ ರೈತರಿಗೆ ಅಭಯ, ಭರವಸೆಯನ್ನು ಸರ್ಕಾರ ನೀಡಬೇಕಿತ್ತು. ಮುಂದಿನ 15- 20 ದಿನ ಮಳೆ ಬೀಳುವ ಆಶಾಭಾವ ಇದೆ. ಮುಖ್ಯಮಂತ್ರಿಗಳು ಹೇಳಿದರೆಂದು ಬಿತ್ತನೆಯೇ ಮಾಡದೇ ಇದ್ದರೆ ಯಾರು ಹೊಣೆಗಾರರು ಎಂದು ಆತಂಕ ವ್ಯಕ್ತಪಡಿಸಿದರು.

ಶೇ 50- 60 ಮಳೆ ಕಡಿಮೆ ಇರುವಾಗ ರಾಜ್ಯ ಸರಕಾರದ ಆದ್ಯತೆ ಏನು? ಇವರೇನಾದರೂ ಜಿಲ್ಲಾಧಿಕಾರಿಗಳಿಗೆ ಹಣ ಬಿಡುಗಡೆ ಮಾಡಿದ್ದಾರಾ ಎಂದು ಪ್ರಶ್ನಿಸಿದರು. ರೈತರಿಗೆ ಸ್ಪಂದಿಸುವ ನಿಟ್ಟಿನಲ್ಲಿ ಜಾನುವಾರುಗಳಿಗೆ ಸಂಬಂಧಿಸಿ ಅನುದಾನ ಬಿಡುಗಡೆ ಮಾಡಿದ್ದಾರಾ? ಬರಗಾಲದ ಮುನ್ಸೂಚನೆ ವಿಚಾರ ರಾತ್ರೋರಾತ್ರಿ ಜ್ಞಾನೋದಯ ಆಗಿದೆಯೇ? ಯಾಕೆ ಈ ರೀತಿ ಕಪಟ ನಾಟಕ ಆಡುತ್ತಿದ್ದೀರಿ? ಎಂದು ಕೇಳಿದರು. ಮುಖ್ಯಮಂತ್ರಿ ರೈತಪರವಾಗಿಲ್ಲದೇ ರಿಯಲ್ ಎಸ್ಟೇಟ್ ಪರ ಆದರೆ ರಾಜ್ಯದ ಹಣೆಬರಹ ಇದೇ ಆಗುತ್ತದೆ ಎಂದು ಆಕ್ಷೇಪಿಸಿದರು. ನಮ್ಮ ಜಲಾಶಯದಿಂದ ತಮಿಳುನಾಡಿಗೆ ನೀರು ಬಿಡುವ ದುಸ್ಸಾಹಸಕ್ಕೆ ಯಾಕೆ ಕೈ ಹಾಕಿದ್ದೀರಿ ಎಂದು ಪ್ರಶ್ನಿಸಿದರು.

ಮುಖ್ಯಮಂತ್ರಿಗಳು ಇದರ ಬಗ್ಗೆ ಗಂಭೀರವಾಗಿ ಚಿಂತಿಸಬೇಕು ಎಂದ ಅವರು, ರೈತರಿಗೆ ಕೊಡಬೇಕಾದ ಯೋಜನೆ, ಆಡಳಿತ ಸನ್ನದ್ಧತೆ ಕಡೆಗೆ ಗಮನಿಸದೇ ಮುಖ್ಯಮಂತ್ರಿಗಳು ಕೈಚೆಲ್ಲಿ ಕೂತರೆ ಹೇಗೆ ಎಂದು ಟೀಕಿಸಿದರು. ಎಸ್‍ಐಆರ್ ಇರುವ ಕಾರಣ ಆಗಸ್ಟ್ ಮಧ್ಯದಲ್ಲಿ ಮುಂಗಾರು ಅಧಿವೇಶನ ಮಾಡುವುದಾಗಿ ಹೇಳಿದ್ದಾರೆ. ಶಾಸಕರು ಮನೆ ಮನೆಗೆ ತೆರಳಿ ಎಸ್‍ಐಆರ್ ಮಾಡುತ್ತಾರಾ ಎಂದರು.

ಕಾಂಗ್ರೆಸ್ ಪಕ್ಷದಲ್ಲಿ ರೇಟ್ ಫಿಕ್ಸ್ ಆಗಿದೆ

ಕಾಂಗ್ರೆಸ್ ಪಕ್ಷದಲ್ಲಿ ರೇಟ್ ಫಿಕ್ಸ್ ಆಗಿದೆ. ಸಂಪುಟ ವಿಸ್ತರಣೆಗೆ ಡೇಟ್ ಫಿಕ್ಸ್ ಆಗುತ್ತಿಲ್ಲ. ಇದೇ ಕಾರಣಕ್ಕೆ ಅಧಿವೇಶನ ಮುಂದೂಡುತ್ತಿದ್ದಾರೆ. ಸಿದ್ದರಾಮಯ್ಯನವರ ಪೂರ್ಣ ಸಂಪುಟ ಇದ್ದರೂ ನೆರೆ ಬಂದಾಗ ರೈತರ ಸಂಕಷ್ಟಕ್ಕೆ ಸ್ಪಂದಿಸಿರಲಿಲ್ಲ. ಕ್ಯಾಬಿನೆಟ್ ವಿಸ್ತರಿಸಿದರೆ ಈ ಸರಕಾರದ ಬುಡ ಅಲ್ಲಾಡುವ ವಾಸ್ತವಿಕ ಸತ್ಯ ಸಿಎಂಗೆ ಗೊತ್ತಿದೆ. ಹಾಗಾಗಿ ಎಸ್‍ಐಆರ್ ನೆಪ ಒಡ್ಡಿದ್ದಾರೆ ಎಂದು ಆರೋಪಿಸಿದರು.

ಹಾನಗಲ್ ತಾಲ್ಲೂಕಿನ ನರೇಗಲ್‍ನಲ್ಲಿ ಹಾಲುಮತ ಸಮಾಜದ ಒಂದೇ ಕುಟುಂಬದ ಆರು ಜನರ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದೆ. ಮತ್ತೊಂದೆಡೆ ಹಾಸನದ ರಟ್ಟೇಹಳ್ಳಿಯಲ್ಲಿ ಮರಾಠಾ ಸಮಾಜದ ಬಡ ಕುಟುಂಬದ ಶಿವಾಜಿ ರಾವ್ ಅವರನ್ನು ಹಾಡಹಗಲೇ ಒದ್ದು ಪ್ರಾಣ ತೆಗೆಯುವ ಕೆಲಸ ಆಗಿದೆ. ಚಿಕ್ಕಬಳ್ಳಾಪುರದಲ್ಲಿ ಲವ್ ಜಿಹಾದ್‍ಗೆ ಒಳಗಾಗಿ ಫಿಸಿಯೋಥೆರಪಿಸ್ಟ್ ಕೊಲೆಯಾಗಿದೆ. ಮುಖ್ಯಮಂತ್ರಿ ಡಿಕೆ ಸಾಫ್ಟ್ ಹಿಂದುತ್ವವಾದ, ಗೃಹಸಚಿವ ಪಿಕೆ ಮತ್ತು ಕೆಪಿಸಿಸಿ ಅಧ್ಯಕ್ಷ ಬಿಕೆ ಅವರ ಹಿಂದೂ ವಿರೋಧಿ ನೀತಿ- ಇವರ ಹೇಳಿಕೆಗಳು ಮತೀಯ ಶಕ್ತಿಗಳಿಗೆ ಧೈರ್ಯ ನೀಡುತ್ತಿದೆ ಎಂದು ಟೀಕಿಸಿದರು. ಕಾಂಗ್ರೆಸ್ ಸರಕಾರದ ಅಲ್ಪಸಂಖ್ಯಾತರ ಓಲೈಕೆಯೇ ಇದಕ್ಕೆ ಕಾರಣ ಎಂದು ಆಕ್ಷೇಪಿಸಿದರು.

.

Dailyhunt
Disclaimer: This content has not been generated, created or edited by Dailyhunt. Publisher: Pratidhvani