
ನವದೆಹಲಿ: ನೀಟ್ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಹಿನ್ನೆಲೆಯಲ್ಲಿ ದೇಶದಾದ್ಯಂತ ಪ್ರತಿಭಟನೆಗಳ ಕಾವು ಜೋರಾಗಿದೆ. ಈ ಹಿನ್ನೆಲೆಯಲ್ಲಿ ಟೀಮ್ ಇಂಡಿಯಾದ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ವಿದ್ಯಾರ್ಥಿಗಳ ಪರವಾಗಿ ನಿಂತು ಸಾಮಾಜಿಕ ಜಾಲತಾಣದಲ್ಲಿ ಮಹತ್ವದ ಸಂದೇಶ ಹಂಚಿಕೊಂಡಿದ್ದಾರೆ.

ತಮ್ಮ ಅಧಿಕೃತ ಇನ್ಸ್ಟಾಗ್ರಾಮ್ ಸ್ಟೋರಿಯಲ್ಲಿ ಈ ಬಗ್ಗೆ ಪ್ರತಿಕ್ರಿಯಿಸಿರುವ ಯುವರಾಜ್ ಸಿಂಗ್, ವಿದ್ಯಾರ್ಥಿಗಳ ಸುರಕ್ಷತೆ ಮತ್ತು ಉತ್ತಮ ಭವಿಷ್ಯಕ್ಕೆ ಆದ್ಯತೆ ನೀಡಬೇಕು ಎಂದು ಹೇಳಿದ್ದಾರೆ.

ʼದೇಶದ ಪ್ರತಿಯೊಂದು ಮಗು, ವಿದ್ಯಾರ್ಥಿ, ಮಹಿಳೆ ಮತ್ತು ಪುರುಷ…ನೀವೆಲ್ಲರೂ ಶಾಂತಿಯುತವಾಗಿ ಕಲಿಯುವ, ಸುರಕ್ಷಿತವಾಗಿ ಬೆಳೆಯುವ ಮತ್ತು ನಿಮ್ಮ ಕನಸುಗಳನ್ನು ಬೆನ್ನಟ್ಟುವ ಅವಕಾಶವನ್ನು ಹೊಂದಲು ಅರ್ಹರು. ನಿಮ್ಮ ಯೋಗಕ್ಷೇಮವೇ ಉಜ್ವಲ ಭಾರತದ ಅಡಿಪಾಯʼ
ʼಬನ್ನಿ, ನಾವೆಲ್ಲರೂ ಒಟ್ಟಾಗಿ ಕಾಳಜಿ, ಅವಕಾಶ ಮತ್ತು ಭರವಸೆಯ ಸಮುದಾಯಗಳನ್ನು ನಿರ್ಮಿಸೋಣ. ಭಾರತದ ಭವಿಷ್ಯದ ಹಿತದೃಷ್ಟಿಯಿಂದ, ಸೌಹಾರ್ದಯುತ ಮಾತುಕತೆಯ ಮೂಲಕ ನಾವೊಂದು ಉತ್ತಮ ಪರಿಹಾರವನ್ನು ಕಂಡುಕೊಳ್ಳಬಹುದುʼ ಎಂದಿರುವ ಯುವರಾಜ್ ಸಿಂಗ್, ಹಿಂಸಾತ್ಮಕ ಪ್ರತಿಭಟನೆಗಳ ಬದಲು ಸೌಹಾರ್ದಯುತ ಮಾತುಕತೆಯ ಮೂಲಕ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕು ಎಂದು ಕರೆ ನೀಡಿದ್ದಾರೆ. ಯುವರಾಜ್ ಸಿಂಗ್ ಅವರ ಈ ಸಂದೇಶ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಚರ್ಚೆಗೆ ಗ್ರಾಸವಾಗಿದ್ದು, ಹಲವು ಮಂದಿ ಬೆಂಬಲ ವ್ಯಕ್ತಪಡಿಸಿದ್ದಾರೆ.

