ಬೆಂಗಳೂರು: ಕರ್ನಾಟಕರಾಜ್ಯದಲ್ಲಿ ಇದೇ ಮೊದಲ ಬಾರಿಗೆ 70 ಸಾವಿರಕ್ಕೂ ಅಧಿಕ ಸರ್ಕಾರಿ ಹುದ್ದೆಗಳ ನೇಮಕಾತಿಗೆ ಸಿದ್ಧತೆ ನಡೆಸಲಾಗಿದ್ದು, ಸಂಪೂರ್ಣ ನೇಮಕಾತಿ ಪ್ರಕ್ರಿಯೆಯನ್ನು ಅತ್ಯಂತ ಪಾರದರ್ಶಕವಾಗಿ ಹಾಗೂ ಕಟ್ಟುನಿಟ್ಟಿನಿಂದ ನಡೆಸಲು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಶುಕ್ರವಾರ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಮುಂಬರುವ ನೇಮಕಾತಿಗಳಿಗೆ ಕೈಗೊಂಡಿರುವ ಸಿದ್ಧತೆಗಳ ಕುರಿತು ಹಿರಿಯ ಅಧಿಕಾರಿಗಳ ಸಭೆ ನಡೆಸಿದ ಅವರು, ವಿಡಿಯೊ ಕಾನ್ಫರೆನ್ಸ್ ಮೂಲಕ ಭಾಗವಹಿಸಿದ್ದ ಜಿಲ್ಲಾ ಮಟ್ಟದ ಅಧಿಕಾರಿಗಳಿಗೂ ಅಗತ್ಯ ಮಾರ್ಗದರ್ಶನ ನೀಡಿದರು.
ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು, 'ನೇಮಕಾತಿ ಪ್ರಕ್ರಿಯೆಯಲ್ಲಿ ಕರ್ನಾಟಕ ದೇಶಕ್ಕೇ ಮಾದರಿಯಾಗಬೇಕು. 70 ಸಾವಿರಕ್ಕೂ ಅಧಿಕ ಹುದ್ದೆಗಳಿಗೆ ನೇಮಕಾತಿ ಮಾಡುವ ದೊಡ್ಡ ಕಾರ್ಯವನ್ನು ನಾವು ಕೈಗೆತ್ತಿಕೊಂಡಿದ್ದೇವೆ. ಇದನ್ನು ಅತ್ಯಂತ ಪಾರದರ್ಶಕವಾಗಿ ಪೂರ್ಣಗೊಳಿಸಬೇಕಿದೆ. ತಾಂತ್ರಿಕತೆಯಲ್ಲಿ ಕರ್ನಾಟಕಕ್ಕೆ ದೊಡ್ಡ ಇತಿಹಾಸವಿದ್ದು, ಇತರ ರಾಜ್ಯಗಳಿಗಿಂತ ನಾವು ತಾಂತ್ರಿಕವಾಗಿ ಮುಂಚೂಣಿಯಲ್ಲಿದ್ದೇವೆ. ಈ ತಂತ್ರಜ್ಞಾನವನ್ನು ಸಮರ್ಪಕವಾಗಿ ಬಳಸಿಕೊಂಡು ಅತ್ಯಂತ ವೃತ್ತಿಪರವಾಗಿ ನೇಮಕಾತಿ ನಡೆಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ' ಎಂದರು.
ಮುಂದಿನ ಆರು ತಿಂಗಳಲ್ಲಿ 36,773 ಹುದ್ದೆಗಳನ್ನು ತುಂಬಲು ಕೆಪಿಎಸ್ಸಿ (KPSC) ಮತ್ತು ಕೆಇಎ (KEA) ಈಗಾಗಲೇ ವೇಳಾಪಟ್ಟಿಯನ್ನು ಹೊರಡಿಸಿದ್ದು, ಸುಮಾರು 35 ಲಕ್ಷ ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗುವ ನಿರೀಕ್ಷೆಯಿದೆ.
ಪರೀಕ್ಷಾ ಪ್ರಕ್ರಿಯೆಯಲ್ಲಿ ಅನುಸರಿಸಬೇಕಾದ ಸಮಗ್ರ ಮಾರ್ಗಸೂಚಿಯನ್ನು ಸಿದ್ಧಪಡಿಸಲಾಗಿದ್ದು, ಇದನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಸೂಚಿಸಲಾಗಿದೆ. ಪರೀಕ್ಷಾ ವ್ಯವಸ್ಥೆಯನ್ನು ಇನ್ನಷ್ಟು ಸುಧಾರಿಸಲು ಯುಪಿಎಸ್ಸಿಯಲ್ಲಿ ಅನುಸರಿಸುವ ಅತ್ಯುತ್ತಮ ಅಂಶಗಳನ್ನು ಇಲ್ಲಿಯೂ ಅಳವಡಿಸಿಕೊಳ್ಳಬೇಕು ಹಾಗೂ ಪಾರದರ್ಶಕತೆಗೆ ಕೈಗೊಂಡಿರುವ ಕ್ರಮಗಳ ಬಗ್ಗೆ ವಿದ್ಯಾರ್ಥಿಗಳಿಗೆ ಸ್ಪಷ್ಟ ಮಾಹಿತಿ ನೀಡಬೇಕು ಎಂದು ಸಿಎಂ ನಿರ್ದೇಶಿಸಿದರು.

