ಬೆಂಗಳೂರು: ಕರ್ನಾಟಕ ಕಾಂಗ್ರೆಸ್ ಸರ್ಕಾರದಲ್ಲಿ ಇತ್ತೀಚೆಗೆ ನಡೆದ ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಹುಟ್ಟಿಕೊಂಡಿರುವ ತೀವ್ರ ಅಸಮಾಧಾನವನ್ನು ಶಮನಗೊಳಿಸಲು ಪಕ್ಷದ ನಾಯಕತ್ವ ಸಕ್ರಿಯವಾಗಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಎಐಸಿಸಿ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಸಂಪುಟದಲ್ಲಿ ಸ್ಥಾನ ಸಿಗದೆ ಅಸಮಾಧಾನಗೊಂಡಿರುವ ಹಿರಿಯ ಶಾಸಕರನ್ನು ಖುದ್ದಾಗಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ರಾಜ್ಯ ಕಾಂಗ್ರೆಸ್ ಕಾರ್ಯಾಧ್ಯಕ್ಷ ಬಿ.ಕೆ. ಹರಿಪ್ರಸಾದ್ ಹಾಗೂ ಕೆಲವು ಸಚಿವರು ಬಂಡಾಯದ ಹಾದಿಯಲ್ಲಿದ್ದ ಶಾಸಕರ ಮನೆಗಳಿಗೆ ತೆರಳಿ ಸಮಾಧಾನಪಡಿಸುವ ಯತ್ನ ನಡೆಸಿದರು. ನಾಯಕರ ನಿರಂತರ ಸಂಧಾನದ ಫಲವಾಗಿ, ಸಚಿವ ಸ್ಥಾನ ಸಿಗಲಿಲ್ಲವೆಂದು ರಾಜೀನಾಮೆ ಸಲ್ಲಿಸಿದ್ದ ಇಂಡಿ ಶಾಸಕ ಯಶವಂತರಾಯಗೌಡ ವಿ. ಪಾಟೀಲ್ ತಮ್ಮ ರಾಜೀನಾಮೆಯನ್ನು ವಾಪಸ್ ಪಡೆದಿದ್ದಾರೆ. ಮತ್ತೊಂದೆಡೆ, ಸಿಎಂ ಶಿವಕುಮಾರ್ ಹಾಗೂ ಸುರ್ಜೇವಾಲಾ ಅವರು ಬೆಂಗಳೂರಿನ ಹಿರಿಯ ಶಾಸಕರಾದ ಎಂ. ಕೃಷ್ಣಪ್ಪ ಮತ್ತು ಅವರ ಪುತ್ರ ಪ್ರಿಯಾ ಕೃಷ್ಣ ಅವರ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದರು.
ನಾಯಕರ ಭರವಸೆಯ ನಡುವೆಯೂ, ಸಂಪುಟದಿಂದ ಕೈಬಿಡಲಾದ 30 ರಿಂದ 35 ಬಂಡಾಯ ಶಾಸಕರು ಶೀಘ್ರದಲ್ಲೇ ಪ್ರತ್ಯೇಕವಾಗಿ ಸಭೆ ಸೇರಿ ತಮ್ಮ ಮುಂದಿನ ರಾಜಕೀಯ ನಡೆ ಕುರಿತು ಚರ್ಚಿಸಲು ತೀರ್ಮಾನಿಸಿದ್ದಾರೆ. ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಸಂಪುಟದಲ್ಲಿ ಸೂಕ್ತ ಪ್ರಾತಿನಿಧ್ಯ ಸಿಕ್ಕಿಲ್ಲ ಎಂಬ ಆಕ್ಷೇಪಗಳೂ ಕೇಳಿಬಂದಿವೆ.
ಮಾಜಿ ಸಿಎಂ ಸಿದ್ದರಾಮಯ್ಯ ಅವರು ಸೂಚಿಸಿದ್ದ ಬಸವರಾಜ ಶಿವಣ್ಣನವರ್ ಹಾಗೂ ಉಮಾಶ್ರೀ ಅವರಿಗೆ ಸಂಪುಟದಲ್ಲಿ ಅವಕಾಶ ಸಿಗದಿರುವುದರಿಂದ ಅವರು ಅಸಮಾಧಾನಗೊಂಡಿದ್ದಾರೆ ಎಂಬ ವರದಿಗಳ ಬೆನ್ನಲ್ಲೇ, ಸುರ್ಜೇವಾಲಾ ಅವರು ಸಿದ್ದರಾಮಯ್ಯ ಅವರನ್ನು ಭೇಟಿಯಾಗಲಿದ್ದಾರೆ.ಸದ್ಯ 34 ಸಚಿವರ ಸಂಪುಟದಲ್ಲಿ 19 ಮಂದಿ ಹೊಸದಾಗಿ ಸೇರ್ಪಡೆಯಾಗಿದ್ದು, 1 ಸ್ಥಾನ ಮಾತ್ರ ಬಾಕಿ ಉಳಿದಿದೆ.ನಿಗಮ-ಮಂಡಳಿಗಳ ಅಧ್ಯಕ್ಷ ಸ್ಥಾನಗಳನ್ನು ನೀಡುವುದಾಗಿ ಸಿಎಂ ಭರವಸೆ ನೀಡಿದ್ದರೂ, ಶಾಸಕರ ಅಸಮಾಧಾನ ಸಂಪೂರ್ಣ ಶಮನಗೊಂಡಿಲ್ಲ.

