Dailyhunt Logo
  • Light mode
    Follow system
    Dark mode
    • Play Story
    • App Story
ಎಚ್‍ಪಿವಿ ಲಸಿಕೆ ಪಡೆದು ಗರ್ಭಕೋಶ ಕ್ಯಾನ್ಸರ್ ತಡೆಗಟ್ಟಿ : ಕೃಷ್ಣ ನಾಯ್ಕ್ ಹೇಳಿಕೆ

ಎಚ್‍ಪಿವಿ ಲಸಿಕೆ ಪಡೆದು ಗರ್ಭಕೋಶ ಕ್ಯಾನ್ಸರ್ ತಡೆಗಟ್ಟಿ : ಕೃಷ್ಣ ನಾಯ್ಕ್ ಹೇಳಿಕೆ

ಚಿತ್ರದುರ್ಗ. ಮೇ.25: ಮಹಿಳೆಯರಲ್ಲಿ ಸಾಮಾನ್ಯವಾಗಿ ಸ್ತನ ಮತ್ತು ಗರ್ಭಕೋಶದ ಕ್ಯಾನ್ಸರ್ ಪ್ರಕರಣಗಳು ಹೆಚ್ಚಾಗುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಗರ್ಭಕೋಶದ ಕ್ಯಾನ್ಸರ್ ತಡೆಗಟ್ಟಲು 14 ವರ್ಷದ ಎಲ್ಲಾ ಹೆಣ್ಣು ಮಕ್ಕಳಿಗೆ ಕಡ್ಡಾಯವಾಗಿ ಎಚ್‍ಪಿವಿ ಲಸಿಕೆ ನೀಡಲಾಗುತ್ತಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಕೃಷ್ಣ ನಾಯ್ಕ್ ತಿಳಿಸಿದರು.

ನಗರದ ಬುದ್ಧ ನಗರದ ಜಿಲ್ಲಾ ಕ್ರೀಡಾಂಗಣ ರಸ್ತೆಯಲ್ಲಿರುವ ಅಂಗನವಾಡಿ ಕೇಂದ್ರದಲ್ಲಿ ಸೋಮವಾರ ಆಯೋಜಿಸಿದ್ದ ಲಸಿಕಾ ಅಧಿವೇಶನ ಹಾಗೂ ರಾಷ್ಟ್ರೀಯ ಡೆಂಗ್ಯು ದಿನಾಚರಣೆ ಜಾಗೃತಿ ಕಾರ್ಯಕ್ರಮಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿ ಅವರು ಮಾತನಾಡಿದರು.

ಗರ್ಭಕೋಶದ ಕ್ಯಾನ್ಸರ್ ತಡೆಗಟ್ಟಲು ಲಸಿಕೆ ರಾಮಬಾಣವಾಗಿದೆ. ಸಾರ್ವಜನಿಕರು ತಮ್ಮ 14ನೇ ವರ್ಷದ ಹೆಣ್ಣು ಮಕ್ಕಳಿಗೆ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತರನ್ನು ಸಂಪರ್ಕಿಸಿ ಲಸಿಕೆ ಕೊಡಿಸಬೇಕು. ಇದರಿಂದ ಯಾವುದೇ ರೀತಿಯ ಅಡ್ಡ ಪರಿಣಾಮಗಳು ಇರುವುದಿಲ್ಲ ಎಂದು ಅವರು ತಾಯಂದಿರಿಗೆ ಮನವರಿಕೆ ಮಾಡಿಕೊಟ್ಟರು.

ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಗೋವಿಂದರಡ್ಡಿ ಕೊಣ್ಣೂರ ಮಾತನಾಡಿ, ಮಲೇರಿಯಾ, ಡೆಂಗ್ಯೂ, ಚಿಕೂನ್‍ಗುನ್ಯಾ, ಆನೆಕಾಲು ರೋಗ ಮತ್ತು ಮೆದುಳು ಜ್ವರಗಳು ಕೀಟಜನ್ಯ ರೋಗಗಳಾಗಿದ್ದು, ಸೋಂಕಿತ ಹೆಣ್ಣು ಸೊಳ್ಳೆ ಕಚ್ಚುವುದರಿಂದ ಒಬ್ಬರಿಂದೊಬ್ಬರಿಗೆ ಹರಡುತ್ತವೆ. ಸೊಳ್ಳೆಗಳನ್ನು ನಿಯಂತ್ರಿಸಿದರೆ ಈ ರೋಗಗಳನ್ನು ತಡೆಗಟ್ಟಬಹುದು ಎಂದರು.
ಈಡೀಸ್ ಈಜಿಪ್ಟಿ ಎಂಬ ಸೋಂಕಿತ ಹೆಣ್ಣು ಸೊಳ್ಳೆ ಕಚ್ಚುವುದರಿಂದ ಡೆಂಗ್ಯೂ ಮತ್ತು ಚಿಕೂನ್‍ಗುನ್ಯಾ ಹರಡುತ್ತದೆ. ನಿಂತ ಸ್ವಚ್ಛ ಮತ್ತು ತಂಪಾದ ನೀರು ಸೊಳ್ಳೆಗಳ ತವರೂರಾಗಿದ್ದು, ಸಾರ್ವಜನಿಕರು ನೀರಿನ ಪರಿಕರಗಳನ್ನು ಚೆನ್ನಾಗಿ ತಿಕ್ಕಿ ತೊಳೆದು ಮುಚ್ಚಿಡಬೇಕು. ಮಳೆಗಾಲದಲ್ಲಿ ಎಲ್ಲೂ ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ಮೈತುಂಬ ಬಟ್ಟೆ ಧರಿಸಬೇಕು ಹಾಗೂ ಯಾವುದೇ ಜ್ವರವಿದ್ದರೂ ತಕ್ಷಣ ರಕ್ತ ಪರೀಕ್ಷೆ ಮಾಡಿಸಿಕೊಳ್ಳಬೇಕು” ಎಂದು ತಿಳಿಸಿದ ಅವರು, ಪ್ರಸಕ್ತ ವರ್ಷದ ಘೋಷವಾಕ್ಯವಾದ 'ಪರಿಶೀಲಿಸಿ ಸ್ವಚ್ಛಗೊಳಿಸಿ ಮುಚ್ಚಿಡಿ' ಎಂಬುದನ್ನು ಸಾರ್ವಜನಿಕರು ಕಡ್ಡಾಯವಾಗಿ ಪಾಲಿಸಬೇಕು ಎಂದು ಕರೆ ನೀಡಿದರು.

ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಜಾನಕಿ ಅವರು ರಾಷ್ಟ್ರೀಯ ಲಸಿಕಾ ಕಾರ್ಯಕ್ರಮದ ಕುರಿತು ಮಾಹಿತಿ ನೀಡಿದರು. ಇದೇ ಸಂದರ್ಭದಲ್ಲಿ ಅಂಗನವಾಡಿಯಲ್ಲಿ ಕಡಿಮೆ ತೂಕ ಮತ್ತು ವಿಪರೀತ ಕಡಿಮೆ ತೂಕವಿರುವ ಮಕ್ಕಳ ಮಾಹಿತಿ ಪಡೆದು ದಾಖಲಾತಿಗಳನ್ನು ಪರಿಶೀಲಿಸಲಾಯಿತು. ಆಹಾರ ಸಾಮಗ್ರಿ ಹಾಗೂ ಕುಡಿಯುವ ನೀರಿನ ಶುಚಿತ್ವವನ್ನು ಕಾಯ್ದುಕೊಳ್ಳುವಂತೆ ಕಾರ್ಯಕರ್ತರಿಗೆ ಸೂಚನೆ ನೀಡಲಾಯಿತು.
ಕಾರ್ಯಕ್ರಮದಲ್ಲಿ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳು, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು, ತಾಯಂದಿರು ಹಾಗೂ ಮಕ್ಕಳು ಉಪಸ್ಥಿತರಿದ್ದರು.

Dailyhunt
Disclaimer: This content has not been generated, created or edited by Dailyhunt. Publisher: Suddione