ಪ್ರಮುಖ ಸುದ್ದಿ
ಲಸಿಕೆಯಿಂದ ಕೆಲವರಿಗೆ ಮಾತ್ರ ಅಡ್ಡಪರಿಣಾಮ, ಯಾರು ಮರಣ ಹೊಂದಿಲ್ಲ : ಸಚಿವ ಸುಧಾಕರ್

ಬೆಂಗಳೂರು: ರಾಜ್ಯದಲ್ಲಿ ಒಟ್ಟು 1,38,656 ಮಂದಿಗೆ ಕೊರೊನಾ ಲಸಿಕೆ ನೀಡಿದ್ದು, ಕೆಲವರಿಗೆ ಮಾತ್ರ ಅಡ್ಡ ಪರಿಣಾಮವಾಗಿದೆ. ಯಾರೂ ಮರಣ ಹೊಂದಿಲ್ಲ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 1,36,882 ಮಂದಿಗೆ ಕೋವಿಶೀಲ್ಡ್, 1,774 ಮಂದಿಗೆ ಕೋವ್ಯಾಕ್ಸಿನ್ ಲಸಿಕೆ ನೀಡಲಾಗಿದೆ. ಈ ಪೈಕಿ ಶೇ.2 ರಿಂದ 3.5 ಜನರಿಗೆ ಸ್ವಲ್ಪ ಅಡ್ಡಪರಿಣಾಮ ಉಂಟಾಗಿದೆ. 8,47,908 ಮಂದಿ ಲಸಿಕೆ ಪಡೆಯಲು ಹೆಸರು ನೋಂದಾಯಿಸಿಕೊಂಡಿದ್ದರು. ಇದರಲ್ಲಿ 3,27,201 ಸರ್ಕಾರಿ ಆರೋಗ್ಯ ಸಿಬ್ಬಂದಿ, 4,45,389 ಖಾಸಗಿ ಆರೋಗ್ಯ ಸಿಬ್ಬಂದಿ ಇದ್ದಾರೆ. ಒಟ್ಟು 7,72,591 ಆರೋಗ್ಯ ಸಿಬ್ಬಂದಿ ಇದ್ದಾರೆ. ಮುಂಚೂಣಿಯಲ್ಲಿ ನಿಂತು ಕೆಲಸ ಮಾಡಿದವರು 75,318 ಮಂದಿ ಇದ್ದಾರೆ. ಕೋವ್ಯಾಕ್ಸಿನ್ ನ 1,46,240 ಡೋಸ್ ಇಂದು ಬರಲಿದೆ ಎಂದರು.
ಲಸಿಕೆ ಪಡೆದರೆ ಕೋವಿಡ್ ನಿಂದ ದೂರವಿರಬಹುದು. ಕೆಲ ತಪ್ಪು ಮಾಹಿತಿಗಳಿಂದ ಅಂಜಿಕೆ ಉಂಟಾಗಿದೆ. 2 ನೇ ಹಂತದಲ್ಲಿ ರಾಜ್ಯದ ಒಂದೂವರೆಯಿಂದ ಎರಡು ಕೋಟಿ ಜನರಿಗೆ ಲಸಿಕೆ ನೀಡಬೇಕಾಗುತ್ತದೆ. ಇದು ಬಹುದೊಡ್ಡ ಸವಾಲು ಎಂದರು.