Dailyhunt
ದಸರಾ ಬಳಿಕ ಪ್ರಾಥಮಿಕ ತರಗತಿ ಆರಂಭಕ್ಕೆ ಶಿಕ್ಷಣ ಇಲಾಖೆ ಸಿದ್ಧತೆ

ದಸರಾ ಬಳಿಕ ಪ್ರಾಥಮಿಕ ತರಗತಿ ಆರಂಭಕ್ಕೆ ಶಿಕ್ಷಣ ಇಲಾಖೆ ಸಿದ್ಧತೆ

ಬೆಂಗಳೂರು: ರಾಜ್ಯದಲ್ಲಿ ಪಿಯುಸಿ, ಪ್ರೌಢಶಾಲೆ ಹಾಗೂ ಹಿರಿಯ ಪ್ರಾಥಮಿಕ ಶಾಲೆ (6ರಿಂದ 12ನೇ ತರಗತಿ) ವಿದ್ಯಾರ್ಥಿಗಳಿಗೆ ಭೌತಿಕ ತರಗತಿ ಸುಸೂತ್ರವಾಗಿ ನಡೆಯುತ್ತಿರುವ ಹಿನ್ನೆಲೆಯಲ್ಲಿ 1ರಿಂದ 5ನೇ ತರಗತಿ ವಿದ್ಯಾರ್ಥಿಗಳಿಗೂ ದಸರಾ ಬಳಿಕ ಭೌತಿಕ ತರಗತಿ ಆರಂಭಿಸಲು ಸಾರ್ವಜನಿಕ ಶಿಕ್ಷಣ ಇಲಾಖೆ ಸಿದ್ಧತೆ ಆರಂಭಿಸಿದೆ.


ಕೋವಿಡ್‌ ಕುರಿತ ಎಲ್ಲಾ ಲೇಟೆಸ್ಟ್‌ ಅಪ್‌ಡೇಟ್ಸ್‌ ಓದಿ

ಸರಕಾರ ಹಾಗೂ ಕೊರೊನಾ ತಾಂತ್ರಿಕ ತಜ್ಞರ ಸಮಿತಿಯ ಅಭಿಪ್ರಾಯ ಹಾಗೂ ಒಪ್ಪಿಗೆ ಪಡೆದೇ ಭೌತಿಕ ತರಗತಿಗಳನ್ನು ಆರಂಭಿಸಬೇಕು. ಈಗಾಗಲೇ ನಡೆಯುತ್ತಿರುವ ಭೌತಿಕ ತರಗತಿಗಳಿಗೆ ವಿದ್ಯಾರ್ಥಿಗಳು, ಪಾಲಕ, ಪೋಷಕರಿಂದಲೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದು ಇಲಾಖೆ ಮೂಲಗಳು ತಿಳಿಸಿವೆ.

ಅಕ್ಟೋಬರ್‌ 10ರಿಂದ ಹತ್ತು ದಿನಗಳ ಕಾಲ ದಸರಾ ರಜೆ ಇರಲಿದೆ. ಅದರ ಬಳಿಕ ಪ್ರಾಥಮಿಕ ವಿದ್ಯಾರ್ಥಿಗಳಿಗೆ ಭೌತಿಕ ತರಗತಿ ಆರಂಭಿಸಲು ಸರಕಾರ ಅನುಮತಿ ನೀಡುವ ಸಾಧ್ಯತೆಯಿದೆ. ರಾಜ್ಯದಲ್ಲಿ ಕೊರೊನಾ ಪ್ರಕರಣವೂ ಇಳಿಮುಖವಾಗುತ್ತಿರುವುದು ಈ ನಿರೀಕ್ಷೆಗೆ ಪೂರಕವಾಗಿದೆ. ಹೀಗಾಗಿ ಅಗತ್ಯ ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.

ಇದನ್ನೂ ಓದಿ :ಪಾಟ್ನಾ : ಎಮ್ಮೆ ಏರಿ ಬಂದು ನಾಮಪತ್ರ ಸಲ್ಲಿಸಿದ ಚುನಾವಣಾ ಅಭ್ಯರ್ಥಿ

ವಿದ್ಯಾಗಮ ಮಾದರಿ ತರಗತಿ
ಬಹುತೇಕ ಎಲ್ಲ ಶೈಕ್ಷಣಿಕ ಜಿಲ್ಲೆಗಳಲ್ಲೂ 1ರಿಂದ 5ನೇ ತರಗತಿಯ ಸರಕಾರಿ ಶಾಲೆ ಮಕ್ಕಳಿಗೆ ವಿದ್ಯಾಗಮ ಮಾದರಿಯಲ್ಲಿ ತರಗತಿಗಳು ನಡೆಯುತ್ತಿವೆ. ವಾರದಲ್ಲಿ ಎರಡು ಅಥವಾ ಮೂರು ದಿನ ಶಾಲಾವರಣ ಹೊರತುಪಡಿಸಿ, ಊರಿನ ಸಭಾಂಗಣ, ಧಾರ್ಮಿಕ ಕೇಂದ್ರ ಮೊದಲಾದ ಸ್ಥಳಗಳಲ್ಲಿ ತರಗತಿಗಳು ನಡೆಯುತ್ತಿವೆ. ಖಾಸಗಿ ಶಾಲೆಗಳು ಆನ್‌ಲೈನ್‌ ತರಗತಿ ನಡೆಸುತ್ತಿವೆ.

ಬಿಸಿಯೂಟ ಸದ್ಯಕ್ಕಿಲ್ಲ
ಶಾಲೆಯಲ್ಲೇ ಮಕ್ಕಳಿಗೆ ಬಿಸಿಯೂಟ ಹಾಗೂ ಕ್ಷೀರಭಾಗ್ಯದ ಹಾಲು ನೀಡಬೇಕು ಎಂಬ ಬೇಡಿಕೆ ಹೆಚ್ಚುತ್ತಿದೆ. ಆದರೆ, ಇದಕ್ಕೆ ಕೇಂದ್ರ ಸರಕಾರದ ಅನುಮತಿ ಅಗತ್ಯವಿದೆ. ಹೀಗಾಗಿ ವಿದ್ಯಾರ್ಥಿಗಳಿಗೆ ಆಹಾರ ಧಾನ್ಯವನ್ನೇ ವಿತರಿಸುತ್ತಿದ್ದೇವೆ. ಕೇಂದ್ರದಿಂದ ಅನುಮತಿ ಸಿಕ್ಕಿದ ಬಳಿಕ ಬಿಸಿಯೂಟ ಆರಂಭಿಸಲಾಗುವುದು ಎಂದು ಅಧಿಕಾರಿಯೊಬ್ಬರು ತಿಳಿಸಿದರು.

Dailyhunt
Disclaimer: This content has not been generated, created or edited by Dailyhunt. Publisher: Udayavani