ಬೆಳಗಾವಿ: ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ ಎಂಬ ಗೊತ್ತುವಳಿ ಅಂಗೀಕರಿಸುವಂತೆ ವಿರೋಧ ಪಕ್ಷದ ಸದಸ್ಯರು ಪಟ್ಟು ಹಿಡಿದು ಬಾವಿಗಿಳಿದು ಪ್ರತಿಭಟನೆ ನಡೆಸಿದರೂ ಇತ್ತ ಆಡಳಿತ ಪಕ್ಷದ ಸದಸ್ಯರು, ಸರ್ಕಾರದ ಮೇಲೆ ಹಾಕಿ ಠರಾವ್ (ಗೊತ್ತುವಳಿ) ಪಾಸ್ ಮಾಡಲು ನಿರಾಕರಿಸಿದ್ದರಿಂದ ಇಡೀ ಸಭೆ ಗೊಂದಲದ ಗೂಡಾಗಿ ಪರಿಣಮಿಸಿತು.
ಮಹಾನಗರ ಪಾಲಿಕೆಯ ಸಭಾಂಗಣದಲ್ಲಿ ಮಂಗಳವಾರ (ಆ.18) ನಡೆದ ಪರಿಷತ್ ಸಭೆಯಲ್ಲಿ ಆಡಳಿತ ಹಾಗೂ ವಿರೋಧ ಪಕ್ಷದ ಸದಸ್ಯರ ಮಧ್ಯೆ ವಾಗ್ವಾದ, ಮಾತಿನ ಚಕಮಕಿ ನಡೆಯಿತು.
ಠರಾವು ಅಂಗೀಕರಿಸಲು ವಿರೋಧ ಪಕ್ಷದ ಸದಸ್ಯರು ತೀವ್ರ ಒತ್ತಾಯ ಮಾಡುತ್ತಿದ್ದರೆ, ಮರಾಠಿ ನಗರಸೇವಕರು ಗಡಿ ವಿವಾದವು ಸುಪ್ರೀಂ ಕೋರ್ಟ್ನಲ್ಲಿ ಬಾಕಿ ಇರುವುದರಿಂದ ಈ ಠರಾವಿಗೆ ಆಕ್ಷೇಪ ವ್ಯಕ್ತಪಡಿಸಿದರು.
ಈ ಹಿಂದೆ ನಡೆದ ಮಹಾನಗರ ಪಾಲಿಕೆ ಸಭೆಯಲ್ಲಿ ಸರ್ಕಾರದ ನಾಮನಿರ್ದೇಶಿತ ಸದಸ್ಯ ರಮೇಶ ಸೊಂಟಕ್ಕಿ ಅವರು 'ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗʼ ಎಂಬ ಠರಾವು ಮಂಡಿಸಲು ಪ್ರಯತ್ನಿಸಿದ್ದರು. ಆದರೆ ಬೆಳಗಾವಿ ಗಡಿ ವಿವಾದವು ಸುಪ್ರೀಂ ಕೋರ್ಟ್ನಲ್ಲಿ ಬಾಕಿ ಇರುವ ಹಿನ್ನೆಲೆಯಲ್ಲಿ ಈ ವಿಷಯದ ಕುರಿತು ನಗರಾಭಿವೃದ್ಧಿ ಇಲಾಖೆಯ ಅಭಿಪ್ರಾಯ ಪಡೆಯಬೇಕು ಎಂಬ ನಿಲುವನ್ನು ಮೇಯರ್ ವ್ಯಕ್ತಪಡಿಸಿದ್ದರು.
ವಿರೋಧ ಪಕ್ಷದ ನಗರಸೇವಕರು ಠರಾವನ್ನು ತಕ್ಷಣವೇ ಅಂಗೀಕರಿಸಬೇಕೆಂದು ಒತ್ತಾಯಿಸುತ್ತಿದ್ದರೂ, ಬಿಜೆಪಿ ನಗರಸೇವಕರು ಈ ವಿಷಯದಲ್ಲಿ ಸ್ಪಷ್ಟವಾದ ನಿಲುವು ವ್ಯಕ್ತಪಡಿಸಲಿಲ್ಲ.

