ಬೆಂಗಳೂರು: ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ ಮತ್ತು ಉನ್ನತ ಶಿಕ್ಷಣದವರೆಗೆ ವಿದ್ಯಾರ್ಥಿ ವೇತನ ಒದಗಿಸಲು ಪ್ರಸ್ತುತ ಎಸೆಸೆಲ್ಸಿ ಕಲಿಯುತ್ತಿರುವವರಿಗೆ ರಾಷ್ಟ್ರೀಯ ಪ್ರತಿಭಾಶೋಧ (ಎನ್ಟಿಎಸ್) ಪರೀಕ್ಷೆ ನಡೆಸಲು ರಾಜ್ಯ ಸರಕಾರ ಮುಂದಾಗಿದೆ.
ಎನ್ಸಿಇಆರ್ಟಿ ಮಾರ್ಗದರ್ಶನದಲ್ಲಿ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಈ ಪರೀಕ್ಷೆ ನಡೆಸಲಿದೆ. ನ.30ಕ್ಕೆ ಅರ್ಜಿ ಸಲ್ಲಿಸಲು ಕೊನೆ ದಿನವಾಗಿದ್ದು, 2021ರ ಜ.24ಕ್ಕೆ ಪರೀಕ್ಷೆ ನಡೆಯಲಿದೆ. ಬೌದ್ಧಿಕ ಸಾಮರ್ಥ್ಯ ಮತ್ತು ಅಭಿಕ್ಷಮತೆ ಎಂಬ 2 ಪತ್ರಿಕೆಗಳಿರುತ್ತವೆ. ಕನ್ನಡ, ಇಂಗ್ಲಿಷ್, ಉರ್ದು ಮತ್ತು ಮರಾಠಿ ಮಾಧ್ಯಮಗಳಲ್ಲಿ ಬರೆಯಬಹುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.
ಎರಡು ಹಂತದಲ್ಲಿ ಪರೀಕ್ಷೆ ನಡೆಯಲಿದೆ.
ಪದವಿ ಪೂರ್ವ ಶಿಕ್ಷಣ ಪಡೆಯಲು ತಿಂಗಳಿಗೆ 1,200 ರೂ. ಮತ್ತು ಪದವಿ ಮತ್ತು ಸ್ನಾತಕೋತ್ತರ ಪದವಿ ಹಂತದಲ್ಲಿ ಮಾಸಿಕ 2,000 ರೂ. ಹಾಗೂ ಉನ್ನತ ಶಿಕ್ಷಣದ ಹಂತದಲ್ಲಿ ಯುಜಿಸಿ ನಿಯಮಾನುಸಾರ ವಿದ್ಯಾರ್ಥಿವೇತನ ನೀಡಲಾಗುತ್ತದೆ. ಮಾಹಿತಿಗೆ ದೂ. 080-23341615 ಸಂಖ್ಯೆಯನ್ನು ಸಂಪರ್ಕಿಸಬಹುದು.

