ಕನಕಗಿರಿ: ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಪರಿಷ್ಕರಿಸಲು ಮುಂದಾಗಿರುವುದು ಉತ್ತಮ ನಿರ್ಧಾರ ಎಂದು ಬಾಳೆಹೊನ್ನೂರಿನ ರಂಭಾಪುರಿ ಪೀಠದ ಡಾ. ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟಿದ್ದಾರೆ.
ಪಟ್ಟಣದ ರಂಭಾಪುರಿ ಸಮುದಾಯ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳು ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲು ಪ್ರಮುಖ ಕಾರಣವಾಗಿದ್ದವು.
ಆದರೆ, ಅವುಗಳ ಅನುಷ್ಠಾನದಿಂದ ರಾಜ್ಯದ ಖಜಾನೆಗೆ ಹೆಚ್ಚಿನ ಹೊರೆ ಉಂಟಾಗಿದೆ ಎಂದು ಹೇಳಿದರು.
ಅರ್ಹರಲ್ಲದವರು ಹಾಗೂ ಮೃತರ ಖಾತೆಗಳಿಗೂ ಸಹಾಯಧನ ಜಮೆಯಾಗುತ್ತಿರುವ ಕಾರಣ ಸರ್ಕಾರದ ಹಣ ಪೋಲಾಗುತ್ತಿದೆ. ಗ್ಯಾರಂಟಿ ಸೌಲಭ್ಯಗಳು ಅರ್ಹರಿಗೆ ಮಾತ್ರ ತಲುಪುವಂತೆ ಕ್ರಮ ಕೈಗೊಳ್ಳುವುದು ಅಗತ್ಯ ಎಂದು ತಿಳಿಸಿದರು.
ರಾಜ್ಯದ ಅಭಿವೃದ್ಧಿ ಕಾರ್ಯಗಳಿಗೆ ಹೆಚ್ಚಿನ ಆದ್ಯತೆ ನೀಡಿ ಹಣವನ್ನು ಸಮರ್ಪಕವಾಗಿ ಬಳಸಬೇಕು. ಜಾತಿ-ಧರ್ಮಗಳ ಸಂಘರ್ಷಕ್ಕೆ ಅವಕಾಶ ನೀಡದೇ ಎಲ್ಲ ಸಮುದಾಯಗಳ ಹಿತ ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ದೃಢ ನಿರ್ಧಾರಗಳನ್ನು ಕೈಗೊಳ್ಳಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕ ಪರಣ್ಣ ಮುನವಳ್ಳಿ, ಪ.ಪಂ. ಅಧ್ಯಕ್ಷೆ ತನುಶ್ರೀ ಟಿ.ಜೆ., ಉಪಾಧ್ಯಕ್ಷ ಕಂಠಿರಂಗ ಹಾಗೂ ಇತರರು ಉಪಸ್ಥಿತರಿದ್ದರು.

