Dailyhunt Logo
  • Light mode
    Follow system
    Dark mode
    • Play Story
    • App Story
ಕತಾರ್‌ ನಿವಾಸಿ ಮಹೇಶ್‌ ಗೌಡ ಅವರಿಗೆ ನಾಡಪ್ರಭು ಕೆಂಪೇಗೌಡ ಪ್ರಶಸ್ತಿ ಪ್ರದಾನ

ಕತಾರ್‌ ನಿವಾಸಿ ಮಹೇಶ್‌ ಗೌಡ ಅವರಿಗೆ ನಾಡಪ್ರಭು ಕೆಂಪೇಗೌಡ ಪ್ರಶಸ್ತಿ ಪ್ರದಾನ

ಬೆಂಗಳೂರು: ಕತಾರ್‌ನ ನಿವಾಸಿ, ಸಮುದಾಯ ಮುಖಂಡರು ಹಾಗೂ ಕರ್ನಾಟಕ ಸಂಘ ಕತಾರ್‌ನ ಮಾಜಿ ಅಧ್ಯಕ್ಷರಾದ ಮಹೇಶ್‌ ಗೌಡ ಅವರಿಗೆ ಸಮಾಜಸೇವೆ, ಜನಕಲ್ಯಾಣ ಹಾಗೂ ಕನ್ನಡ ಭಾಷೆ ಮತ್ತು ಸಂಸ್ಕೃತಿಯ ಉತ್ತೇಜನಕ್ಕೆ ನೀಡಿದ ಅಮೂಲ್ಯ ಕೊಡುಗೆಯನ್ನು ಪರಿಗಣಿಸಿ ಪ್ರತಿಷ್ಠಿತ ನಾಡಪ್ರಭು ಕೆಂಪೇಗೌಡ ಪ್ರಶಸ್ತಿ ಪ್ರದಾನ ಮಾಡಲಾಯಿತು.

ನಾಡಪ್ರಭು ಕೆಂಪೇಗೌಡರ 517ನೇ ಜಯಂತಿ ಅಂಗವಾಗಿ ಕೆಂಪೇಗೌಡ ಪ್ರತಿಷ್ಠಾನ ಆಯೋಜಿಸಿದ್ದ ಸಮಾರಂಭದಲ್ಲಿ, ಬೆಂಗಳೂರಿನ ಸೆಂಟ್ರಲ್‌ ಕಾಲೇಜು ಸಭಾಂಗಣದಲ್ಲಿ, ಭಾರತದ ಉಪರಾಷ್ಟ್ರಪತಿ ರಾಧಾಕೃಷ್ಣನ್‌ ಅವರು ಈ ಪ್ರಶಸ್ತಿಯನ್ನು ಪ್ರದಾನ ಮಾಡಿದರು.

ಈ ಭವ್ಯ ಸಮಾರಂಭದಲ್ಲಿ ಪರಮಪೂಜ್ಯ ನಿರ್ಮಲಾನಂದನಾಥ ಮಹಾಸ್ವಾಮೀಜಿ, ಕರ್ನಾಟಕ ರಾಜ್ಯಪಾಲರು, ಕೇಂದ್ರ ಸಚಿವರು, ಸಂಸತ್‌ ಸದಸ್ಯರು, ಶಾಸಕರು, ಹಿರಿಯ ಸರಕಾರಿ ಅಧಿ ಕಾರಿಗಳು ಹಾಗೂ ವಿವಿಧ ಕ್ಷೇತ್ರಗಳ ಗಣ್ಯರು ಉಪಸ್ಥಿತರಿದ್ದರು. ನಾಡಪ್ರಭು ಕೆಂಪೇಗೌಡರ ಆದರ್ಶಗಳು, ಮೌಲ್ಯಗಳು ಮತ್ತು ಪರಂಪರೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಸಮಾಜಕ್ಕೆ ವಿಶಿಷ್ಟ ಸೇವೆ ಸಲ್ಲಿಸಿದ ಸಾಧಕರಿಗೆ ಈ ಪ್ರಶಸ್ತಿಯನ್ನು ನೀಡಲಾಗುತ್ತದೆ.

ಮಹೇಶ್‌ ಗೌಡ ಅವರು ಹಲವು ವರ್ಷಗಳಿಂದ ಕರ್ನಾಟಕ ಸಂಘ ಕತಾರ್‌ಹಾಗೂ ವಿವಿಧ ಸಾಮಾಜಿಕ ಮತ್ತು ಸಾಂಸ್ಕೃತಿಕ ಸಂಘಟನೆಗಳ ಮೂಲಕ ಸಮಾಜ ಸೇವೆಯಲ್ಲಿ ಸಕ್ರಿಯರಾಗಿದ್ದಾರೆ. ಕರ್ನಾಟಕ ಸಂಘ ಕತಾರ್‌ನ ಮಾಜಿ ಅಧ್ಯಕ್ಷರಾಗಿ ಅವರು ಕತಾರ್‌ನ ಕನ್ನಡಿಗರನ್ನು ಒಗ್ಗೂಡಿಸುವಲ್ಲಿ, ಕನ್ನಡ ನುಡಿ-ಸಂಸ್ಕೃತಿಯನ್ನು ಪ್ರೋತ್ಸಾಹಿಸುವಲ್ಲಿ ಹಾಗೂ ಅನೇಕ ಸಾಮಾಜಿಕ, ಮಾನವೀಯ ಮತ್ತು ಸೇವಾ ಕಾರ್ಯಗಳಿಗೆ ನಾಯಕತ್ವ ವಹಿಸುವಲ್ಲಿ ಮಹತ್ವದ ಪಾತ್ರವಹಿಸಿದ್ದಾರೆ.

ಈ ಗೌರವ ಸ್ವೀಕರಿಸಿದ ಸಂದರ್ಭದಲ್ಲಿ ಮಹೇಶ್‌ ಗೌಡ ಅವರು ಪ್ರಶಸ್ತಿ ಆಯ್ಕೆ ಸಮಿತಿ, ತಮ್ಮ ಗುರುಗಳು, ಕುಟುಂಬದ ಸದಸ್ಯರು, ಸ್ನೇಹಿತರು ಹಾಗೂ ವಿಶ್ವದಾದ್ಯಂತ ಇರುವ ಕನ್ನಡ ಸಮುದಾಯಕ್ಕೆ ಹೃತೂ³ರ್ವಕ ಕೃತಜ್ಞತೆ ಸಲ್ಲಿಸಿದರು. ಈ ಪ್ರಶಸ್ತಿಯನ್ನು ತಮ್ಮ ಸೇವಾ ಪಯಣದಲ್ಲಿ ಜೊತೆಯಾಗಿ ನಿಂತ ಎಲ್ಲರಿಗೂ ಸಮರ್ಪಿಸುತ್ತಿರುವುದಾಗಿ ತಿಳಿಸಿದ ಅವರು, ಈ ಗೌರವವು ಸಮಾಜಸೇವೆಯನ್ನು ಇನ್ನಷ್ಟು ಸಮರ್ಪಣೆ, ವಿನಯ ಮತ್ತು ಜವಾಬ್ದಾರಿಯಿಂದ ಮುಂದುವರಿಸಲು ಹೊಸ ಪ್ರೇರಣೆ ನೀಡಿದೆ ಎಂದು ಹೇಳಿದರು.

ಭಾರತದ ಉಪರಾಷ್ಟ್ರಪತಿಯವರಿಂದ, ಕರ್ನಾಟಕ ರಾಜ್ಯಪಾಲರು ಸೇರಿದಂತೆ ಅನೇಕ ಗಣ್ಯರ ಸಮ್ಮುಖದಲ್ಲಿ ಈ ಪ್ರತಿಷ್ಠಿತ ಪ್ರಶಸ್ತಿಯನ್ನು ಸ್ವೀಕರಿಸಿರುವುದು ಮಹೇಶ್‌ ಗೌಡ ಅವರ ಸಾರ್ವಜನಿಕ ಸೇವಾ ಜೀವನದ ಮಹತ್ವದ ಮೈಲಿಗಲ್ಲಾಗಿದೆ. ಈ ಗೌರವವು ಅವರ ಕುಟುಂಬ, ಬಂಧು-ಬಳಗ, ಸ್ನೇಹಿತರು ಹಾಗೂ ವಿಶ್ವದಾದ್ಯಂತ ಇರುವ ಕನ್ನಡಿಗರಿಗೆ, ವಿಶೇಷವಾಗಿ ಕತಾರ್‌ನ ಕನ್ನಡ ಸಮುದಾಯಕ್ಕೆ ಹೆಮ್ಮೆಯ ವಿಷಯವಾಗಿದೆ.

Dailyhunt
Disclaimer: This content has not been generated, created or edited by Dailyhunt. Publisher: Udayavani