ಬೆಂಗಳೂರು : ಕೋವಿಡ್ ನಿಯಂತ್ರಣಕ್ಕೆ ಸರ್ಕಾರದ ಮಾರ್ಗಸೂಚಿಗಳನ್ನು ಇನ್ನೂ ಹೆಚ್ಚು ಕಟ್ಟುನಿಟ್ಟಾಗಿ ಪಾಲಿಸಬೇಕು. ಎಲ್ಲರಿಗೂ ಲಸಿಕೆಯನ್ನು ಹಾಕಬೇಕು. ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಬಾಗಲಕೋಟೆ ಹಾಗೂ ಕಲಬುರಗಿ ಜಿಲ್ಲಾಡಳಿತಕ್ಕೆ ಉಪಮುಖ್ಯಮಂತ್ರಿಗಳಾದ ಶ್ರೀ ಗೋವಿಂದ ಎಂ ಕಾರಜೋಳ ಅವರು ಸೂಚಿಸಿದರು.
ಝೂಮ್ ಮೀಟ್ ಮೂಲಕ ಬಾಗಲಕೋಟೆ ಮತ್ತು ಕಲಬುರಗಿ ಜಿಲ್ಲಾಡಳಿತದೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ಕೊರೊನಾ ಸೋಂಕಿತರಿಗೆ ಚಿಕಿತ್ಸೆಗೆ ಪೂರಕವಾಗಿ ಆಕ್ಸಿಜನ್ ಸೇರಿದಂತೆ ಪೂರಕ ಪರಿಕರಗಳ ಸಂಗ್ರಹಿಡಬೇಕು. ಈ ಕುರಿತು ಸರ್ಕಾರದ ಮಟ್ಟದಲ್ಲಿ ಯಾವುದೇ ಪ್ರಸ್ತಾವನೆಗಳಿದ್ದರೂ ಕೂಡಲೇ ಇತ್ಯರ್ಥ ಪಡಿಸಲಾಗುವುದು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಸಿಬ್ಬಂದಿ ಕೊರತೆ ಇದ್ದರೆ ಗುತ್ತಿಗೆ ಆಧಾರದಡಿ ನೇಮಕ ಮಾಡಿಕೊಳ್ಳಬೇಕು.
ಇದನ್ನೂ ಓದಿ :ಆಕಸ್ಮಿಕ ಬೆಂಕಿ : ಸುಟ್ಟು ಕರಕಲಾದ ದಿನಸಿ ಅಂಗಡಿ, ಲಕ್ಷಾಂತರ ರೂ. ನಷ್ಟ
ಜಿಲ್ಲಾ ಆಸ್ಪತ್ರೆಗಳಲ್ಲಿ ಶೇ. 60 ರಿಂದ 70 ರಷ್ಟು ಹಾಸಿಗೆಗಳನ್ನು ಕೊರೊನಾ ಸೊಂಕಿತರಿಗಾಗಿ ಮೀಸಲಿಡಬೇಕು. ಇಎನ್ಟಿ ವಾರ್ಡುಗಳಲ್ಲಿ ಕೊರೊನಾ ಸೋಂಕಿತರಿಗೆ ಹಾಸುಗೆಗಳನ್ನು ಮೀಸಲಿಡಬೇಕು. ಸರ್ಕಾರಿ ಆಸ್ಪತ್ರೆಗಳಾದ ಜಯದೇವ, ಇಎಸ್ಐ, ಕಿದ್ವಾಯಿ ಆಸ್ಪತ್ರೆಗಳಲ್ಲಿ ಶೇ. 100 ರಷ್ಟು ಹಾಸಿಗೆಗಳನ್ನು ಮೀಸಲಿಡಬೇಕು. ಸಾರ್ವಜನಿಕರು ರೋಗಲಕ್ಷಣಗಳು ಕಂಡು ಬಂದಕೂಡಲೇ ಸಮೀಪದ ಆಸ್ಪತ್ರೆಗಳಲ್ಲಿ ತಪಾಸಣೆಗೊಳಪಡಿಸಬೇಕು. ತೀವ್ರವಾಗಿ ಬಳಲುತ್ತಿರುವವರು ಆಸ್ಪತ್ರೆಗೆ ದಾಖಲಾಗಲು ಹಿಂಜರಿಯುವವರಿಗೆ ಮನವರಿಕೆ ಮಾಡಬೇಕು ಎಂದು ತಿಳಿಸಿದರು.

