ಬೀದರ: ನೀತಿ ಸಂಹಿತೆ ಉಲ್ಲಂಘನೆಯ ಆರೋಪದಡಿ ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಕೆಯಾಗಿದೆ.
ಬಸವಕಲ್ಯಾಣ ಉಪ ಚುನಾವಣೆ ಪ್ರಚಾರದ ವೇಳೆ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರ ಸ್ವಾಮಿ ಅವರು ಮತದಾರರಿಗೆ ಮನೆ ಮಂಜೂರಾತಿ ಕುರಿತು ಆಮಿಷ ತೋರಿಸಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದಾರೆ ಎಂದು ಬಿಜೆಪಿಯ ಎಂಎಲ್ಸಿ ಡಾ. ತೇಜಸ್ವಿನಿ ಗೌಡ, ಕಾನೂನು ಪ್ರಕೋಷ್ಠದ ರಾಜ್ಯ ಸಂಚಾಲ ಎಸ್.ಎಸ್ ಮಿತ್ತಲಕೋಡ ಮತ್ತಿತರರು ಚುನಾವಣಾಧಿಕಾರಿಗಳಿಗೆ ದೂರು ಸಲ್ಲಿಸಿದ್ದಾರೆ.
ಬಸವಕಲ್ಯಾಣದ ಗಾಂಧಿ ವೃತ್ತದಲ್ಲಿ ಏ.9ರಂದು ನಡೆದ ಜೆಡಿಎಸ್ ಅಭ್ಯರ್ಥಿ ಪರ ಪ್ರಚಾರ ಸಭೆಯಲ್ಲಿ ಕುಮಾರಸ್ವಾಮಿ ಅವರು, ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬಂದಲ್ಲಿ ನಗರ ಮತ್ತು ಗ್ರಾಮೀಣ ವಾಸಿಗಳ ಪ್ರತಿ ಕುಟುಂಬಕ್ಕೆ ಒಂದು ಮನೆ ಮಂಜೂರು ಮಾಡುತ್ತೇನೆ ಎಂದು ಮತದಾರರಿಗೆ ಆಮಿಷ ತೋರಿ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ.

