Dailyhunt
ಪಾಸಿಟಿವ್‌ ಬಂದ 1 ಗಂಟೆಯೊಳಗೆ ಹೋಂ ಐಸೊಲೇಷನ್‌ ಆದವರಿಗೆ ಮೆಡಿಕಲ್‌ ಕಿಟ್‌ : ಅಶ್ವತ್ಥನಾರಾಯಣ

ಪಾಸಿಟಿವ್‌ ಬಂದ 1 ಗಂಟೆಯೊಳಗೆ ಹೋಂ ಐಸೊಲೇಷನ್‌ ಆದವರಿಗೆ ಮೆಡಿಕಲ್‌ ಕಿಟ್‌ : ಅಶ್ವತ್ಥನಾರಾಯಣ

ಬೆಂಗಳೂರು: ಕೋವಿಡ್‌ ಸೋಂಕಿನ ಪಾಸಿಟಿವ್ ವರದಿ ಬಂದು ಹೋಮ್‌ ಐಸೋಲೇಷನ್‌ ಆದ ಒಂದು ಗಂಟೆಯೊಳಗೆ ಅವರ ಮನೆಗೆ ಮೆಡಿಕಲ್‌ ಕಿಟ್ ತಲುಪಿಸಲಾಗುವುದು ಎಂದು ರಾಜ್ಯ ಕೋವಿಡ್‌ ಕಾರ್ಯಪಡೆ ಅಧ್ಯಕ್ಷರಾದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಗುರುವಾರ(ಮೇ. 13) ಅಧಿಕಾರಿಗಳ ಸಭೆ ಬಳಿಕ ಮಾಧ್ಯಮಗಳ ಜತೆ ಮಾತನಾಡಿದ ಅವರು, “ರಾಜ್ಯದಲ್ಲಿ ಕಿಟ್‌ ಗಳಿಗೆ ಹೆಚ್ಚು ಬೇಡಿಕೆ ಇದೆ. ಹೀಗಾಗಿ ತಕ್ಷಣವೇ 5 ಲಕ್ಷ ಮೆಡಿಕಲ್‌ ಕಿಟ್‌ಗಳನ್ನು ಖರೀದಿ ಮಾಡಲು ಸರಕಾರ ನಿರ್ಧರಿಸಿದೆ. ಅಗತ್ಯಬಿದ್ದರೆ ಇನ್ನೂ ಹೆಚ್ಚಿನ ಕಿಟ್‌ ಖರೀದಿ ಮಾಡಲಾಗುವುದು” ಎಂದರು.

ಮನೆಗಳಲ್ಲಿಯೇ ಕ್ವಾರಂಟೈನ್‌ ಆಗಿ ಚಿಕಿತ್ಸೆ ಪಡೆಯುತ್ತಿರುವವರಿಗೆ ಯಾವುದೇ ತೊಂದರೆ ಆಗದಂತೆ ಎಚ್ಚರ ವಹಿಸಲಾಗಿದೆ.


ಕೋವಿಡ್‌ ಕುರಿತ ಎಲ್ಲಾ ಲೇಟೆಸ್ಟ್‌ ಅಪ್‌ಡೇಟ್ಸ್‌ ಓದಿ

ಈ ಮೆಡಿಕಲ್‌ ಕಿಟ್‌ ನಲ್ಲಿ ರೋಗ ಮತ್ತು ಸೋಂಕು ನಿರೋಧಕ ಔಷಧಗಳು, ವೈರಸ್‌ ನಿರೋಧಕ, ವಿಟಮಿನ್‌ ಟ್ಯಾಬ್ಲೆಟ್‌ ಸೇರಿದಂತೆ ರೋಗ ಉಲ್ಬಣವಾಗುವುದನ್ನು ತಡೆಯುವ ಎಲ್ಲ ಔಷಧಗಳೂ ಇರುತ್ತವೆ. ಜತೆಗೆ, ಸೋಂಕಿತರಿಗೆ ಅತ್ಯಗತ್ಯವಾಗಿ ಬೇಕಾಗಿರುವ ʼಕಾಲ್ಟಿಸಿನ್‌ʼ ಮಾತ್ರೆಯೂ ಇರುತ್ತದೆ. 10 ದಿನಕ್ಕೆ ಆಗುವಷ್ಟು ಔಷಧಿ ಕಿಟ್‌ ನಲ್ಲಿ ಇರುತ್ತದೆ. ಜತೆಗೆ ಟೆಲಿ ಕನ್ಸಲ್‌ ಟೆನ್ಸಿ ಸೌಲಭ್ಯವೂ ಇರುತ್ತದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಮೇ 15ರಿಂದ ಕ್ಷಿಪ್ರಗತಿಯಲ್ಲಿ ಹಂಚಿಕೆ :

ಈಗಾಗಲೇ ರಾಜ್ಯದೆಲ್ಲಡೆ ಈ ಕಿಟ್‌ ಕೊಡಲಾಗುತ್ತಿದೆ. ಆದರೆ, ತಲುಪಿಸುವುದು ಕೊಂಚ ವಿಳಂಬವಾಗುತ್ತಿತ್ತು. ಅದನ್ನು ಸರಿಪಡಿಸಲಾಗಿದೆ. ಮೇ 15ರಿಂದ ಪಾಸಿಟಿವ್‌ ಬಂದು ಹೋಮ್‌ ಐಸೊಲೇಷನ್‌ ಆದವರಿಗೆ ಒಂದು ಗಂಟೆಯಲ್ಲೇ ಕಿಟ್‌ ತಲುಪಿಸಲಾಗುವುದು. ಪ್ರತಿ ತಾಲೂಕಿನ ಆಸ್ಪತ್ರೆ, ಪ್ರಾಥಮಿಕ ಮತ್ತು ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಇವು 24/7 ಲಭ್ಯ ಇರುತ್ತವೆ ಎಂದಿದ್ದಾರೆ.

ಇನ್ನು, ಸೋಂಕಿನ ಬಗ್ಗೆ ಜನರು ಅಸಡ್ಡೆ ಮಾಡಬಾರದು. ರೋಗ ಲಕ್ಷಣ ಕಂಡು ಬಂದ ಕೂಡಲೇ ಪರೀಕ್ಷೆ ಮಾಡಿಸಿಕೊಳ್ಳಬೇಕು. ಒಂದು ವೇಳೆ ಪಾಸಿಟಿವ್‌ ಬಂದರೆ ಕ್ಷಣ ಮಾತ್ರವೂ ತಡ ಮಾಡದೇ ಚಿಕಿತ್ಸೆಯನ್ನು ಪಡೆದುಕೊಳ್ಳಬೇಕು. ಒಂದು ವೇಳೆ ತಡವಾಗಿ, ಸೋಂಕು ಎರಡನೇ ಹಂತಕ್ಕೆ ಬಂದರೆ ಆಕ್ಸಿಜನ್‌ ಸ್ಯಾಚುರೇಷನ್‌ ಕಡಿಮೆಯಾಗುವುದು, ಉಸಿರಾಟದ ತೊಂದರೆ ಆಗುವುದು ಇತ್ಯಾದಿ ಗಂಭೀರ ಸಮಸ್ಯೆಗಳು ಎದುರಾಗುತ್ತವೆ ಎಂದು ಎಚ್ಚರಿಕೆ ನೀಡಿದರು.

ಪ್ರತಿಪಕ್ಷಗಳ ನಡೆ ಸರಿಯಲ್ಲ :

ಸೋಂಕಿನ ವಿರುದ್ಧ ಸರಕಾರ ಯುದ್ಧೋಪಾದಿಯಲ್ಲಿ ಹೋರಾಟ ನಡೆಸುತ್ತಿದೆ. ಆದರೆ, ಕಷ್ಟಕಾಲದಲ್ಲಿ ಸರಕಾರಕ್ಕೆ ಹೆಗಲು ಕೊಟ್ಟು ಕೆಲಸ ಮಾಡಬೇಕಾದ ಪ್ರತಿಪಕ್ಷಗಳು ಸುಖಾಸುಮ್ಮನೆ ಆರೋಪ ಮಾಡುತ್ತಿವೆ ಎಂದು ದೂರಿದರು.

ಲಸಿಕೆ ಬಂದ ಹೊಸದರಲ್ಲಿ ನಮ್ಮ ಸಂಶೋಧಕರು ಅವಿಶ್ರಾಂತವಾಗಿ ಶ್ರಮಿಸಿ ಕಂಡು ಹಿಡಿದ ಲಸಿಕೆಯ ವಿರುದ್ಧವೇ ಕಾಂಗ್ರೆಸ್‌ ನಾಯಕರು ಅಪಪ್ರಚಾರ ನಡೆಸಿದರು. ಈಗ ನೋಡಿದರೆ, ಲಸಿಕೆ ಜಪ ಮಾಡುತ್ತಿದ್ದಾರೆ. ಕೇವಲ ರಾಜಕೀಯ ಕಾರಣಗಳಿಗಾಗಿ ಕೋವಿಡ್‌ ಸಂಕಷ್ಟವನ್ನು ಕಾಂಗ್ರೆಸ್‌ ಬಳಸಿಕೊಳ್ಳುತ್ತಿದೆ ಎಂದು ‌ಅಶ್ವತ್ಥನಾರಾಯಣ ಕಾಂಗ್ರೆಸ್ ವಿರುದ್ಧ ಕಿಡಿ ಕಾರಿದ್ದಾರೆ.

Dailyhunt
Disclaimer: This content has not been generated, created or edited by Dailyhunt. Publisher: Udayavani