ಹುಬ್ಬಳ್ಳಿ: ರಾಮನಗರದಲ್ಲಿ ಎಸ್ಐಆರ್ ಪ್ರಕ್ರಿಯೆಯಲ್ಲಿ ರಾಜ್ಯ ಸರ್ಕಾರದ ನೇರ ಹಸ್ತಕ್ಷೇಪ ಮತ್ತು ರಾಜಕೀಯ ಪ್ರಭಾವ ಎದ್ದು ಕಾಣುತ್ತಿದ್ದು, ತ್ವರಿತವಾಗಿ ನಿಷ್ಪಕ್ಷಪಾತ ತನಿಖೆ ನಡೆಸಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಆಗ್ರಹಿಸಿದ್ದಾರೆ.
ರಾಮನಗರದಲ್ಲಿ ನಡೆದ ಮತದಾರರ ವಿಶೇಷ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ.
ಇದು ಪ್ರಜಾಪ್ರಭುತ್ವದ ಆಶಯಕ್ಕೆ ದ್ರೋಹ ಬಗೆದಂತಿದೆ ಎಂದು ಜೋಶಿ ಕಿಡಿಕಾರಿದ್ದಾರೆ.
ಕೇವಲ ರಾಜಕೀಯ ಲಾಭಕ್ಕಾಗಿ ಮತದಾರರ ಪಟ್ಟಿಯನ್ನು ತಮಗೆ ಬೇಕಾದಂತೆ ತಿರುಚಲು ಸರ್ಕಾರದ ಉನ್ನತ ಮಟ್ಟದಿಂದಲೇ ವ್ಯವಸ್ಥಿತವಾಗಿ ಸಂಚು ರೂಪಿಸಿದಂತಿದ್ದು, ನಿಜಕ್ಕೂ ಆತಂಕಕಾರಿ ಬೆಳವಣಿಗೆ ಎಂದು ಸಚಿವರು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.
ಸ್ವತಂತ್ರವಾಗಿ ನಡೆಯಬೇಕಾದ ಈ ಒಂದು ಸಾಂವಿಧಾನಿಕ ಪ್ರಕ್ರಿಯೆಯಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ಈ ರೀತಿಯ ಹಸ್ತಕ್ಷೇಪ ಮತ್ತು ಸ್ಥಳೀಯ ಆಡಳಿತದ ಮೇಲಿನ ಒತ್ತಡ ಅತ್ಯಂತ ಖಂಡನೀಯ ಎಂದಿದ್ದಾರೆ.
ಕೇಂದ್ರ ಚುನಾವಣಾ ಆಯೋಗದ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ನಿಯಮಾವಳಿ, ಮಾರ್ಗಸೂಚಿಗಳನ್ನು ಸಂಪೂರ್ಣ ಗಾಳಿಗೆ ತೂರಿ, ಸ್ಥಳೀಯ ಬಿಎಲ್ ಒಗಳನ್ನು ದುರ್ಬಳಕೆ ಮಾಡಿಕೊಂಡು ನಡೆಸಿರುವ ಈ ಪರಿಷ್ಕರಣೆ ಕಾನೂನು ಬಾಹಿರವಾಗಿದೆ. ಇದರ ಹಿಂದೆ ಯಾರ ಹಿತಾಸಕ್ತಿ ಅಡಗಿದೆ ಎಂಬುದನ್ನು ಪತ್ತೆ ಹಚ್ಚಬೇಕು. ಜನಸಾಮಾನ್ಯರ ಧ್ವನಿ ಹತ್ತಿಕ್ಕಲು ನಡೆಸುತ್ತಿರುವ ಈ ವ್ಯವಸ್ಥಿತ ಪಿತೂರಿಯ ವಿರುದ್ಧ ತಕ್ಷಣವೇ ನಿಷ್ಪಕ್ಷಪಾತ ಹಾಗೂ ಸಮಗ್ರ ತನಿಖೆಯಾಗಬೇಕು ಎಂದು ಸಚಿವ ಜೋಶಿ ಒತ್ತಾಯಿಸಿದ್ದಾರೆ ಎಂದು ಸಚಿವರ ಕಚೇರಿ ಪ್ರಕಟನೆ ತಿಳಿಸಿದೆ.

