Dailyhunt Logo
  • Light mode
    Follow system
    Dark mode
    • Play Story
    • App Story
ಸಂಪುಟದಲ್ಲಿ ಮಹಿಳಾ ಪ್ರಾತಿನಿಧ್ಯವಿಲ್ಲ:ವಿಧಾನಸೌಧದ ಆವರಣದಲ್ಲಿ ಬಿಜೆಪಿ ಪ್ರತಿಭಟನೆ

ಸಂಪುಟದಲ್ಲಿ ಮಹಿಳಾ ಪ್ರಾತಿನಿಧ್ಯವಿಲ್ಲ:ವಿಧಾನಸೌಧದ ಆವರಣದಲ್ಲಿ ಬಿಜೆಪಿ ಪ್ರತಿಭಟನೆ

ಬೆಂಗಳೂರು:ಇತ್ತೀಚೆಗೆ ವಿಸ್ತರಣೆಯಾಗಿರುವ ಡಿ.ಕೆ. ಶಿವಕುಮಾರ್‌ ನೇತೃತ್ವದ ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದನ್ನು ಖಂಡಿಸಿ ಬಿಜೆಪಿ ಶಾಸಕರು ಶುಕ್ರವಾರ ವಿಧಾನಸೌಧದ ಆವರಣದಲ್ಲಿ ಪ್ರತಿಭಟನೆ ನಡೆಸಿದರು.

ಆಡಳಿತಾರೂಢ ಕಾಂಗ್ರೆಸ್‌ ಪಕ್ಷವನ್ನು 'ಮಹಿಳಾ ವಿರೋಧಿ' ಎಂದು ಆರೋಪಿಸಿದ ಬಿಜೆಪಿ ಶಾಸಕರು, ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.

ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌, ವಿಧಾನ ಪರಿಷತ್‌ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಹಲವು ಶಾಸಕರು, ಮಹಿಳಾ ಶಾಸಕರು ಪಾಲ್ಗೊಂಡಿದ್ದರು.

ವಿಧಾನಸೌಧದ ಪ್ರವೇಶ ದ್ವಾರದ ಬಳಿಯ ನಾಡದೇವಿ ಭುವನೇಶ್ವರಿ ಪ್ರತಿಮೆ ಬಳಿ ಬಿಜೆಪಿ ಶಾಸಕರು ಜಮಾಯಿಸಿ, ಬಳಿಕ ವಿಧಾನಸೌಧದತ್ತ ಮೆರವಣಿಗೆ ನಡೆಸಿದರು.

ಮೇ 28ರಂದು ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಜೂನ್‌ 3ರಂದು ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿಯಾಗಿ 13 ಸಚಿವರೊಂದಿಗೆ ಪ್ರಮಾಣವಚನ ಸ್ವೀಕರಿಸಿದ್ದರು. ಬಳಿಕ ಆಗಸ್ಟ್‌ 3ರಂದು ಸಚಿವ ಸಂಪುಟ ವಿಸ್ತರಣೆ ಮಾಡಲಾಗಿದ್ದು, 19 ಸಚಿವರನ್ನು ಹೊಸದಾಗಿ ಸೇರ್ಪಡೆಗೊಳಿಸಲಾಗಿತ್ತು. ಇದರಿಂದ ಮುಖ್ಯಮಂತ್ರಿ ಸೇರಿದಂತೆ ಸಚಿವ ಸಂಪುಟದ ಒಟ್ಟು ಬಲ 33ಕ್ಕೆ ಏರಿಕೆಯಾಗಿದೆ. ಆದರೆ, ಸಂಪುಟದಲ್ಲಿ ಈವರೆಗೆ ಯಾವುದೇ ಮಹಿಳಾ ಸಚಿವರಿಗೆ ಸ್ಥಾನ ನೀಡಲಾಗಿಲ್ಲ.

ಈ ಕುರಿತು ಮಾತನಾಡಿದ ಬಿ.ವೈ. ವಿಜಯೇಂದ್ರ, "ಮಹಿಳೆಯರಿಗೆ ಲೋಕಸಭೆಯಲ್ಲಿ ಶೇ.33ರಷ್ಟು ಮೀಸಲಾತಿ ತರುವ ಮಸೂದೆ ವಿಚಾರದಲ್ಲಿ ಸಂಸತ್ತಿನಲ್ಲಿ ಕಾಂಗ್ರೆಸ್‌ ಪಕ್ಷ ವಿರೋಧಿಸಿದೆ. ರಾಜ್ಯದಲ್ಲೂ ಮಹಿಳೆಯರಿಗೆ ಅಪಮಾನ ಮಾಡುವ ಕೆಲಸವನ್ನು ಡಿ.ಕೆ. ಶಿವಕುಮಾರ್‌ ಮಾಡಿದ್ದಾರೆ. ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ಮಹಿಳಾ ಸಚಿವರಿಲ್ಲದೇ ಅಧಿವೇಶನ ನಡೆಯುತ್ತಿದೆ" ಎಂದು ಆರೋಪಿಸಿದರು.

ಮಹಿಳೆಯರಿಗೆ ಸೂಕ್ತ ರಾಜಕೀಯ ಪ್ರಾತಿನಿಧ್ಯ ನೀಡುವಲ್ಲಿ ಕಾಂಗ್ರೆಸ್‌ ಸರ್ಕಾರ ವಿಫಲವಾಗಿದೆ ಎಂದು ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದರು.

Dailyhunt
Disclaimer: This content has not been generated, created or edited by Dailyhunt. Publisher: Udayavani