ಶಿರಸಿ: ನವದೆಹಲಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ನೇತೃತ್ವದಲ್ಲಿ ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರೊಂದಿಗೆ ಅಡಕೆ ಸಾಗಣೆ ಸಮಸ್ಯೆ ಕುರಿತು ಜು.7ರ ಮಂಗಳವಾರ ಮಹತ್ವದ ಸಭೆ ನಡೆಯಿತು.
ಸಭೆಯಲ್ಲಿ ಶಾಸಕರು ಹಾಗೂ ಅಡಕೆ ಟಾಸ್ಕ್ ಪೋರ್ಸ್ ಅಧ್ಯಕ್ಷ ಅರಗ ಜ್ಞಾನೇಂದ್ರ, ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಬಿ.
ವೈ. ರಾಘವೇಂದ್ರ, ಕೋಟ ಶ್ರೀನಿವಾಸ್ ಪೂಜಾರಿ ಸೇರಿದಂತೆ ರಾಜ್ಯದ ಪ್ರಮುಖ ಅಡಕೆ ಬೆಳೆಯುವ ಸಹಕಾರಿ ಸಂಘಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.
ಇತ್ತೀಚೆಗೆ ಮಹಾರಾಷ್ಟ್ರದಲ್ಲಿ ಅಡಕೆ ಲಾರಿಗಳನ್ನು ತಡೆಹಿಡಿದಿರುವುದರಿಂದ ಲಕ್ಷಾಂತರ ಅಡಕೆ ಬೆಳೆಗಾರರು, ಸಹಕಾರಿ ಸಂಸ್ಥೆಗಳು ಹಾಗೂ ವ್ಯಾಪಾರಿಗಳಿಗೆ ಉಂಟಾಗಿರುವ ಸಂಕಷ್ಟದ ಪರಿಸ್ಥಿತಿಯ ಸಂಪೂರ್ಣ ಘಟನೆಯ ವಿವರವನ್ನು ಈ ಸಭೆ ಮಹಾರಾಷ್ಟ್ರದ ಮುಖ್ಯಮಂತ್ರಿಗಳ ಗಮನಕ್ಕೆ ತಂದಿತು.
ವಿಷಯದ ಗಂಭೀರತೆಯನ್ನು ಮನಗಂಡ ಮಹಾರಾಷ್ಟ್ರದ ಮುಖ್ಯಮಂತ್ರಿ, ಮುಂಬರುವ ದಿನಗಳಲ್ಲಿ ಸೂಕ್ತ ದಾಖಲೆಗಳಿರುವ ಅಡಕೆ ಸಾಗಣೆಗೆ ಯಾವುದೇ ರೀತಿಯ ತೊಂದರೆಯಾಗದಂತೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
ಅಡಕೆ ಬೆಳೆ ಕರ್ನಾಟಕ ಸೇರಿದಂತೆ ಇಡೀ ದಕ್ಷಿಣ ಭಾರತದ ಲಕ್ಷಾಂತರ ರೈತ ಕುಟುಂಬಗಳ ಜೀವನಾಧಾರವಾಗಿದ್ದು, ನಮ್ಮ ಅಡಕೆ ಬೆಳೆಗಾರರ ಹಿತಾಸಕ್ತಿಯ ರಕ್ಷಣೆಗಾಗಿ ನಮ್ಮ ಪ್ರಯತ್ನಗಳು ನಿರಂತರವಾಗಿ ಮುಂದುವರೆಯಲಿದೆ ಎಂದು ಕೆನರಾ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ.

