ಕುಶಾಲನಗರ: ತಿತಿಮತಿ ವಲಯದ ಚೆನ್ನಂಗಿ ವ್ಯಾಪ್ತಿಯ ವಿವಿಧ ಕಾಫಿ ತೋಟಗಳಲ್ಲಿ ಬೀಡುಬಿಟ್ಟಿದ್ದ 21ಕ್ಕೂ ಹೆಚ್ಚು ಕಾಡಾನೆಗಳನ್ನು ದುಬಾರೆ ಮೀಸಲು ಅರಣ್ಯಕ್ಕೆ ಅಟ್ಟಲಾಗಿದೆ.
ಹಲವು ಕಾಫಿ ತೋಟಗಳಲ್ಲಿ ಎರಡು ಹಿಂಡುಗಳಲ್ಲಿ 5 ಮರಿಯಾನೆ ಸಹಿತ 21ಕ್ಕೂ ಹೆಚ್ಚು ಕಾಡಾನೆಗಳು ಬೀಡುಬಿಟ್ಟಿದ್ದವು.
ಚೆನ್ನಂಗಿ ಶಾಖೆಯ ಉಪವಲಯ ಅರಣ್ಯಾಧಿಕಾರಿ ಶಶಿ ಪಿ. ಟಿ. ನೇತೃತ್ವದ ತಂಡ ಅವುಗಳನ್ನು ಸುರಕ್ಷಿತವಾಗಿ ಕಾಡಿಗೆ ಹಿಮ್ಮೆಟ್ಟಿಸಿತು.
ದುಬಾರೆ ಮೀಸಲು ಅರಣ್ಯಕ್ಕೆ ಹಿಮ್ಮೆಟ್ಟಿಸಲಾದ ಕಾಡಾನೆಗಳು ರಾತ್ರಿ ವೇಳೆ ಕಾಡಿನಿಂದ ಮರಳಿ ಕಾಫಿ ತೋಟಗಳಿಗೆ ಲಗ್ಗೆ ಇಡುವ ಆತಂಕವಿದ್ದು, ಕಾಡಾನೆಗಳ ಹಾವಳಿಗೆ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಸಾರ್ವಜನಿಕರು ಹಾಗೂ ತೋಟದ ಮಾಲಕರು ಒತ್ತಾಯಿಸಿದ್ದಾರೆ.
ಕಾರ್ಯಾಚರಣೆಯನ್ನು ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ವನ್ಯಜೀವಿ) ಕುಮಾರ್ ಪುಷ್ಕರ್ ಅರಣ್ಯಾಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

