Dailyhunt Logo
  • Light mode
    Follow system
    Dark mode
    • Play Story
    • App Story
101 ತಾಲೂಕುಗಳು ಬರ ಪೀಡಿತ; ಶೀಘ್ರವೇ ಕೇಂದ್ರಕ್ಕೆ ಬರ ವರದಿ ಸಲ್ಲಿಕೆ : ಜಿ.ಪರಮೇಶ್ವರ್‌

101 ತಾಲೂಕುಗಳು ಬರ ಪೀಡಿತ; ಶೀಘ್ರವೇ ಕೇಂದ್ರಕ್ಕೆ ಬರ ವರದಿ ಸಲ್ಲಿಕೆ : ಜಿ.ಪರಮೇಶ್ವರ್‌

ಬೆಂಗಳೂರು : ರಾಜ್ಯದಲ್ಲಿ ಬರ ಪರಿಶೀಲನೆಯನ್ನು ನಡೆಸಿ, 101 ತಾಲೂಕುಗಳನ್ನು ಬರ ಪೀಡಿತ ಪ್ರದೇಶವೆಂದು ಘೋಷಿಸಿದ್ದೇವೆ. ಶೀಘ್ರವೇ ಬರ ವರದಿಯನ್ನು ಸಿದ್ಧಪಡಿಸಿ, ಕೇಂದ್ರ ಸರ್ಕಾರಕ್ಕೆ ಸಲ್ಲಿಸುತ್ತೇವೆ ಎಂದು ಉಪ ಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವರಾದ ಡಾ.ಜಿ.ಪರಮೇಶ್ವರ್‌ ಅವರು ತಿಳಿಸಿದರು.

ಅವರು ಇಂದು ಸದಾಶಿವನಗರದ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿ, ಇನ್ನೂ 15 ದಿನಗಳಿಗೆ ಪರಿಶೀಲನೆ ಮಾಡುತ್ತೇವೆ. ಬಳಿಕ 40ರಿಂದ 50 ತಾಲೂಕುಗಳು ಬರಪೀಡಿತ ಪ್ರದೇಶದ ವರ್ಗಕ್ಕೆ ಬರುವ ಸಾಧ್ಯತೆ ಇರುತ್ತದೆ. ಆಗ ಮತ್ತೆ ಘೋಷಣೆ ಮಾಡುತ್ತೇವೆ. ಈ ಮಧ್ಯೆ ಪ್ರಸ್ತಾವನೆಯನ್ನು ಸಿದ್ಧಪಡಿಸಿ ಕೇಂದ್ರಕ್ಕೆ ಸಲ್ಲಿಸುತ್ತೇವೆ. ಆ ಬಳಿಕ ಕೇಂದ್ರದಿಂದ ತಂಡಗಳು ಬಂದು ರಾಜ್ಯದಲ್ಲಿ ಸಮೀಕ್ಷೆ ನಡೆಸುತ್ತಾರೆ. ನಂತರ ಬರ ಪರಿಹಾರ ಬಿಡುಗಡೆಯಾಗುತ್ತದೆ ಎಂದು ಮಾಹಿತಿ ನೀಡಿದರು.

ರೈತರ ಸಾಲ ಮನ್ನಾ ಮಾಡುತ್ತಾರೆಯೇ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ಕೇಂದ್ರದಿಂದ ಸಾಲ ಮನ್ನಾ ಮಾಡಿದರೆ ಮುಗಿದೇ ಹೋಗುತ್ತದೆ. ಆಂಧ್ರ, ತೆಲಂಗಾಣ, ಮಹಾರಾಷ್ಟ್ರ, ಉತ್ತರ ಪ್ರದೇಶ, ಬಿಹಾರದ ಕೆಲವು ಭಾಗಗಳಲ್ಲಿ ಬರ ಇದೆ. ಹಾಗಾಗಿ ಇಡೀ ದೇಶದಲ್ಲಿ ಯಾವ ರೀತಿಯಲ್ಲಿ ಡಾ. ಮನಮೋಹನ್ ಸಿಂಗ್ ಅವರು 72 ಸಾವಿರ ಕೋಟಿ ಹಣವನ್ನು ಮನ್ನಾ ಮಾಡಿದ್ದರೋ, ಅದೇ ರೀತಿಯಾಗಿ ಕೇಂದ್ರ ಸರ್ಕಾರ ಮನ್ನಾ ಮಾಡಿದರೆ ದೇಶದ ಎಲ್ಲಾ ರೈತರಿಗೆ ಅನುಕೂಲವಾಗುತ್ತದೆ. ಕೇಂದ್ರ ಸರ್ಕಾರವನ್ನು ಈ ಬಗ್ಗೆ ಒತ್ತಾಯ ಮಾಡುತ್ತೇನೆ ಎಂದರು.

ನಾಗೇಂದ್ರ ಅವರ ರಾಜೀನಾಮೆ ಕುರಿತಂತೆ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು,‌ ನಾವು ನಾಗೇಂದ್ರ ಅವರಿಗೆ ರಾಜೀನಾಮೆ ನೀಡುವ ಅಗತ್ಯವಿಲ್ಲ ಎಂದು ಹೇಳಿದ್ದೇವೆ. ಚಾರ್ಜ್‌ಶೀಟ್‌ನಲ್ಲಿ ಇವರ ಹೆಸರೂ ಇಲ್ಲ. ಸದನದಲ್ಲಿ ವಿರೋಧ ಪಕ್ಷದವರು ಇದರ ಬಗ್ಗೆ ಪ್ರಶ್ನೆಗಳನ್ನು ಕೇಳಲಿ, ಅವರ ಜೊತೆಗೆ ಏನು ಮಾಹಿತಿ ಇದೆಯೋ, ಅದಕ್ಕೆಲ್ಲ ನಾವು ಉತ್ತರಗಳನ್ನು ಕೊಡುತ್ತೇವೆ ಎಂದು ಹೇಳಿದ್ದೆವು. ಆದರೆ, ಅನಾವಶ್ಯಕವಾಗಿ ವಿರೋಧ ಪಕ್ಷದವರು ರಾಜೀನಾಮೆ ನೀಡಲು ಒತ್ತಾಯ ಮಾಡುತ್ತಿದ್ದಾರೆ. ನಮ್ಮ ವರಿಷ್ಠರ ಜೊತೆಯಲ್ಲಿ ಮುಖ್ಯಮಂತ್ರಿಗಳು ಏನು ಚರ್ಚೆ ಮಾಡಿಕೊಂಡು ಬಂದಿದ್ದಾರೋ ಗೊತ್ತಿಲ್ಲ. ಮುಖ್ಯಮಂತ್ರಿಗಳ ಜೊತೆಗೆ ನಾನು ಚರ್ಚೆ ಮಾಡಿದ ಬಳಿಕ ನನಗೆ ತಿಳಿಯುತ್ತದೆ ಎಂದು ಹೇಳಿದರು.

ನೇಪಾಳದಲ್ಲಿ ಸಂಕಷ್ಟದಲ್ಲಿ ಸಿಲುಕಿರುವ ಕನ್ನಡಿಗರ ಮಾಹಿತಿ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ನನಗೆ ಈಗ ಬಂದ ಮಾಹಿತಿಯ ಪ್ರಕಾರ ಕನ್ನಡಿಗರು 12 ಜನರಿದ್ದಾರೆ. ಕರ್ನಾಟಕದಿಂದ ಇನ್ನೂ ಹೆಚ್ಚು ಜನ ಪ್ರವಾಹದ ಸಂಕಷ್ಟದಲ್ಲಿ ಸಿಲುಕಿಕೊಂಡಿರುವ ಮಾಹಿತಿ ಇದೆ. ಕಠ್ಮಂಡು ಗೆ ಅಧಿಕಾರಿಗಳನ್ನು ಕಳುಹಿಸಲಾಗುವುದು. ಅಲ್ಲಿಂದ ಮಾಹಿತಿಯನ್ನು ಪಡೆದುಕೊಳ್ಳುತ್ತೇವೆ. ಕೂಡಲೇ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದರು.

Dailyhunt
Disclaimer: This content has not been generated, created or edited by Dailyhunt. Publisher: Varthabharathi