Dailyhunt
ಹಿಂದಿ ಭಾಷೆ ಹೇರಿಕೆ ಹುನ್ನಾರ ಖಂಡಿಸಿ ಕರವೇ ಧರಣಿ

ಹಿಂದಿ ಭಾಷೆ ಹೇರಿಕೆ ಹುನ್ನಾರ ಖಂಡಿಸಿ ಕರವೇ ಧರಣಿ

ಡುಪಿ, ಎ.8: ಕರ್ನಾಟಕದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಹಿಂದಿ ಸಾಮ್ರಾಜ್ಯಶಾಹಿಗಳ ಪರವಾಗಿ ವರ್ತಿಸುತ್ತಿದ್ದು, ಕರ್ನಾಟಕ ವಿರೋಧಿ ಧೋರಣೆ ಅನುಸರಿಸುತ್ತಿದ್ದಾರೆ. ಕೇಂದ್ರ ಸರಕಾರ ಕೂಡಲೇ ಅವರನ್ನು ರಾಜ್ಯಪಾಲ ಹುದ್ದೆಯಿಂದ ವಜಾಗೊಳಿಸಬೇಕು ಎಂದು ಉಡುಪಿ ಜಿಲ್ಲಾ ಕರ್ನಾಟಕ ರಕ್ಷಣಾ ವೇದಿಕೆ(ನಾರಾಯಣ ಗೌಡ ಬಣ)ಯ ಜಿಲ್ಲಾಧ್ಯಕ್ಷ ಅ.ರಾ.ಪ್ರಭಾಕರ್ ಪೂಜಾರಿ ಆಗ್ರಹಿಸಿದ್ದಾರೆ.

ರಾಜ್ಯ ಸರಕಾರವು ಎಸೆಸೆಲ್ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ವ್ಯವಸ್ಥೆ ಜಾರಿಗೆ ತಂದ ನಿರ್ಧಾರವನ್ನು ಮರು ಪರಿಶೀಲಿಸುವಂತೆ ರಾಜ್ಯಪಾಲರು ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವುದನ್ನು ಖಂಡಿಸಿ ಉಡುಪಿ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಲ್ಲಿ ಜಿಲ್ಲಾ ಕರವೇ ವತಿಯಿಂದ ಮಂಗಳವಾರ ಹಮ್ಮಿಕೊಂಡಿದ್ದ ಧರಣಿಯನ್ನುದ್ದೇಶಿಸಿ ಅವರು ಮಾತನಾಡುತಿದ್ದರು.

ರಾಜ್ಯಪಾಲರು ಬರೆದಿರುವ ಪತ್ರದ ಹಿಂದೆ ಕರ್ನಾಟಕದಲ್ಲಿ ಶಾಶ್ವತವಾಗಿ ಹಿಂದಿ ಭಾಷೆ ಹೇರಿಕೆ ಮಾಡುವ ಹುನ್ನಾರವಿದೆ. 'ಬೆಂಗಳೂರು ಸ್ಥಳೀಯ ಭಾಷೆಗಳ ಸಂರಕ್ಷಣಾ ಸಂಘ' ಎಂಬ ಅನಾಮಧೇಯ ಸಂಘಟನೆಯ ಮನವಿಗೆ ರಾಜ್ಯ ಸರಕಾರಕ್ಕೆ ಪತ್ರ ಬರೆದಿದ್ದಾರೆ. ಅವರು ತಮ್ಮ ಕಾರ್ಯ ವ್ಯಾಪ್ತಿಯನ್ನೂ ಮೀರಿ ಕನ್ನಡಿಗರ ಆಶೋತ್ತರಗಳಿಗೆ ವಿರುದ್ಧವಾಗಿ ನಡೆದು ಕೊಂಡಿದ್ದಾರೆ. ಹಿಂದಿ ಮಾಫಿಯಾದವರ ಪರವಾಗಿ ಕಾರ್ಯ ನಿರ್ವಹಿಸುತ್ತಿ ರುವಂತೆ ತೋರುತ್ತಿದೆ. ಹೀಗಾಗಿ ಅವರು ಕರ್ನಾಟಕದಲ್ಲಿ ರಾಜ್ಯಪಾಲರಾಗಿ ಉಳಿಯುವ ನೈತಿಕತೆ ಕಳೆದು ಕೊಂಡಿದ್ದಾರೆ ಎಂದರು.

ರಾಜ್ಯಪಾಲ ಗೆಹ್ಲೋಟ್ ಹಿಂದಿ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದು ತೃತೀಯ ಭಾಷೆಯಾಗಿ ಕನ್ನಡ ಕಲಿಸಲು ತಾಕೀತು ಮಾಡಲಿ. ಅವರ ಸ್ವಂತ ರಾಜ್ಯವಾದ ಮಧ್ಯಪ್ರದೇಶದಲ್ಲಿ ಈಗಲೂ ಎರಡೇ ಭಾಷೆ ಕಲಿಸ ಲಾಗುತ್ತಿದೆ. ಮೊದಲು ಅಲ್ಲಿ ಕಡ್ಡಾಯವಾಗಿ ಮೂರನೇ ಭಾಷೆಯಾಗಿ ಕನ್ನಡ ಕಲಿಸುವಂತೆ ಅವರು ಒತ್ತಡ ಹೇರಲಿ. ನಮ್ಮ ಪ್ರಾಣ ಹೋದರೂ ನಮ್ಮ ಕನ್ನಡ ನೆಲದ ಅಸ್ಮಿತೆ ಉಳಿಸಿಕೊಳ್ಳುತ್ತೇವೆ. ರಾಜ್ಯಪಾಲರ ಪತ್ರವನ್ನು ರಾಜ್ಯ ಸರಕಾರ ಕಸದ ಬುಟ್ಟಿಗೆ ಎಸೆಯಬೇಕು ಎಂದು ಅವರು ಆಕ್ರೋಶ ವ್ಯಕ್ತ ಪಡಿಸಿದರು.

ಈ ಕುರಿತ ಮನವಿಯನ್ನು ಜಿಲ್ಲಾಡಳಿತದ ಮೂಲಕ ಕೇಂದ್ರ ಸರಕಾರಕ್ಕೆ ಸಲ್ಲಿಸಲಾಯಿತು. ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ ಮನವಿ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಕರವೇ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜು ಬರ್ಸ್ರು, ಉಪಾಧ್ಯಕ್ಷ ಶಹಾಬುದ್ದೀನ್, ನಗರ ಅಧ್ಯಕ್ಷ ಅಜರುದ್ಧೀನ್, ಜಿಲ್ಲಾ ಸಾಮಾಜಿಕ ಜಾಲತಾಣದ ಸಂಚಾಲಕ ಪುರುಷೋತ್ತಮ ಪೂಜಾರಿ, ಉಡುಪಿ ಜಿಲ್ಲಾ ಮಹಿಳಾ ಘಟಕದ ಪ್ರಮುಖರಾದ ಅಶ್ವಿನಿ ನಾಯಕ್, ಅನೂಷಾ ಆಚಾರ್ಯ, ಗೀತಾ ಪೂಜಾರಿ, ಸುನಂದಾ ಕೋಟ್ಯಾನ್, ಜಿಲ್ಲಾ ಸಂಚಾಲಕ ಕೃಷ್ಣ ಪಾಂಗಾಳ, ಗೋಪಾಲ್ ದೊರೆ, ಅಯ್ಯಪ್ಪ, ಮಹೇಶ್ ಬಿ. ಎಚ್, ರಾಗು ಪೂಜಾರಿ, ಸುಕುಮಾರ್ ಶೆಟ್ಟಿ, ಅಕ್ಷತ್, ಕಾರ್ಕಳ ತಾಲೂಕು ಉಪಾಧ್ಯಕ್ಷ ಮುಬಿನ್ ಮೊದಲಾದವರು ಉಪಸ್ಥಿತರಿದ್ದರು.

Dailyhunt
Disclaimer: This content has not been generated, created or edited by Dailyhunt. Publisher: Varthabharathi