ಕನಕಗಿರಿ : ಮಾ.2ರಂದು ಪುರಸಭೆ (ಪ.ಪಂ) ಅಧ್ಯಕ್ಷರ ಬೆಂಬಲಿಗರು ಹಾಗೂ ಸದಸ್ಯರ ನಡುವಿನ ಗಲಾಟೆಯ ಸಂದರ್ಭದಲ್ಲಿ ಮೂವರು ಪತ್ರಕರ್ತರ ಮೇಲೆ ಹಲ್ಲೆ ನಡೆದಿರುವುದು ಖಂಡನೀಯ ಎಂದು ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು ಪ್ರಧಾನ ಕಾರ್ಯದರ್ಶಿ ಪ್ರಲ್ಹಾದರೆಡ್ಡಿ ಮಾದಿನಾಳ ತಿಳಿಸಿದ್ದಾರೆ.
ಶನಿವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಸಾಮಾನ್ಯ ಸಭೆಗೆ ಹಾಜರಾಗದ ವಿಚಾರಕ್ಕೆ ಸಂಬಂಧಿಸಿದ ಜಗಳದ ವೇಳೆ ವರದಿ ಮಾಡಲು ತೆರಳಿದ್ದ ಪತ್ರಕರ್ತರ ಮೇಲೆ ನೂರಾರು ಜನರು ದೌರ್ಜನ್ಯ ಎಸಗಿದ್ದು, ಇದು ಪತ್ರಿಕಾ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಪ್ರಯತ್ನವಾಗಿದೆ ಎಂದು ಆರೋಪಿಸಿದರು.
ಘಟನೆ ನಡೆದು ಒಂದು ತಿಂಗಳು ಕಳೆದರೂ ತಪ್ಪಿತಸ್ಥರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದಿರುವುದು ಅನುಮಾನಕ್ಕೆ ಕಾರಣವಾಗಿದೆ. ಈ ಹಿನ್ನೆಲೆ, ಹಲ್ಲೆಗೆ ಕಾರಣರಾದ ಪ.ಪಂ ಅಧ್ಯಕ್ಷರು ಹಾಗೂ ಸಂಬಂಧಿತ ಸದಸ್ಯರು ಬಹಿರಂಗವಾಗಿ ಕ್ಷಮೆಯಾಚಿಸಿ, ತಪ್ಪೊಪ್ಪಿಗೆ ಪತ್ರವನ್ನು ಮಾಧ್ಯಮಗಳಿಗೆ ನೀಡಬೇಕು ಎಂದು ಒತ್ತಾಯಿಸಿದರು.
ಇಲ್ಲವಾದಲ್ಲಿ ಇದೇ ತಿಂಗಳ 11 ಮತ್ತು 12ರಂದು ಬೀದರ್ ಜಿಲ್ಲೆಯಲ್ಲಿ ನಡೆಯುವ ರಾಜ್ಯಮಟ್ಟದ ಪತ್ರಕರ್ತರ ಸಮ್ಮೇಳನದಲ್ಲಿ ಈ ಪ್ರಕರಣವನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದು, ಕಾನೂನು ಕ್ರಮಕ್ಕೆ ಮನವಿ ಸಲ್ಲಿಸಲಾಗುವುದು ಎಂದು ಎಚ್ಚರಿಸಿದರು.

