Dailyhunt Logo
  • Light mode
    Follow system
    Dark mode
    • Play Story
    • App Story
ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಬಿಜೆಪಿ ತೊರೆಯುವ ಸಾಧ್ಯತೆ: ವರದಿ

ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಬಿಜೆಪಿ ತೊರೆಯುವ ಸಾಧ್ಯತೆ: ವರದಿ

ಚೆನ್ನೈ: ಕರ್ನಾಟಕ ಕೇಡರ್‌ನ ಮಾಜಿ ಐಪಿಎಸ್ ಅಧಿಕಾರಿ ಕೆ.ಅಣ್ಣಾಮಲೈ ಬಿಜೆಪಿಯನ್ನು ತೊರೆಯುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿರುವ ಬಗ್ಗೆ deccanherald.com ವರದಿ ಮಾಡಿದೆ.

ತಮಿಳುನಾಡು ಬಿಜೆಪಿ ರಾಜ್ಯ ಘಟಕದ ಮಾಜಿ ಮುಖ್ಯಸ್ಥ ಅಣ್ಣಾಮಲೈ ಅವರು ಮಂಗಳವಾರ ದಿಲ್ಲಿಯಲ್ಲಿ ಬಿಜೆಪಿ ಅಧ್ಯಕ್ಷ ನಿತಿನ್ ನಬಿನ್ ಮತ್ತು ಪಕ್ಷದ ಇತರ ಹಿರಿಯ ನಾಯಕರನ್ನು ಭೇಟಿ ಮಾಡಲಿದ್ದಾರೆ.

ಈ ಸಂದರ್ಭದಲ್ಲಿ ಅವರು ತಮ್ಮ ರಾಜೀನಾಮೆ ಕುರಿತು ವಿವರಣೆ ನೀಡುವ ಸಾಧ್ಯತೆ ಇದೆ ಎಂದು ವರದಿಯು ತಿಳಿಸಿದೆ.

"ಕಳೆದ ಆರು ವರ್ಷಗಳಲ್ಲಿ ತನಗೆ ನೀಡಿದ್ದ ಅವಕಾಶಗಳಿಗಾಗಿ ಬಿಜೆಪಿ ನಾಯಕರಿಗೆ ಧನ್ಯವಾದ ಹೇಳಲು ಅಣ್ಣಾಮಲೈ ಮಂಗಳವಾರ ದಿಲ್ಲಿಗೆ ತೆರಳಲಿದ್ದಾರೆ. ಮುಂದಿನ ಕೆಲವು ದಿನಗಳಲ್ಲಿ ತಮ್ಮ ಬೆಂಬಲಿಗರೊಂದಿಗೆ ಭವಿಷ್ಯದ ರಾಜಕೀಯ ನಡೆಯ ಬಗ್ಗೆ ಚರ್ಚಿಸಲಿದ್ದಾರೆ" ಎಂದು ಮೂಲಗಳು ತಿಳಿಸಿವೆ.

ತಮಿಳುನಾಡು ಬಿಜೆಪಿ ಮುಖ್ಯಸ್ಥರಾಗಿದ್ದ ಅಣ್ಣಾಮಲೈ, ಕಳೆದ ವಿಧಾನಸಭಾ ಚುನಾವಣೆಗೆ ಎಐಎಡಿಎಂಕೆ ಜೊತೆಗಿನ ಮೈತ್ರಿ ಮತ್ತು ಸೀಟು ಹಂಚಿಕೆ ಮಾತುಕತೆಗಳ ಬಗ್ಗೆ ಬಿಜೆಪಿ ವಿರುದ್ಧ ಅಸಮಾಧಾನಗೊಂಡಿದ್ದರು. ಆದ್ದರಿಂದ ಅಣ್ಣಾಮಲೈಯ ಈ ನಡೆ ಅಚ್ಚರಿಯೇನಲ್ಲ ಎಂದು ವರದಿಯು ತಿಳಿಸಿದೆ.

ಮೂಲಗಳ ಪ್ರಕಾರ, 2026ರ ವಿಧಾನಸಭಾ ಚುನಾವಣೆಯಲ್ಲಿ ಟಿವಿಕೆ ಅದ್ಭುತ ಪ್ರದರ್ಶನ ನೀಡಿದ ನಂತರ ತಮಿಳುನಾಡಿನ ರಾಜಕೀಯ ಚಿತ್ರಣ ಬದಲಾಗಿದೆ ಎಂದು ಅಣ್ಣಾಮಲೈ ಭಾವಿಸಿದ್ದಾರೆ. ಯುವಕರು ತಮ್ಮ ಭಾಷೆಯನ್ನು ಮಾತನಾಡುವ ಮತ್ತು ತಮ್ಮ ಬೇಡಿಕೆಗಳಿಗಾಗಿ ಹೋರಾಡುವ ರಾಜಕಾರಣಿಗಳನ್ನು ಬಯಸುತ್ತಾರೆ. 2026ರ ಚುನಾವಣಾ ಫಲಿತಾಂಶ ತಮಿಳುನಾಡಿನಲ್ಲಿ ರಾಷ್ಟ್ರೀಯ ಪಕ್ಷಗಳ ಪ್ರಾಧಾನ್ಯತೆ ಕುಗ್ಗುತ್ತಿದೆ ಎಂಬುದನ್ನು ತೋರಿಸುತ್ತದೆ ಎಂಬ ಅಭಿಪ್ರಾಯವನ್ನು ಹೊಂದಿದ್ದಾರೆ ಎಂದು ವರದಿಯಾಗಿದೆ.

ಇನ್ನೊಂದು ಮೂಲಗಳ ಪ್ರಕಾರ, ಅಣ್ಣಾಮಲೈ ಅವರು ತಮ್ಮದೇ ಆದ ರಾಜಕೀಯ ಪಕ್ಷವನ್ನು ಪ್ರಾರಂಭಿಸಲು ಆತುರಪಡದಿರಬಹುದು. ಅವರು ತಮ್ಮ ಬೆಂಬಲಿಗರೊಂದಿಗೆ ಅಳವಡಿಸಿಕೊಳ್ಳಬೇಕಾದ ಕಾರ್ಯತಂತ್ರದ ಬಗ್ಗೆ ಚರ್ಚಿಸುವ ಸಾಧ್ಯತೆಯಿದೆ.

Dailyhunt
Disclaimer: This content has not been generated, created or edited by Dailyhunt. Publisher: Varthabharathi