ಬೆಂಗಳೂರು: ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆಯವರು ಭಾಷಣ ವೇಳೆ ಅಸ್ವಸ್ಥಗೊಂಡಿದ್ದು, ದಿಢೀರ್ ಕುಸಿದು ಬಿದ್ದಿದ್ದಾರೆ. ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬೆಂಗಳೂರಿನ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ಡಾ.ಪಿಜಿಆರ್ ಸಿಂಧ್ಯ ಅವರ ಅಭಿನಂದನಾ ಸಮಾರಂಭ ನಡೆಯುತ್ತಿತ್ತು.
ಈ ಕಾರ್ಯಕ್ರಮದ ಅತಿಥಿಗಳಾಗಿ ಸಂತೋಷ್ ಹೆಗ್ಡೆ ಭಾಗವಹಿಸಿದ್ದರು. ಸಮಾರಂಭದಲ್ಲಿ ವೇದಿಕೆ ಮೇಲೆ ನಿಂತು ಭಾಷಣ ಮಾಡುತ್ತಿದ್ದ ವೇಳೆ ಅವರು ಏಕಾಏಕಿ ಕುಸಿದು ಬಿದ್ದರು. ಸ್ಥಳದಲ್ಲಿದ್ದವರು ಅವರಿಗೆ ಶುಶ್ರೂಷೆ ನೀಡಿ ಸಮೀಪದ ಮಣಿಪಾಲ್ (ಹಿಂದಿನ ವಿಕ್ರಮ್) ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.
ಅದೇ ಕಾರ್ಯಕ್ರಮದಲ್ಲಿ ಸ್ಪೀಕರ್ ಯುಟಿ ಖಾದರ್ ಕೂಡ ಇದ್ದು, ಏಕಾಏಕಿ ವೇದಿಕೆ ಮೇಲೆ ಸಂತೋಷ ಹೆಗ್ಡೆ ಅಸ್ವಸ್ಥರಾಗುತ್ತಿದ್ದಂತೆ ಅವರನ್ನು ಖಾದರ್ ಅವರೇ ಸ್ವತಃ ಕಾರಿನಲ್ಲಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ.
ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ
ಸದ್ಯ ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ (ಐಸಿಯು) ಚಿಕಿತ್ಸೆ ನೀಡಲಾಗುತ್ತಿದೆ. ತುರ್ತು ಚಿಕಿತ್ಸಾ ಸಲಹೆಗಾರ್ತಿ ಡಾ. ಹರ್ಷಿತಾ ಅವರ ನೇತೃತ್ವದಲ್ಲಿ ವೈದ್ಯಕೀಯ ಮೇಲ್ವಿಚಾರಣೆಯಲ್ಲಿದ್ದಾರೆ. ಸದ್ಯ ಆರೋಗ್ಯ ಚೇತರಿಕೆಯಾಗಿದ್ದು, ಶೀಘ್ರದಲ್ಲಿಯೇ ಅವರನ್ನು ಡಿಸ್ಚಾರ್ಜ್ ಮಾಡಲಾಗುವುದು ಎಂದು ವೈದ್ಯರು ತಿಳಿಸಿದ್ದಾರೆ.
