ಬೆಂಗಳೂರು: ಅವಧಿ ಮುಕ್ತಾಯಗೊಂಡಿರುವ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ತಡವಾಗುತ್ತಿದೆ ಎಂದು ಕರ್ನಾಟಕ ಚುನಾವಣೆ ಆಯೋಗವು ಹೈಕೋರ್ಟ್ ಮೊರೆ ಹೋಗಿದೆ. ಚುನಾವಣೆ ನಡೆಸಲು ಅನುವಾಗುವಂತೆ ಮೀಸಲು ನಿಗದಿ ಪ್ರಕ್ರಿಯೆಗೆ ವೇಗ ನೀಡಿ ಎಂದು ರಾಜ್ಯ ಸರಕಾರಕ್ಕೆ ಕರ್ನಾಟಕ ಹೈಕೋರ್ಟ್ ಮಹತ್ವದ ಸೂಚನೆ ನೀಡಿದೆ.
ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಸೇರಿ ರಾಜ್ಯದ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ವಾರ್ಡ್ವಾರು ಮೀಸಲಿನ ಅಂತಿಮ ಅಧಿಸೂಚನೆ ಆದಷ್ಟು ಬೇಗ ಹೊರಡಿಸುವಂತೆ ನಿರ್ದೇಶನ ನೀಡುವಂತೆ ಕೋರಿ ರಾಜ್ಯ ಚುನಾವಣಾ ಆಯೋಗ ಸಲ್ಲಿಸಿರುವ ಅರ್ಜಿಯು ನ್ಯಾ. ಸುನಿಲ್ದತ್ ಯಾದವ್ ಅವರಿದ್ದ ಏಕಸದಸ್ಯ ಪೀಠದ ಮುಂದೆ ಗುರುವಾರ ವಿಚಾರಣೆಗೆ ಬಂದಿತ್ತು.
ಸರ್ಕಾರಿ ವಕೀಲರ ವಾದ ಏನು?
ಸರಕಾರದ ಪರ ಹೆಚ್ಚುವರಿ ಅಡ್ವೊಕೇಟ್ ಜನರಲ್ ಪ್ರತಿಮಾ ಹೊನ್ನಾಪೂರ ಮೆಮೊ ಸಲ್ಲಿಸಿ, ''ಚುನಾವಣೆ ನಡೆಯಬೇಕಿರುವ ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳ ವಾರ್ಡ್ ವಾರು ಮೀಸಲು ನಿಗದಿ ಪ್ರಕ್ರಿಯೆ ಚಾಲ್ತಿಯಲ್ಲಿದೆ. ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಸೇರಿ 56 ನಗರ ಸ್ಥಳೀಯ ಸಂಸ್ಥೆಗಳ ವಾರ್ಡ್ವಾರು ಮೀಸಲು ಕರಡು ಅಧಿಸೂಚನೆ ಹೊರಡಿಸಲಾಗಿದೆ. ಬೀದರ್ ನಗರಸಭೆಯನ್ನು ಮಹಾನಗರ ಪಾಲಿಕೆಯನ್ನಾಗಿ ಮೇಲ್ದರ್ಜೆಗೇರಿಸಿಧಿರುವ ಪರಿಣಾಮ ಹೊಸ ಮಹಾನಗರ ಪಾಲಿಕೆಗೆ ಕ್ಷೇತ್ರ ಮರುವಿಂಗಡಣೆ ಪ್ರಕ್ರಿಯೆ ನಡೆದಿದೆ. ಜೂನ್ವರೆಗೆ ಕಾಲಾವಕಾಶ ಕೊಟ್ಟರೆ ವಸ್ತುಸ್ಥಿತಿ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗುವುದು,'' ಎಂದರು.ರಾಜ್ಯ ಚುನಾವಣಾ ಆಯೋಗದ ಪರ ವಾದಿಸಿದ ಹಿರಿಯ ವಕೀಲ ಕೆ.ಎನ್. ಫಣೀಂದ್ರ, ''ಕಾಲಮಿತಿಯೊಳಗೆ ಚುನಾವಣೆ ನಡೆಸಲು ಅನುವು ಮಾಡಿಕೊಡುವ ನಿಟ್ಟಿನಲ್ಲಿ ಸರಕಾರ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಆಯೋಗ ಅನಿವಾರ್ಯವಾಗಿ ಹೈಕೋರ್ಟ್ ಮೆಟ್ಟಿಲೇರಿದೆ. ನಗರ ಸ್ಥಳೀಯ ಸಂಸ್ಥೆಗಳು, ತಾಪಂ, ಜಿಪಂ, ಗ್ರಾಪಂ. ಚುನಾವಣೆ ವಿಚಾರವಾಗಿ ಆಯೋಗ ಈಗಾಗಲೇ ವಿಭಾಗೀಯ ಪೀಠದಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದೆ. ಅದನ್ನು ಹೊರತುಪಡಿಸಿ ಈ ಅರ್ಜಿಯಲ್ಲಿ ಪ್ರಸ್ತಾಪಿಸಲಾಗಿರುವ ಶಿವಮೊಗ್ಗ, ಮೈಸೂರು ಮಹಾನಗರ ಪಾಲಿಕೆ ಅವಧಿ 2023ರಲ್ಲಿ, ತುಮಕೂರು ಮಹಾನಗರ ಪಾಲಿಕೆ ಅವಧಿ 2024ರಲ್ಲಿ, ದಾವಣಗೆರೆ, ಮಂಗಳೂರು ಮಹಾನಗರ ಪಾಲಿಕೆಗಳ ಅವಧಿ 2025ರಲ್ಲಿ ಮುಕ್ತಾಯಗೊಂಡಿದೆ,'' ಎಂದು ವಿವರಿಸಿದರು.
ವೇಗ ನೀಡುವಂತೆ ಸರ್ಕಾರಕ್ಕೆ ಸೂಚನೆ
ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ, ವಾರ್ಡ್ ವಾರು ಮೀಸಲು ನಿಗದಿ ಪ್ರಕ್ರಿಯೆಗೆ ವೇಗ ನೀಡುವಂತೆ ಸರಕಾರಿ ವಕೀಲರಿಗೆ ನಿರ್ದೇಶನ ನೀಡಿ ವಿಚಾರಣೆಯನ್ನು ಜೂ.19ಕ್ಕೆ ಮುಂದೂಡಿತು.
