Dailyhunt
ಅಭಿವೃದ್ಧಿ ಕಾರ್ಯ ಮುಂದುವರಿಸಲು ಮೇಟಿ ಬೆಂಬಲಿಸಿ

ಅಭಿವೃದ್ಧಿ ಕಾರ್ಯ ಮುಂದುವರಿಸಲು ಮೇಟಿ ಬೆಂಬಲಿಸಿ

ಮೀನಗಡ: ಜಿದ್ದಾಜಿದ್ದಿನಿಂದ ಕೂಡಿರುವ ಬಾಗಲಕೋಟೆ ಉಪ ಚುನಾವಣೆಯ ಪ್ರಚಾರ ಹಿನ್ನೆಲೆಯಲ್ಲಿ ಶಾಸಕ ಹಾಗೂ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ ಗುರುವಾರ ಅಮೀನಗಡ ಪಟ್ಟಣದ ವಿವಿಧ ವಾರ್ಡ್ಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಪರವಾಗಿ ಮನೆ ಮನೆಗೆ ತೆರಳಿ ಮತಯಾಚನೆ ನಡೆಸಿದರು.
ಪ್ರಚಾರಕ್ಕೆ ಮುನ್ನ ಮಂಗಳಮ್ಮ ದೇವಿಯ ದೇವಸ್ಥಾನಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದ ಅವರು, ಬಳಿಕ ವಾರ್ಡ್ ಸಂಖ್ಯೆ 06, 07 ಮತ್ತು 08 ಸೇರಿ ಹಲವು ಪ್ರದೇಶಗಳಲ್ಲಿ ಮತದಾರರನ್ನು ಭೇಟಿ ಮಾಡಿ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು. ಅಭಿವೃದ್ಧಿ ಕಾರ್ಯಗಳನ್ನು ಮುಂದುವರಿಸಲು ಕಾಂಗ್ರೆಸ್ ಅಭ್ಯರ್ಥಿಗೆ ಆಶೀರ್ವಾದ ನೀಡುವಂತೆ ಅವರು ಮತದಾರರಲ್ಲಿ ಮನವಿ ಮಾಡಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯಾನಂದ ಕಾಶಪ್ಪನವರ, ದಿ. ಎಚ್.ವೈ. ಮೇಟಿ ಅವರು ಈ ಕ್ಷೇತ್ರದ ಧೀಮಂತ ನಾಯಕರು ಆಗಿದ್ದು, ಎಲ್ಲ ವರ್ಗದ ಜನರನ್ನು ಪ್ರೀತಿ ಮತ್ತು ಗೌರವದಿಂದ ಕಾಣುತ್ತಿದ್ದರು ಎಂದು ಸ್ಮರಿಸಿದರು. ಅವರು ಆರಂಭಿಸಿದ ಅಭಿವೃದ್ಧಿ ಕಾರ್ಯಗಳನ್ನು ಮುಂದುವರಿಸಲು ಉಮೇಶ್ ಮೇಟಿ ಅವರನ್ನು ಗೆಲ್ಲಿಸಬೇಕು ಎಂದು ಮತದಾರರಲ್ಲಿ ಮನವಿ ಮಾಡಿದರು.
ಗಾಯತ್ರಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಹಾಗೂ ವಾಯವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಮಾಜಿ ಅಧ್ಯಕ್ಷ ರವೀಂದ್ರ ಕಲಬುರ್ಗಿ, ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಸಯ್ಯದ್ ಪೀರಾ ಖಾದ್ರಿ, ಪಪಂ ಸದಸ್ಯ ರಮೇಶ್ ಮುರಾಳ್, ಪಿಕೆಪಿಎಸ್ ಅಧ್ಯಕ್ಷ ಸಿದ್ದು ಬದ್ರಶೆಟ್ಟಿ, ಗ್ಯಾರಂಟಿ ಯೋಜನೆಗಳ ತಾಲೂಕು ಘಟಕದ ಅಧ್ಯಕ್ಷ ಮುತ್ತಣ್ಣ ಕಲಗೋಡಿ ಸೇರಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ಇನ್ನಷ್ಟು ಓದಿ
Dailyhunt
Disclaimer: This content has not been generated, created or edited by Dailyhunt. Publisher: Vijayvani