ದಾವಣಗೆರೆ: ಜಿಲ್ಲೆಯಲ್ಲಿ ಮುಂದಿನ ದಿನಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇರುವ ಹಿನ್ನೆಲೆಯಲ್ಲಿ, ಯಾವುದೇ ಪ್ರಾಣಾಪಾಯ ಹಾಗೂ ಸಾರ್ವಜನಿಕ ಆಸ್ತಿ ನಷ್ಟ ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸಲು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಸಂಭವನೀಯ ಮಳೆ ಅನಾಹುತ ತಡೆ ಹಾಗೂ ಅಗತ್ಯ ಕ್ರಮಗಳ ಸಂಬಂಧ ಅಧಿಕಾರಿಗಳೊಂದಿಗೆ ಗುರುವಾರ ಹಮ್ಮಿಕೊಂಡಿದ್ದ, ಗೂಗಲ್ ಮೀಟ್ ವಿಡಿಯೋ ಸಂವಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಮಳೆ-ಗಾಳಿಯಿಂದಾಗಿ ರಸ್ತೆ ಬದಿಯ ಮರಗಳು ಧರೆಗುರುಳುವ ಮತ್ತು ವಿದ್ಯುತ್ ತಂತಿಗಳು ತುಂಡಾಗಿ ಬೀಳುವ ಸಾಧ್ಯತೆ ಹೆಚ್ಚಿದೆ. ಇಂತಹ ಸಂದರ್ಭದಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ಲೋಕೋಪಯೋಗಿ ಇಲಾಖೆ, ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಬೆಸ್ಕಾಂ ಅಧಿಕಾರಿಗಳು ಪರಸ್ಪರ ಸಮನ್ವಯದೊಂದಿಗೆ ಸನ್ನದ್ಧರಾಗಿರಬೇಕು. ತುರ್ತು ತಂಡಗಳು ತಕ್ಷಣವೇ ಸ್ಥಳಕ್ಕೆ ಧಾವಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ತಿಳಿಸಿದರು.ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ನಗರ ಮತ್ತು ಗ್ರಾಮೀಣ ಪ್ರದೇಶಗಳಿಗೆ ಭೇಟಿ ನೀಡಿ, ನಿರ್ಮಿತ ಬೃಹತ್ ಕಾಂಪೌಂಡ್ ಗೋಡೆಗಳ ಸುಸ್ಥಿತಿಯನ್ನು ಪರಿಶೀಲಿಸಬೇಕು. ಅಪಾಯದ ಸ್ಥಿತಿಯಲ್ಲಿರುವ ಬಗ್ಗೆ ಸಂಬಂಧಪಟ್ಟವರಿಗೆ ಮುನ್ನೆಚ್ಚರಿಕೆ ನೀಡಬೇಕು. ಅಲ್ಲದೆ, ಜಿಲ್ಲೆಯಲ್ಲಿರುವ ಶಿಥಿಲಾವಸ್ಥೆಯ ಕಟ್ಟಡಗಳನ್ನು ಗುರುತಿಸಿ, ಅಲ್ಲಿ ವಾಸಿಸುವ ಜನರನ್ನು ತಕ್ಷಣವೇ ತೆರವುಗೊಳಿಸಿ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲು ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದರು.ಮಳೆ ನೀರು ಸರಾಗವಾಗಿ ಹರಿಯಲು ಅಡ್ಡಿಯಾದ ಚರಂಡಿಗಳನ್ನು ತಕ್ಷಣವೇ ಸ್ವಚ್ಛಗೊಳಿಸಬೇಕು. ಕೃತಕ ಪ್ರವಾಹ ಸೃಷ್ಟಿಯಾಗದಂತೆ ನೋಡಿಕೊಳ್ಳಬೇಕು. ಸಾರ್ವಜನಿಕರ ದೂರು ಹಾಗೂ ತುರ್ತು ನೆರವಿಗಾಗಿ ಎಲ್ಲಾ ತಾಲ್ಲೂಕು ಮತ್ತು ಗ್ರಾಮ ಪಂಚಾಯಿತಿಗಳಲ್ಲಿ ದಿನದ 24 ಗಂಟೆಯೂ ಕಾರ್ಯನಿರ್ವಹಿಸುವ ಸಹಾಯವಾಣಿ ಕೇಂದ್ರಗಳನ್ನು ಆರಂಭಿಸಿ, ಅವುಗಳ ದೂರವಾಣಿ ಸಂಖ್ಯೆಗಳನ್ನು ಸಾರ್ವಜನಿಕರಿಗೆ ತಿಳಿಯುವಂತೆ ಪ್ರಕಟಿಸಬೇಕು ಎಂದರು.ಸಿಡಿಲು ಹಾಗೂ ಮಳೆ ಹಾನಿ ಅನಾಹುತ ಸಂದರ್ಭದಲ್ಲಿ ತುರ್ತು ಚಿಕಿತ್ಸೆಗಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಎಲ್ಲಾ ಆಸ್ಪತ್ರೆಗಳಲ್ಲಿ ಅಗತ್ಯ ಔಷಧಗಳನ್ನು ದಾಸ್ತಾನು ಇರಿಸಿಕೊಳ್ಳಬೇಕು. ಸಿಡಿಲು ಬಡಿಯುವ ಮುನ್ಸೂಚನೆ ನೀಡುವ 'ದಾಮಿನಿ' ಆಯಪ್ ಅನ್ನು ಪ್ರತಿಯೊಬ್ಬ ಸಾರ್ವಜನಿಕರು ಹಾಗೂ ಅಧಿಕಾರಿಗಳು ಅಳವಡಿಸಿಕೊಳ್ಳುವ ಮೂಲಕ ಮುನ್ನೆಚ್ಚರಿಕೆ ವಹಿಸಬೇಕು ಎಂದು ಮನವಿ ಮಾಡಿದರು.ವಿಪತ್ತು ನಿರ್ವಹಣಾ ತಂಡ, ಲೋಕೋಪಯೋಗಿ ಇಲಾಖೆ, ನಗರ ಸ್ಥಳೀಯ ಸಂಸ್ಥೆಗಳು, ಆರೋಗ್ಯ ಇಲಾಖೆ, ಬೆಸ್ಕಾಂ, ಅಗ್ನಿಶಾಮಕದಳ ಅಧಿಕಾರಿಗಳು ಸನ್ನದ್ಧರಾಗಿದ್ದು, ಕೇಂದ್ರ ಸ್ಥಾನದಲ್ಲಿದ್ದುಕೊಂಡು ಪರಿಸ್ಥಿತಿ ಅವಲೋಕಿಸಬೇಕು. ವಿಪತ್ತು ನಿರ್ವಹಣಾ ಕಾರ್ಯದಲ್ಲಿ ಯಾವುದೇ ವಿಳಂಬ ಅಥವಾ ನಿರ್ಲಕ್ಷ ತೋರಬಾರದು ಎಂದು ಸೂಚನೆ ನೀಡಿದರು. ಸಭೆಯಲ್ಲಿ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಇನ್ನಷ್ಟು ಓದಿ
ಇನ್ನಷ್ಟು ಓದಿ

