Dailyhunt Logo
  • Light mode
    Follow system
    Dark mode
    • Play Story
    • App Story
ಏ23 ಮತ್ತು 24ರಂದು ಸಿಇಟಿ ಪರೀಕ್ಷೆ: ಎಡಿಸಿ ಬಿ.ಸಿ.ಶಿವಾನಂದಮೂರ್ತಿ ಮಾಹಿತಿ

ಏ23 ಮತ್ತು 24ರಂದು ಸಿಇಟಿ ಪರೀಕ್ಷೆ: ಎಡಿಸಿ ಬಿ.ಸಿ.ಶಿವಾನಂದಮೂರ್ತಿ ಮಾಹಿತಿ

ಮಂಡ್ಯ:ಜಿಲ್ಲೆಯಲ್ಲಿ 2025-26ನೇ ಸಾಲಿನ ಸಿ.ಇ.ಟಿ ಪ್ರವೇಶ ಪರೀಕ್ಷೆ ಏ.23 ಮತ್ತು 24 ರಂದು ನಡೆಯಲಿದೆ. ಈ ಹಿನ್ನೆಲೆಯಲ್ಲಿ ಪರೀಕ್ಷೆಯನ್ನು ವ್ಯವಸ್ಥಿತವಾಗಿ ಆಯೋಜನೆ ಮಾಡಬೇಕು. ಜತೆಗೆ ಯಾವುದೇ ಲೋಪದೋಷವಾಗದಂತೆ ಕ್ರಮ ವಹಿಸಬೇಕು ಎಂದು ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಬಿ.ಸಿ.ಶಿವಾನಂದಮೂರ್ತಿ ಎಚ್ಚರಿಕೆ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಿ.ಇ.ಟಿ ಪ್ರವೇಶ ಪರೀಕ್ಷೆಯು ಜಿಲ್ಲೆಯಲ್ಲಿ ಎರಡು ತಾಲೂಕಿನ ಕೇಂದ್ರಗಳಲ್ಲಿ ನಡೆಯಲಿದೆ. ಅದರಂತೆ ಕೆ.ಆರ್.ಪೇಟೆ ತಾಲೂಕಿನಲ್ಲಿ ಮೂರು ಹಾಗೂ ಮಂಡ್ಯ ತಾಲೂಕಿನ ಒಂಬತ್ತು ಕೇಂದ್ರ ಸೇರಿದಂತೆ ಒಟ್ಟು 12 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ ಎಂದು ತಿಳಿಸಿದರು.
ಕೆ.ಆರ್.ಪೇಟೆ ತಾಲೂಕಿನ ಮೂರು ಕೇಂದ್ರದಲ್ಲಿ ಪರೀಕ್ಷೆ ಬರೆಯಲು ಒಟ್ಟು 1,599 ವಿದ್ಯಾರ್ಥಿಗಳು ನೋಂದಣಿಯಾಗಿದ್ದಾರೆ. ಅಂತೆಯೇ ಮಂಡ್ಯ ತಾಲೂಕಿನ 9 ಕೇಂದ್ರದಲ್ಲಿ ಪರೀಕ್ಷೆ ಬರೆಯಲು ಒಟ್ಟು 4,660 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. ಪರೀಕ್ಷೆಯನ್ನು ಪಾರದರ್ಶಕತೆಯಿಂದ ನಡೆಸಲು ವೆಬ್ ಕಾಸ್ಟಿಂಗ್ ಮೇಲುಸ್ತುವಾರಿಯನ್ನು ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ನೋಡಿಕೊಳ್ಳಬೇಕು. ಪರೀಕ್ಷೆ ನಡೆಯುವ ದಿನಗಳಂದು ಕೇಂದ್ರಗಳ ಸುತ್ತಲೂ 200 ಮೀ ಸುತ್ತಳತೆಯಲ್ಲಿ ಐ.ಪಿ.ಸಿ ಸೆಕ್ಷನ್ 144ನೇ ಕಲಂ ಜಾರಿಗೊಳಿಸಲು ಮತ್ತು ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ ಜೆರಾಕ್ಸ್ ಅಂಗಡಿಗಳನ್ನು ಮುಚ್ಚಿಸುವಂತೆ ಅಧಿಕಾರಿಗಳು ಕ್ರಮ ವಹಿಸಬೇಕು ಎಂದು ತಿಳಿಸಿದರು.
ಪ್ರಶ್ನೆ ಪತ್ರಿಕೆಗಳನ್ನು ಜಿಲ್ಲಾ ಖಜಾನೆಯಿಂದ ಸಂಬಂಧಪಟ್ಟ ಪರೀಕ್ಷಾ ಕೇಂದ್ರಗಳಿಗೆ ತಲುಪಿಸಲು ಎ/ಬಿ ದರ್ಜೆಗಿಂತ ಕಡಿಮೆ ಇಲ್ಲದ (ತಹಶೀಲ್ದಾರರು, ಬಿ.ಇ.ಒ ಹಾಗೂ ಪ್ರಾಂಶುಪಾಲರುಗಳನ್ನೊಳಗೊಂಡ ತ್ರಿ ಸದಸ್ಯ ಸಮಿತಿ) ಅಧಿಕಾರಿಗಳನ್ನೊಳಗೊಂಡಂತೆ 4 ತಂಡಗಳ ಪ್ರಶ್ನೆಪತ್ರಿಕೆ ಮಾರ್ಗಾಧಿಕಾರಿಗಳ ವಿಶೇಷ ತಂಡವನ್ನು ಜಿಲ್ಲಾಧಿಕಾರಿ ನೇಮಕ ಮಾಡಿ ಆದೇಶಿಸಿರುತ್ತಾರೆ. ಕೆ.ಆರ್.ಪೇಟೆ ತಾಲೂಕಿಗೆ ಸಂಬಂಧಿಸಿದಂತೆ ಬೆಳಗ್ಗಿನ ಅವಧಿಯ ಪ್ರಶ್ನೆಪತ್ರಿಕೆಯೊಂದಿಗೆ ಮಧ್ಯಾಹ್ನದ ಪ್ರಶ್ನೆ ಪತ್ರಿಕೆಗಳನ್ನು ತ್ರಿಸದಸ್ಯ ಸಮಿತಿಯವರೊಂದಿಗೆ ಕಳುಹಿಸಲಾಗುವುದು. ಅಂತೆಯೇ ಮಧ್ಯಾಹ್ನದ ಪ್ರಶ್ನೆ ಪತ್ರಿಕೆಗಳನ್ನು ಕೆ.ಆರ್.ಪೇಟೆ ತಾಲೂಕು ಖಜಾನೆಯಲ್ಲಿ ಇರುಸುವಂತೆ ಖಜಾನಾಧಿಕಾರಿಗೆ ತಿಳಿಸಬೇಕು. ಅದೇ ರೀತಿ ಬೆಳಗ್ಗಿನ ಉತ್ತರ ಪತ್ರಿಕೆಗಳನ್ನು ಪರೀಕ್ಷೆ ಮುಗಿದ ನಂತರ ಆಯಾ ದಿನದಂದ ಜಿಲ್ಲಾ ಖಜಾನೆಗೆ ಠೇವಣಿ ಮಾಡಬೇಕು. ಮಧ್ಯಾಹ್ನದ ಪರೀಕ್ಷೆ ಮುಗಿದ ನಂತರ ಆಯಾ ದಿನದಂದೇ ಎರಡು ಅವಧಿಯ ಉತ್ತರ ಪತ್ರಿಕೆಗಳನ್ನು ಜಿಲ್ಲಾ ಖಜಾನೆಗೆ ರವಾನಿಸಬೇಕು ಎಂದು ಸೂಚನೆ ನೀಡಿದರು.

ಎಲ್ಲ ಪರೀಕ್ಷಾ ಕೇಂದ್ರಗಳಿಗೆ ಸೂಕ್ತ ಪೊಲೀಸ್ ಬಂದೋಬಸ್ತ್ ಒದಗಿಸಬೇಕು. ಹಾಗೂ ಪ್ರಶ್ನೆಪತ್ರಿಕೆಗಳನ್ನು ಖಜಾನೆಯಿಂದ ಪರೀಕ್ಷಾ ಕೇಂದ್ರಗಳಿಗೆ ಮತ್ತು ಪರೀಕ್ಷೆ ಮುಗಿದ ನಂತರ ಉತ್ತರ ಪತ್ರಿಕೆ ಬಂಡಲ್‌ಗಳನ್ನು ಖಜಾನೆಗೆ ಕೇಂದ್ರಗಳಿಗೆ ಸುರಕ್ಷಿತವಾಗಿ ತಲುಪಿಸುವವರೆಗೂ ಪ್ರಶ್ನೆಪತ್ರಿಕೆ ಮಾರ್ಗಾಧಿಕಾರಿಗಳ ತಂಡಕ್ಕೆ ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಬೇಕು. ವಿದ್ಯಾರ್ಥಿಗಳನ್ನು ತಪಾಸಣೆ ಮಾಡಲು ಇಬ್ಬರು ಪಿ.ಸಿ ಗಳು(ಮಹಿಳಾ ಸಿಬ್ಬಂದಿಯನ್ನೊಳಗೊಂಡಂತೆ) ಗೃಹರಕ್ಷಕ ದಳದ ಸಿಬ್ಬಂದಿಯನ್ನು ನಿಯೋಜಿಸಬೇಕು. ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳಲ್ಲಿ ರಿಸ್ಟ್ ವಾಚ್, ಮೊಬೈಲ್ ಹಾಗೂ ಇತ್ಯಾದಿ ಎಲೆಕ್ಟ್ರಾನಿಕ್ ಸಾಧನಗಳ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಬೇಕು. ಹಾಗೂ ಪ್ರತಿ ಪರೀಕ್ಷಾ ಕೇಂದ್ರಗಳಲ್ಲಿ ಕಡ್ಡಾಯವಾಗಿ ಗೋಡೆ ಗಡಿಯಾರವನ್ನು ಹಾಕಬೇಕು ಎಂದು ಸೂಚಿಸಿದರು.
ವಿಜ್ಞಾನ ಬೋಧಿಸುವ ಉಪನ್ಯಾಸಕರನ್ನು ಪರೀಕ್ಷಾ ಕೇಂದ್ರದ ಕರ್ತವ್ಯಕ್ಕೆ ನೇಮಕ ಮಾಡಿಕೊಳ್ಳುವಂತಿಲ್ಲ. ಹಾಗೂ ಸಿ.ಇ.ಟಿ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳ ಪಾಲಕರು ಪರೀಕ್ಷಾ ಕರ್ತವ್ಯದಲ್ಲಿ ಪಾಲ್ಗೊಳ್ಳಬಾರದಂತೆ ಕ್ರಮ ವಹಿಸಬೇಕು. ಹೆಚ್ಚುವರಿ ಕೊಠಡಿ ಮೇಲ್ವಿಚಾರಕರನ್ನು ನೇಮಕ ಮಾಡಿಕೊಳ್ಳಬೇಕು. ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಆರೋಗ್ಯ ಇಲಾಖೆಯಿಂದ ವೈದ್ಯಾಧಿಕಾರಿಗಳನ್ನು ನೇಮಿಸಬೇಕು. ಹಾಗೂ ಪ್ರಥಮ ಚಿಕಿತ್ಸೆಗೆ ಬೇಕಾಗುವ ಔಷಧ ಒದಗಿಸಬೇಕು. ವೆಬ್ ಕಾಸ್ಟಿಂಗ್ ಮಾಡುವ ಸಂಬಂಧ ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಸಿ.ಸಿ ಟಿವಿ ಕ್ಯಾಮೆರಾ ವ್ಯವಸ್ಥೆಯನ್ನು ಮಾಡಬೇಕು ಎಂದು ತಿಳಿಸಿದರು.

ಸಭೆಯಲ್ಲಿ ಅಪರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕೆ.ಮೋಹನ್, ಜಿಲ್ಲಾಧಿಕಾರಿ ಕಚೇರಿಯ ತಹಸೀಲ್ದಾರ್ ರವಿಶಂಕರ್, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಸಿ.ಚಲುವಯ್ಯ, ಕ್ಷೇತ್ರ ಶಿಕ್ಷಣಾಧಿಕಾರಿ ಮಹದೇವು ಇತರರಿದ್ದರು.

ಇನ್ನಷ್ಟು ಓದಿ
Dailyhunt
Disclaimer: This content has not been generated, created or edited by Dailyhunt. Publisher: Vijayvani