Dailyhunt
ಕುಡಿವ ನೀರಿಗೆ ತೊಂದರೆ ಆಗದಂತೆ ನಿಗಾವಹಿಸಿ

ಕುಡಿವ ನೀರಿಗೆ ತೊಂದರೆ ಆಗದಂತೆ ನಿಗಾವಹಿಸಿ

ಹಾಸನ:ಜಿಲ್ಲೆಯಲ್ಲಿ ಕುಡಿಯುವ ನೀರಿಗೆ ಯಾವುದೇ ತೊಂದರೆ ಆಗದಂತೆ ನಿಗಾವಹಿಸಿ ಸಾರ್ವಜನಿಕರಿಗೆ ಗುಣಮಟ್ಟದ ಶುದ್ಧ ನೀರು ಒದಗಿಸಲು ಅಧಿಕಾರಿಗಳು ಸಮನ್ವಯತೆಯಿಂದ ಸೂಕ್ತ ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿ ಲತಾ ಕುಮಾರಿ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ಆಯೋಜಿಸಿದ್ದ ಕುಡಿಯುವ ನೀರಿನ ಸಮಸ್ಯೆ ಹಾಗೂ ಇತರ ವಿಷಯಗಳಿಗೆ ಸಂಬಂಧಿಸಿದಂತೆ ಸಭೆ ನಡೆಸಿ ಮಾತನಾಡಿದ ಅವರು, ಕುಡಿಯುವ ನೀರಿನ ಪೂರೈಕೆಗಾಗಿ ಸಮರ್ಪಕವಾಗಿ ನಿರ್ವಹಣೆ ಮಾಡುವ ನಿಟ್ಟಿನಲ್ಲಿ ಪ್ರತಿವಾರ ಒಂದು ದಿನ ನಿಗದಿಪಡಿಸಿಕೊಂಡು ಟಾಸ್ಕ್ ಫೋರ್ಸ್ ಸಮಿತಿ ಸಭೆ ನಡೆಸಿ ಸಮಸ್ಯೆ ಕಂಡುಬಂದಲ್ಲಿ ತಕ್ಷಣ ಪರಿಹರಿಸಲು ಕ್ರಮಕೈಗೊಳ್ಳಬೇಕು ಎಂದು ಸೂಚಿಸಿದರು.
ಯಾವುದೇ ತಾಲೂಕಿನಲ್ಲಿ ಕುಡಿಯುವ ನೀರಿಗೆ ಸಂಬಂಧಿಸಿದಂತೆ ದೂರುಗಳು ಬಂದಲ್ಲಿ ತಹಸೀಲ್ದಾರ್, ಕಾರ್ಯನಿರ್ವಹಣಾಧಿಕಾರಿ ಹಾಗೂ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಹೇಳಿದರು.
ಕುಡಿಯುವ ನೀರಿನ ಮಾದರಿಗಳನ್ನು ಪರೀಕ್ಷೆ ನಡೆಸಿ ಕುಡಿಯಲು ಯೋಗ್ಯವಾಗಿದೆಯೇ ಎಂಬುದನ್ನು ಪರಿಶೀಲಿಸಿ ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಕಳೆದ ಮೂರ್ನಾಲ್ಕು ವರ್ಷಗಳಲ್ಲಿ ನೀರಿನ ಸಮಸ್ಯೆ ಕಂಡು ಬಂದಿರುವುದನ್ನು ಗಮನಿಸಿ ದುರ್ಬಲ ಪ್ರದೇಶಗಳನ್ನು ಗುರುತಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.
ನೀರಿನ ಟ್ಯಾಂಕ್ ಸ್ವಚ್ಛಗೊಳಿಸಲು ಕ್ರಮವಹಿಸಿ ಜತೆಗೆ ರಿಪೇರಿಗೆ ಆದ್ಯತೆ ನೀಡಬೇಕು ಎಂದು ತಿಳಿಸಿದರು. 24*7 ಕಂಟ್ರೋಲ್ ರೂಂ ಕಾರ್ಯನಿರ್ವಹಿಸಬೇಕು. ಸಾರ್ವಜನಿಕರಿಗೆ ತ್ವರಿತವಾಗಿ ಸ್ಪಂದಿಸಬೇಕು. ಖಾಸಗಿ ಅವರು ಕ್ಯಾನ್‌ಗಳಲ್ಲಿ ನೀರು ತುಂಬಿಸಿ ಸರಬರಾಜು ಮಾಡುತ್ತಿರುವ ನೀರನ್ನು ಕೂಡ ಪರಿಶೀಲಿಸಿ ನೀರಿನ ಗುಣಮಟ್ಟವನ್ನು ಪರೀಕ್ಷೆಗೆ ಒಳಪಡಿಸಲು ಅಧಿಕಾರಿಗಳಿಗೆ ತಿಳಿಸಿದರು.
ಹೊಸ ಬೋರ್ ವೆಲ್ ಕೊರೆಯುವಂತಿಲ್ಲ. ಇರುವ ಹಳೆಯ ಬೋರ್‌ವೆಲ್‌ಗಳನ್ನು ರಿಪೇರಿಗೆ ಕ್ರಮವಹಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದರಲ್ಲದೆ, ಪತ್ರಿಕೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಕುರಿತು ಪ್ರಕಟವಾಗುವ ವರದಿ ತುಣುಕುಗಳನ್ನು ಒಂದು ದಾಖಲಿಸಿ ತಕ್ಷಣ ಸಮಸ್ಯೆ ಪರಿಹರಿಸಲು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ದಾಖಲಿಸುವುದರ ಜತೆಗೆ ವರದಿ ನೀಡುವಂತೆ ಸೂಚಿಸಿದರು.
ಜಿಲ್ಲೆಯಲ್ಲಿರುವ ಜಲಾಶಯಗಳಲ್ಲಿ, ಕೆರೆಗಳಲ್ಲಿ ಲಭ್ಯವಿರುವ ನೀರಿನ ಪ್ರಮಾಣದ ಬಗ್ಗೆ ವರದಿ ನೀಡಬೇಕು. ಕುಡಿಯುವ ನೀರಿಗೆ ಯಾವುದೇ ಸಮಸ್ಯೆಯಾಗದಂತೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗದಂತೆ ಗಮನಹರಿಸಿ ಯಾವ ಯಾವ ಸಂದರ್ಭದಲ್ಲಿ ವಿದ್ಯುತ್ ವ್ಯತ್ಯಯ ಆಗಿದೆ ಎಂದು ನಮೂದಿಸಲು ಕ್ರಮವಹಿಸಿ ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಕುಡಿಯುವ ನೀರಿಗೆ ಸಂಬಂಧಿಸಿದಂತೆ ಸಾರ್ವಜನಿಕರು ದೂರು ಸಲ್ಲಿಸಲು ಅನುಕೂಲವಾಗುವಂತೆ ಸಹಾಯವಾಣಿ ಸಂಖ್ಯೆಯನ್ನು ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ತಹಸೀಲ್ದಾರ್ ಕಚೇರಿಯ ನೋಟಿಸ್ ಬೋರ್ಡ್‌ನಲ್ಲಿ ಪ್ರಕಟಿಸಲು ಸೂಚನೆ ನೀಡಿದರು.
ಯಾವುದೇ ಕಲುಷಿತ ನೀರು ಕುಡಿಯುವ ನೀರಿನ ಪೈಪ್‌ನೊಂದಿಗೆ ಸೇರ್ಪಡೆ ಆಗದಂತೆ ನಿಗಾವಹಿಸಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬಾಣಾವರದಲ್ಲಿ ಫ್ಲೋರೈಡ್ ಅಂಶವಿರುವ ನೀರು ಸೇವನೆಯಿಂದ ಜನರ ಆರೋಗ್ಯದ ಮೇಲೆ ಉಂಟಾಗಿರುವ ದುಷ್ಪರಿಣಾಮವನ್ನು ಶಮನಗೊಳಿಸಲು ಏನೇನು ಕ್ರಮ ಕೈಗೊಳ್ಳಬೇಕು ಎಂದು ಪರಿಶೀಲಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗೆ ಸೂಚನೆ ನೀಡಿದರು.
ಬೇಸಿಗೆ ಇದ್ದರೂ ಅನಿರೀಕ್ಷಿತವಾಗಿ ಮಳೆ ಬರಬಹುದು. ಗುಡುಗು, ಮಿಂಚು, ಸಿಡಿಲು ಗಾಳಿಯಿಂದ ಮರಗಳು, ವಿದ್ಯುತ್ ಕಂಬಗಳು ಬಿದ್ದು ಅನಾಹುತ ಸಂಭವಿಸಬಹುದು. ಮುಂಜಾಗ್ರತಾ ಕ್ರಮಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.ಆಲಿಕಲ್ಲು ಮಳೆ ಬಂದು ಬೆಳೆ ನಷ್ಟವಾದರೆ ತಕ್ಷಣ ನಷ್ಟವಾಗಿರುವ ಬಗ್ಗೆ ತಹಸೀಲ್ದಾರ್ ವರದಿ ನೀಡುವಂತೆ ಸೂಚಿಸಿದರು.
ಬಿಸಿಲ ತಾಪ ಹೆಚ್ಚು ಇರುವ ಸಂದರ್ಭದಲ್ಲಿ ಸಾರ್ವಜನಿಕರು ಏನೇನು ಕ್ರಮವಹಿಸಬೇಕು ಎಂಬುದರ ಬಗ್ಗೆ ತಿಳಿವಳಿಕೆ ಮೂಡಿಸಲು ಐಇಸಿ ಚಟುವಟಿಕೆಗಳನ್ನು ಹೆಚ್ಚು ಮಾಡುವಂತೆ ತಿಳಿಸಿದರು.
ಬಿತ್ತನೆ ಬೀಜ, ರಸಗೊಬ್ಬರ, ರಾಸುಗಳಿಗೆ ಮೇವಿನ ಕೊರತೆ ಆಗದಂತೆ ನಿಗಾವಹಿಸಿ ಪ್ರತಿವಾರ ನಡೆಯುವ ಟಾಸ್ಕ್ ಫೋರ್ಸ್ ಸಮಿತಿಯಲ್ಲಿ ತಹಸೀಲ್ದಾರ್ ಗಮನಹರಿಸಿ ಎಂದು ತಿಳಿಸಿದರು.
ರಾಗಿ ಖರೀದಿ ಕೇಂದ್ರಗಳಿಗೆ ಹೊರಗಿನಿಂದ ರಾಗಿ ಬರದಂತೆ ತಡೆಯಲು ಚೆಕ್‌ಪೋಸ್ಟ್ ಹಾಕುವಂತೆ ಸೂಚಿಸಿದರಲ್ಲದೆ, ಅನಧಿಕೃತವಾಗಿ ರಸಗೊಬ್ಬರ ಸಾಗಣೆ ತಡೆಯಲು ಪೊಲೀಸ್, ಕೃಷಿ, ಕಮರ್ಶಿಯಲ್ ಟ್ಯಾಕ್ಸ್ ಅಧಿಕಾರಿಗಳನ್ನೊಳಗೊಂಡ ಒಂದು ತಂಡ ರಚಿಸಿ ಕ್ರಮವಹಿಸುವಂತೆ ತಿಳಿಸಿದರು.

ಸಾರ್ವಜನಿಕರ ರಕ್ಷಣೆ ಹಿತದೃಷ್ಟಿಯಿಂದ ಮಳೆ ಗಾಳಿಗೆ ಬೀಳುವ ಹಂತದಲ್ಲಿರುವ ರಸ್ತೆ ಬದಿಯ ಮರಗಳ ಕೊಂಬೆಗಳನ್ನು ಕತ್ತರಿಸುವುದು, ದುಸ್ಥಿತಿಯಲ್ಲಿರುವ ವಿದ್ಯುತ್ ಕಂಬಗಳು, ಟ್ರಾನ್ಸ್ ಫಾರ್ಮ್‌ರ್‌ಗಳ ಬದಲಾವಣೆಗೆ ಕ್ರಮ ಕೈಗೊಳ್ಳುವಂತೆ ತಿಳಿಸಿದರು.
ಅಧಿಕಾರಿಗಳ ತಮ್ಮ ಹಂತದಲ್ಲಿ ಪರಿಹಾರ ಮಾಡಲು ಸಾಧ್ಯವಾಗದಿರುವ ಸಮಸ್ಯೆಗಳ ಬಗ್ಗೆ ಸರ್ಕಾರದ ಗಮನಕ್ಕೆ ತರಬೇಕು. ಈ ನಿಟ್ಟಿನಲ್ಲಿ ಅಧಿಕಾರಿಗಳು ಗಮನಹರಿಸಿ ಎಂದು ತಿಳಿಸಿದರು.
ಹಾಸನ ಜಿಲ್ಲೆಯನ್ನು ಹಸೀರಿಕರಣ ಮಾಡುವ ನಿಟ್ಟಿನಲ್ಲಿ 5 ಲಕ್ಷ ಗಿಡಗಳನ್ನು ನೆಡಲು ನಿರ್ಧರಿಸಲಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲ ಸರ್ಕಾರಿ ಕಚೇರಿಗಳ ಆವರಣ, ಶಾಲಾ, ಕಾಲೇಜು, ಹಾಸ್ಟೆಲ್ ಆವರಣದಲ್ಲಿ ಗಿಡಗಳನ್ನು ನೆಟ್ಟು ಪೋಷಣೆ ಮಾಡಲು ಕ್ರಮವಹಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಕಸವನ್ನು ಎಲ್ಲೆಂದರಲ್ಲಿ ಹಾಕುವುದರ ಜತೆಗೆ ರಸ್ತೆಯ ಅಕ್ಕಪಕ್ಕದಲ್ಲಿ ಕಸಹಾಕಿ ತಿಪ್ಪೆ ನಿರ್ಮಾಣ ಮಾಡುತ್ತಿದ್ದಾರೆ. ಅಂತವರನ್ನು ಗುರುತಿಸಿ ದಂಡ ವಿಧಿಸಿ ಸ್ವಚ್ಛ ಹಾಸನ ಜಿಲ್ಲೆ ನಿರ್ಮಾಣಕ್ಕೆ ಕ್ರಮವಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಗ್ರಾಮೀಣ ಪ್ರದೇಶದಲ್ಲಿ ಒಣ ಕಸವನ್ನು ವಾರಕ್ಕೆ ಒಮ್ಮೆ ಸಂಗ್ರಹ ಮಾಡುವಂತೆ ಹಾಗೂ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಶಾಲಾ ಆಸ್ತಿಯನ್ನು ಖಾತೆ ಮಾಡಲು ಕ್ರಮವಹಿಸುವಂತೆ ಕಾರ್ಯನಿರ್ವಾಹಕ ಅಧಿಕಾರಿಗಳು ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ಅಪರ ಜಿಲ್ಲಾಧಿಕಾರಿ ಜಗದೀಶ್ ಗಂಗಣ್ಣನವರ್, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಕೃಷ್ಣ ಮೂರ್ತಿ, ಬಾಬು ಹಾಗೂ ಉಪ ವಿಭಾಗಾಧಿಕಾರಿ ಹುಲ್ಲುಮನಿ ತಿಮ್ಮಣ್ಣ, ತಹಸೀಲ್ದಾರ್‌ಗಳು ಇದ್ದರು.

ಇನ್ನಷ್ಟು ಓದಿ
Dailyhunt
Disclaimer: This content has not been generated, created or edited by Dailyhunt. Publisher: Vijayvani