ಬೆಂಗಳೂರು: ವಾಲ್ಮೀಕಿ ನಿಗಮ ಹಗರಣದಲ್ಲಿ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಪಕ್ಷಕ್ಕೆ ಮುಜುಗರ ಆಗಬಾರದು ಎಂದು ರಾಜೀನಾಮೆ ನೀಡುತ್ತಿರುವುದಾಗಿ ಸಚಿವ ಬಿ.ನಾಗೇಂದ್ರ (B Nagendra Resignation) ಹೇಳಿದ್ದರು. ಇದೀಗ ಅವರು ಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿ ಯೋಜನೆ ಮತ್ತು ಸಾಂಖ್ಯಿಕ ಸಚಿವ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.
ಸಿಎಂ ಗೃಹ ಕಚೇರಿ ಕೃಷ್ಣಾಗೆ ಬಿ.ನಾಗೇಂದ್ರ ತೆರಳಿ ರಾಜೀನಾಮೆ ಸಲ್ಲಿಸಿದ್ದಾರೆ. ದೆಹಲಿಯಿಂದ ಆಗಮಿಸಿದ ಬಳಿಕ ಶುಕ್ರವಾರ ಸಂಜೆ ವಿಧಾನಸೌಧದಲ್ಲಿ ಅವರು ಸುದ್ದಿಗೋಷ್ಠಿ ನಡೆಸಿ, ಯೋಜನೆ ಹಾಗೂ ಸಾಂಖ್ಯಿಕ ಸಚಿವ ಸ್ಥಾನಕ್ಕೆ ರಾಜೀನಾಮೆ ನಿರ್ಧಾರ ಘೋಷಿಸಿದ್ದರು. ಬಳಿಕ ಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ರಾಜೀನಾಮೆ ಪತ್ರವನ್ನು ರಾಜ್ಯಪಾಲರಿಗೆ ಸಿಎಂ ರವಾನಿಸಲಿದ್ದಾರೆ.
ಆರ್ಎಸ್ಎಸ್ ಮೆರವಣಿಗೆಯಲ್ಲಿ ಭಾಗವಹಿಸಿದ ಶಿಕ್ಷಕರ ಅಮಾನತು: ರಾಜ್ಯ ಸರ್ಕಾರದ ವಿರುದ್ಧ ಪ್ರಲ್ಹಾದ್ ಜೋಶಿ ವಾಗ್ದಾಳಿ
ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳು ಸದನದಲ್ಲಿ ನಡೆಸಿದ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿತ್ತು. ಈ ಹಿನ್ನೆಲೆಯಲ್ಲಿ ಸದನದ ಕಲಾಪಕ್ಕೂ ಅಡ್ಡಿಯುಂಟಾಗಿತ್ತು. ಅಷ್ಟೇ ಅಲ್ಲದೆ ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಪಾದಯಾತ್ರೆ ಮಾಡುವುದಾಗಿ ಬಿಜೆಪಿ ಘೋಷಿಸಿತ್ತು. ಸೆ.1ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿವರೆಗೆ ಪಾದಯಾತ್ರೆ ನಡೆಸುವುದಾಗಿ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈವಿಜಯೇಂದ್ರ ತಿಳಿಸಿದ್ದರು. ಈ ನಡುವೆ ಸಚಿವ ಸ್ಥಾನಕ್ಕೆ ನಾಗೇಂದ್ರ ಅವರು ರಾಜೀನಾಮೆ ನೀಡಿದ್ದಾರೆ.
ಪಕ್ಷದ ವರಿಷ್ಠರಿಗೆ ಮುಜುಗರ ಆಗಬಾರದು ಎಂದು ರಾಜೀನಾಮೆ
ನವದೆಹಲಿಯಿಂದ ಬೆಂಗಳೂರಿಗೆ ಶುಕ್ರವಾರ ಸಂಜೆ ಬಂದ ಬಳಿಕ ವಿಧಾನಸೌಧದಲ್ಲಿ ಅವರು ರಾಜೀನಾಮೆ ಘೋಷಿಸಿದರು. ನಮ್ಮ ಪಕ್ಷದ ವರಿಷ್ಠರಿಗೆ ಮುಜುಗರ ಆಗಬಾರದು ಎಂದು ನನ್ನ ಸ್ವ ಇಚ್ಛೆಯಿಂದ ಯೋಜನೆ ಮತ್ತು ಸಾಂಖ್ಯಿಕ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ಶಾಸಕ ಬಿ.ನಾಗೇಂದ್ರ ಹೇಳಿದರು.
ರಾಜೀನಾಮೆ ಘೋಷಿಸಿದ ವೇಳೆ ಭಾವುಕರಾಗಿ ಕಣ್ಣೀರಿಟ್ಟ ಬಿ.ನಾಗೇಂದ್ರ ಅವರು, ಇದೇ ವೇಳೆ ವಿಪಕ್ಷಗಳ ವಿರುದ್ಧ ಹರಿಹಾಯ್ದಿರು. ನನಗೆ ನೈತಿಕವಾಗಿ ಬೆಂಬಲಿಸಿದವರಿಗೆ ಧನ್ಯವಾದ ಹೇಳುವೆ. ವಿಪಕ್ಷದವರು ವಾಲ್ಮೀಕಿ ನಿಗಮದಲ್ಲಿ ಹಗರಣ ಆಗಿದೆ ಎಂದು ಸುಳ್ಳು ಆರೋಪ ಮಾಡಿದ್ದಾರೆ. ಆಧಾರ ಇಲ್ಲದ ವಿಷಯ ಇಟ್ಟುಕೊಂಡು ನನ್ನ ವಿರುದ್ಧ ಷಡ್ಯಂತ್ರ ನಡೆಸಿದ್ದಾರೆ ಎಂದು ಕಿಡಿಕಾರಿದರು.

